ವಿಧಾನಸಭೆಯಲ್ಲಿ ಬುಧವಾರ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ನ ಎಚ್.ಕೆ.ಪಾಟೀಲ ವಿಷಯ ಪ್ರಸ್ತಾಪಿಸಿದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿಯ ಬಿ.ಎಸ್.ಯಡಿಯೂರಪ್ಪ ಅವರು ತಮಿಳುನಾಡಿನ ಧೋರಣೆಯನ್ನು ಕಟುವಾಗಿ ಟೀಕಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ನಾಡಿನ ನೆಲ, ಜಲ, ಭಾಷೆ ಮತ್ತು ಗಡಿ ವಿಚಾರದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಒಂದು. ವಿಧಾನಸಭೆಯಲ್ಲಿ ಒಮ್ಮತದ ನಿರ್ಣಯ ತೆಗೆದುಕೊಳ್ಳುವ ಮೊದಲು ಕಾನೂನು ತಜ್ಞರ ಜತೆ ಮಾತುಕತೆ ನಡೆಸುತ್ತೇನೆ. ನಾಳೆಯೇ ನಿರ್ಣಯ ಮಂಡಿಸುತ್ತೇನೆ’ ಎಂದರು.