ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರಲ್ಲಿ ಮತ್ತೆ 463 ಮಂದಿ ಸಾವಿಗೀಡಾಗಿರುವುದು ದೃಢಪಟ್ಟಿದೆ. ಇದರಿಂದಾಗಿ ಈವರೆಗೆ ಕೋವಿಡ್ಗೆ ಮೃತಪಟ್ಟವರ ಒಟ್ಟು ಸಂಖ್ಯೆ 30 ಸಾವಿರ (30,017) ದಾಟಿದೆ.
ರಾಜ್ಯದಲ್ಲಿ ಕಳೆದ ವರ್ಷ ಮಾರ್ಚ್ 10ರಂದು ಮೊದಲ ಮರಣ ಪ್ರಕರಣ ವರದಿಯಾಗಿತ್ತು.
ಡಿಸೆಂಬರ್ ಅಂತ್ಯಕ್ಕೆ ಮರಣ ಪ್ರಮಾಣವು ಶೇ 0.94ರಷ್ಟಿತ್ತು. ಆ ವೇಳೆಗೆ 12,090 ಮಂದಿ ಮೃತಪಟ್ಟಿದ್ದರು.
ಎರಡನೇ ಅಲೆಯಲ್ಲಿ ಸೋಂಕಿತರ ಜತೆಗೆ ಕಾಯಿಲೆಯ ತೀವ್ರತೆಗೆ ಮೃತಪಡು ವವರ ಸಂಖ್ಯೆ ಕೂಡ ಹೆಚ್ಚಳವಾಗಿದೆ. ಈ ವರ್ಷ 5 ತಿಂಗಳಲ್ಲಿಯೇ 17 ಸಾವಿರಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ. ಸದ್ಯ ಮರಣ ಪ್ರಮಾಣ ದರ ಶೇ 2.82ರಷ್ಟಿದೆ.
ರಾಜ್ಯದಲ್ಲಿ 24 ಗಂಟೆಗಳ ಅವಧಿ ಯಲ್ಲಿ 16,387 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ. ಒಂದು ದಿನದ ಅವಧಿಯಲ್ಲಿ 1.45 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣವು ಶೇ 11.22ಕ್ಕೆ ಇಳಿಕೆಯಾಗಿದೆ. ಈವರೆಗೆ ಸೋಂಕಿತರಾದವರ ಒಟ್ಟು ಸಂಖ್ಯೆ 26.35 ಲಕ್ಷ ದಾಟಿದೆ.
ಕೋವಿಡ್ ಪೀಡಿತರಲ್ಲಿ ಮತ್ತೆ 21,199 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ ಚೇತರಿಕೆ ಹೊಂದಿದವರ ಸಂಖ್ಯೆ 23.12 ಲಕ್ಷ ದಾಟಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಕೆ ಕಂಡಿದ್ದು, 2.93 ಲಕ್ಷ ಸೋಂಕಿತರು ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಬೆಂಗಳೂರಿನಲ್ಲಿ ಮತ್ತೆ 307 ಮಂದಿ ಮೃತಪಟ್ಟಿದ್ದಾರೆ.
ಬೆಳಗಾವಿಯಲ್ಲಿ 17 ಮಂದಿ, ಹಾಸನ, ಬೆಂಗಳೂರು ಗ್ರಾಮಾಂತರ ಹಾಗೂ ಮೈಸೂರಿನಲ್ಲಿ ತಲಾ 12 ಮಂದಿ, ಶಿವಮೊಗ್ಗದಲ್ಲಿ 10 ಮಂದಿ, ಉತ್ತರ ಕನ್ನಡದಲ್ಲಿ 9 ಮಂದಿ, ಬಳ್ಳಾರಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ತಲಾ 8 ಮಂದಿ ಸಾವಿಗೀಡಾಗಿರುವುದು ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ.