ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಡಿಪಿಆರ್‌ಗೆ ₹ 269 ಕೋಟಿ ನಷ್ಟ: ನಿವೃತ್ತ ಸಿಎಸ್‌ ವಿರುದ್ಧ ತನಿಖೆಗೆ ಆದೇಶ

ಎಸಿಬಿಗೆ ಸಿಟಿ ಸಿವಿಲ್‌ ಕೋರ್ಟ್‌ ಸೂಚನೆ
Last Updated 25 ಏಪ್ರಿಲ್ 2022, 19:31 IST
ಅಕ್ಷರ ಗಾತ್ರ

ಬೆಂಗಳೂರು: ‘ಅಕ್ರಮವಾಗಿ ಬ್ಯಾಂಕ್‌ ಖಾತೆಗಳನ್ನು ತೆರೆದು ರಾಜ್ಯದ ಬೊಕ್ಕಸಕ್ಕೆ ₹269 ಕೋಟಿ ನಷ್ಟ ಉಂಟು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌, ಹಾಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ. ರಮಣ ರೆಡ್ಡಿ ಹಾಗೂ ನಿವೃತ್ತ ಐಎಎಸ್‌ ಅಧಿಕಾರಿ ಅಮಿತಾ ಪ್ರಸಾದ್‌ ಸೇರಿದಂತೆ ಒಟ್ಟು ಆರು ಜನ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ, ನಾಲ್ಕು ತಿಂಗಳಲ್ಲಿ ವರದಿ ಸಲ್ಲಿಸಿ’ ಎಂದು ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ಆದೇಶಿಸಿದೆ.

ಕೋಲಾರದ ಮಾಸ್ತಿ ಲೇಔಟ್‌ನ ಸಾಮಾಜಿಕ ಕಾರ್ಯಕರ್ತ ಎಸ್‌. ನಾರಾಯಣಸ್ವಾಮಿ ಸಲ್ಲಿಸಿರುವ ಖಾಸಗಿ ದೂರನ್ನು ಆಧರಿಸಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಲಕ್ಷ್ಮಿನಾರಾಯಣ ಭಟ್‌ ಈ ಆದೇಶ ನೀಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಲ್ಲಿ (ಆರ್‌ಡಿಪಿಆರ್‌) ಪ್ರಧಾನ ಕಾರ್ಯದರ್ಶಿಗಳಾಗಿದ್ದ ಮೂವರು ಐಎಎಸ್‌ ಅಧಿಕಾರಿಗಳು, ಇಲಾಖೆ ಹೆಚ್ಚುವರಿ ಕಾರ್ಯದರ್ಶಿಯಾಗಿದ್ದ ಡಾ.ಬೋರೇಗೌಡ, ಗ್ರಾಮೀಣ ನೀರು ಸರಬರಾಜು ವಿಭಾಗದ ಉಪ ಕಾರ್ಯದರ್ಶಿಯಾಗಿದ್ದ ರಾಮಕೃಷ್ಣ, ಅಂದಿನ ಸಿಂಡಿಕೇಟ್‌ ಬ್ಯಾಂಕ್‌ (ಈಗ ಕೆನರಾ ಬ್ಯಾಂಕ್‌ ಜೊತೆ ವಿಲೀನವಾಗಿದೆ) ಮ್ಯಾನೇಜರ್ ಸೀಲಂ ಗಿರಿ ವಿರುದ್ಧ ರಾಜ್ಯ ಬೊಕ್ಕಸದ ₹ 3405.21 ಕೋಟಿ ಮೊತ್ತವನ್ನು ದುರ್ಬಳಕೆ ಮಾಡಿಕೊಂಡ ಆರೋಪ ಹೊರಿಸಲಾಗಿದೆ.

‘ಆರೋಪಿತ ಅಧಿಕಾರಿಗಳು 2009–10ರಿಂದ 2014–15ರ ನಡುವೆ ಈ ಬೃಹತ್‌ ಮೊತ್ತವನ್ನು ದುರ್ವಿನಿಯೋಗ ಮಾಡಿಕೊಂಡಿದ್ದಾರೆ ಎಂದು ಲೆಕ್ಕ ಪರಿಶೋಧನಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆರು ಜನ ಆರೋಪಿಗಳು ಒಪ್ಪಂದಕ್ಕೆ ವಿರುದ್ಧವಾಗಿ ಆರು ಬ್ಯಾಂಕ್‌ ಖಾತೆಗಳನ್ನು ತೆರೆದಿದ್ದಾರೆ. ಅಂತೆಯೇ ಬ್ಯಾಂಕ್‌ ಮ್ಯಾನೇಜರ್‌ ಕೂಡಾ ಒಪ್ಪಂದದ ನಿಯಮಗಳಿಗೆ ವಿರುದ್ಧವಾಗಿ 98 ಖಾತೆಗಳನ್ನು ತೆರೆದಿದ್ದಾರೆ. ಈ ಮೂಲಕ ₹ 269 ಕೋಟಿ ಮೊತ್ತವನ್ನು ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆ’ ಎಂಬ ಸಾಕ್ಷಿಗಳ ಹೇಳಿಕೆ ಅನುಸಾರ ನ್ಯಾಯಾಧೀಶರು ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ. ದೂರುದಾರರ ಪರ ವಕೀಲ ಬಿ.ಎನ್‌.ಶ್ರೀನಿವಾಸ್ ವಾದ ಮಂಡಿಸಿದರು.

ದೂರು ದಾಖಲಿಸಿಕೊಳ್ಳದ ಎಸಿಬಿ

‘ಎಸಿಬಿಯ ಮಹಾನಿರ್ದೇಶಕರಿಗೆ 2019ರ ಡಿಸೆಂಬರ್‌ 26ರಂದು ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಫಿರ್ಯಾದುದಾರ ನಾರಾಯಣ ಸ್ವಾಮಿ ವಿಶೇಷ ನ್ಯಾಯಾಲಯದ ಮೆಟ್ಟಿಲೇರಿದ್ದರು.

ಇದೀಗ ವಿಶೇಷ ನ್ಯಾಯಾಲಯದ (ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ದಾಖಲಾ
ಗುವ ಪ್ರಕರಣದ ವಿಚಾರಣೆ) ನ್ಯಾಯಾಧೀಶ ಕೆ.ಲಕ್ಷ್ಮಿನಾರಾಯಣ ಭಟ್‌ ದೂರನ್ನು ಸಂಜ್ಞೇಯ ಅಪರಾಧ ಎಂದು ಪರಿಗಣಿಸಿದ್ದಾರೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆ–1988ರ ಕಲಂ 13(1), 13(2) ಮತ್ತು ಭಾರತೀಯ ದಂಡ ಸಂಹಿತೆಯ ಕಲಂ 465, 467, 468 ಮತ್ತು 471ರ ಅನುಸಾರ ತನಿಖೆಗೆ ನಿರ್ದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT