ಚಿತ್ರದುರ್ಗ: ‘ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಇಡೀ ವಿಶ್ವವೇ ಒಪ್ಪಿಕೊಂಡಿದೆ. ಅಂತಹ ನಾಯಕರ ಬಗ್ಗೆ ಕಾಂಗ್ರೆಸ್ ಬಳಕೆ ಮಾಡಿದ ಶಬ್ದಗಳು ಆ ಪಕ್ಷದ ಯೋಗ್ಯತೆಯನ್ನು ತೋರಿಸುತ್ತದೆ. ಅವಹೇಳನಕಾರಿ ಪದ ಬಳಕೆ ಮಾಡಿದ ಕಾಂಗ್ರೆಸ್ ದೇಶದ ಜನರ ಕ್ಷಮೆ ಕೇಳಬೇಕು’ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಒತ್ತಾಯಿಸಿದರು.
‘ಹೆಬ್ಬೆಟ್ ಗಿರಾಕಿ ಮೋದಿ’ ಎಂಬ ಕೆಪಿಸಿಸಿ ಟ್ವೀಟ್ಗೆ ಪ್ರತಿಕ್ರಿಯೆ ನೀಡಿದ ಅವರು, ‘ಹಗುರವಾಗಿ ಮಾತನಾಡುತ್ತ ಕಾಂಗ್ರೆಸ್ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ. ದೇಶದಲ್ಲಿ ಮುಳುಗುತ್ತಿರುವ ಹಡಗಿನಂತೆ ಕಾಣುತ್ತಿರುವ ಕಾಂಗ್ರೆಸ್ ಕರ್ನಾಟಕದಲ್ಲಿ ಮಾತ್ರ ಚೂರು ಉಳಿದುಕೊಂಡಿದೆ. ಇನ್ನು ಮುಂದೆ ಈ ಅಸ್ತಿತ್ವವೂ ಇರುವುದಿಲ್ಲ’ ಎಂದರು.
‘ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟ ತಾರಕಕ್ಕೆ ಏರಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಡುವೆ ತಿಕ್ಕಾಟ ಶುರುವಾಗಿದೆ. ಈ ಸ್ಥಿತಿ
ಯ ಪ್ರಯೋಜನ ಪಡೆಯಲು ಬಿಜೆಪಿ ಇಷ್ಟಪಡುವುದಿಲ್ಲ. ಟೀಕೆಯ ಮೂಲಕ ಚುನಾವಣೆ ಎದುರಿಸುವ ಮನಃಸ್ಥಿತಿ ಬಿಜೆಪಿಗೆ ಇಲ್ಲ. ಸರ್ಕಾರದ ಸಾಧನೆಯನ್ನು ಮತದಾರರ ಮುಂದಿಡುತ್ತೇವೆ’ ಎಂದರು.
‘ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾಗಿರುವ ಪರಿಣಾಮ ಇಂಧನ ಬೆಲೆಯಲ್ಲಿ ವ್ಯತ್ಯಾಸವಾಗಿದೆ. ಇದು ದೇಶದ ಜನರಿಗೂ ಗೊತ್ತಿದೆ. ಇಂಧನ ಬೆಲೆ ಏರಿಕೆಯು ಉಪಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ. ರಾಜ್ಯ ಸರ್ಕಾರದ ಸಾಧನೆ ಹಾಗೂ ಪ್ರಧಾನಿ ಮೋದಿ ಅವರ ಕಾರ್ಯವನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.