ಕರಾವಳಿ, ಮಲೆನಾಡು ಭಾಗದಲ್ಲಿ ಮಳೆ

ಮಂಗಳೂರು: ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2 ಮನೆಗಳು ಪೂರ್ಣ ಹಾಗೂ 6 ಮನೆಗಳು ಭಾಗಶಃ ಹಾನಿಯಾಗಿವೆ. 46 ವಿದ್ಯುತ್ ಕಂಬಗಳು ಜಖಂಗೊಂಡಿವೆ.
ಸುಬ್ರಹ್ಮಣ್ಯ ಬಳಿ ಯಡಕುಮೇರಿಯಲ್ಲಿ ಶುಕ್ರವಾರ ರಾತ್ರಿ ರೈಲು ಹಳಿಗೆ ಬಂಡೆ ಉರುಳಿದ್ದು, ಅರ್ಧ ಗಂಟೆ ರೈಲು ಸಂಚಾರ ವಿಳಂಬವಾಗಿತ್ತು. ಕುಮಾರಧಾರ, ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ.
ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ, ಚಿಕ್ಕಮಗಳೂರು ಜಿಲ್ಲೆ ಮಲೆನಾಡು ಭಾಗದಲ್ಲಿ ಶನಿವಾರ ಸಾಧಾರಣ ಮಳೆಯಾಗಿದೆ. ಶೃಂಗೇರಿ ತಾಲ್ಲೂಕು ಬೆಟ್ಟಗೆರೆಯಲ್ಲಿ ಪ್ರಯಾಣಿಕರ ತಂಗುದಾಣ ಕುಸಿದಿದೆ. ತುಂಗಾ,ಭದ್ರಾ, ಹೇಮಾವತಿ ನದಿಗಳಲ್ಲಿ ಹರಿವು ಏರಿದೆ.
ಕಾರವಾರ ವರದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕಾರವಾರ ಸೇರಿ ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಯಿತು. ಅಂಕೋಲಾ, ಹೊನ್ನಾವರ, ಭಟ್ಕಳ, ಮುಂಡಗೋಡ, ಶಿರಸಿ ಭಾಗದಲ್ಲಿ ಮಳೆಯಾಗಿದೆ.
ಶಿವಮೊಗ್ಗ ವರದಿ: ಜಿಲ್ಲೆಯ ವಿವಿಧೆಡೆ ಶನಿವಾರ ಸಾಧಾರಣ ಮಳೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 14.27 ಮಿ.ಮೀ ಸರಾಸರಿ ಮಳೆಯಾಗಿದೆ.
ಕೊಡಗು ವರದಿ: ಜಿಲ್ಲೆಯ ಮಡಿಕೇರಿ, ನಾಪೋಕ್ಲು, ಕಕ್ಕಬ್ಬೆ, ಚೇರಂಬಾಣೆ, ಬಕ್ಕ, ಭಾಗಮಂಡಲ ಭಾಗದಲ್ಲಿ ಶನಿವಾರ ದಿನವಿಡೀ ಮಳೆಯಾಗಿದೆ. ನಿರಂತರ ಮಳೆಯಿಂದ ಮುಕ್ಕೋಡ್ಲು- ಹೆಮ್ಮೆತ್ತಾಳು ಸಣ್ಣ ಸೇತುವೆ ಕುಸಿದಿದೆ.
ಹಾಸನ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಮಳೆಯಾಗಿದೆ. ಮೈಸೂರು ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.