ನವದೆಹಲಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ವೈಯಕ್ತಿಕ ಕೆಲಸದ ಮೇಲೆ ಡಿ.1ರಿಂದ 8ರವರೆಗೆ ದುಬೈಗೆ ತೆರಳಲು ಇಲ್ಲಿನ ವಿಶೇಷ ನ್ಯಾಯಾಲಯ ಶನಿವಾರ ಅನುಮತಿ ನೀಡಿದೆ.
ಸಂಸದ/ಶಾಸಕರ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿಕಾಸ್ ಧುಲ್ ಅವರು ಡಿ.ಕೆ.ಶಿವಕುಮಾರ್ ವಿದೇಶಕ್ಕೆ ತೆರಳಲು ಷರತ್ತುಬದ್ಧ ಅನುಮತಿ ನೀಡಿದ್ದಾರೆ.
ಹಣ ಅಕ್ರಮ ವರ್ಗಾವಣೆ ಆರೋಪ ಎದುರಿಸುತ್ತಿರುವ ಶಿವಕುಮಾರ್ ಅವರು, ವಿದೇಶಕ್ಕೆ ತೆರಳಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಆಕ್ಷೇಪ ವ್ಯಕ್ತಪಡಿಸಿತ್ತು.
ಶಿವಕುಮಾರ್ ಅವರ ಸಫ್ದರ್ಜಂಗ್ ಅಪಾರ್ಟ್ಮೆಂಟ್ನಲ್ಲಿ 8.59 ಕೋಟಿ ನಗದು ವಶಕ್ಕೆ ಪಡೆದ ನಂತರ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಲಾಗಿದ್ದು, ಸದ್ಯ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.