ಅದಕ್ಕೆ ಪ್ರತಿಕ್ರಿಯಿಸಿದ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ‘ನಿರ್ದಿಷ್ಟವಾಗಿ ಯಾರ ಮೇಲಾದರೂ ದೂರುಗಳಿದ್ದರೆ ಉತ್ತರ ನೀಡಲು ಸರ್ಕಾರ ಸಿದ್ಧವಿದೆ. ಅದನ್ನು ಬಿಟ್ಟು ಯಾರೋ, ಏನೋ ಹೇಳಿದರು ಎಂದು ಇಲ್ಲಿ ಚರ್ಚೆ ಮಾಡಲು ಅವಕಾಶ ಇಲ್ಲ. ನಿನ್ನೆ ಸದನ ಮುಗಿದು ಇವತ್ತು ಸದನ ಶುರುವಾಗುವ ಮೊದಲು ಆದ ಘಟನೆಗಳ ಬಗ್ಗೆ ಮಾತ್ರ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಬೇಕು. ಆದರೆ, ಮಾಧ್ಯಮಗಳ ವರದಿ ಆಧರಿಸಿ ಆರೋಪ ಮಾಡುತ್ತಿದ್ದಾರೆ. ರಾಥೋಡ್ ನನ್ನ ಬಳಿ ₹ 50 ಸಾವಿರ ಕೇಳಿದ್ದಾರೆಂದು ನಾನು ಹೇಳಿದರೆ ಅದನ್ನೂ ಇಲ್ಲಿ ಪ್ರಸ್ತಾಪಿಸಲು ಸಾಧ್ಯವೇ? ಇಂಥದ್ದಕ್ಕೆಲ್ಲ ಸಭಾಪತಿ ಅವಕಾಶ ನೀಡಬಾರದು’ ಎಂದು ಆಕ್ಷೇಪ ವ್ಯಕ್ತಪಡಿಸಿದರು.