ಬೆಂಗಳೂರು: ‘ಇಡೀ ರಾಜ್ಯ ಅತಿ ವೃಷ್ಟಿಯಿಂದ ತತ್ತರಿಸಿ ಹೋಗಿದೆ. ಆದರೆ, ರಾಜ್ಯ ಬಿಜೆಪಿ ಸರ್ಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯದ ರೊಟ್ಟಿ ಬಡಿಯುತ್ತಾ ಕೂತಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
‘ಪ್ರಜಾವಾಣಿ’ಯ ಬುಧವಾರದ ಸಂಚಿಕೆಯಲ್ಲಿ ಪ್ರಕಟಗೊಂಡ ‘ಕೃಷ್ಣೆಯ ಅಬ್ಬರ; ಜನರ ಸ್ಥಳಾಂತರ’ ಸುದ್ದಿಯನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ಅವರು, ‘ನೊಂದ ಜನರ ಗೋಳು ಅರಣ್ಯರೋದನ. ಅತಿವೃಷ್ಟಿಯ ಪರಿಹಾರದಲ್ಲಿ ಕಳೆದ ವರ್ಷದ ವೈಫಲ್ಯ ಈ ಬಾರಿ ಜನರ ಕಷ್ಟ-ಕಾರ್ಪಣ್ಯಗಳನ್ನು ದುಪ್ಪಟ್ಟುಗೊಳಿಸಿದೆ’ ಎಂದಿದ್ದಾರೆ.
‘ಗೃಹ ಸಚಿವರು ಅತಿವೃಷ್ಟಿ ಸಮೀಕ್ಷೆಗೆ ಪ್ರವಾಸ ಮಾಡುತ್ತಿದ್ದಾರೆ. ಕಂದಾಯ ಸಚಿವರು ಬೆಂಗಳೂರಿನಲ್ಲಿ ಕೂತು ಕಾವಲಭೈರಸಂದ್ರ ಗಲಭೆ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ. ಕಂದಾಯ ಸಚಿವರಿಗೆ ಬೆಂಗಳೂರಿನಲ್ಲೇನು ಕೆಲಸ ಮುಖ್ಯಮಂತ್ರಿಯವರೇ? ಮೊದಲು ಅವರನ್ನು ಪ್ರವಾಹಪೀಡಿತ ಪ್ರದೇಶಕ್ಕೆ ಕಳಿಸಿಕೊಡಿ’ ಎಂದೂ ಹೇಳಿದ್ದಾರೆ.
‘ನನ್ನ ಕ್ಷೇತ್ರವಾದ ಬಾದಾಮಿಯ ಜನ ಪ್ರವಾಹದಿಂದಾಗಿ ಸಂಕಷ್ಟದಲ್ಲಿದ್ದಾರೆ. ಕೊರೊನಾ ಸೋಂಕಿನ ನಂತರ ಕಡ್ಡಾಯ ವಿಶ್ರಾಂತಿಯಲ್ಲಿರುವುದರಿಂದ ಕ್ಷೇತ್ರಕ್ಕೆ ಭೇಟಿ ನೀಡುವ ಸ್ಥಿತಿಯಲ್ಲಿ ನಾನಿಲ್ಲ. ಇದಕ್ಕಾಗಿ ಕ್ಷಮೆ ಇರಲಿ. ಅಧಿಕಾರಿಗಳು ಮತ್ತು ನಮ್ಮ ಪಕ್ಷದ ನಾಯಕರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ’ ಎಂದೂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.