ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update | ರಾಜ್ಯದಲ್ಲಿಂದು 21,794 ಹೊಸ ಪ್ರಕರಣ, 149 ಸಾವು

Last Updated 20 ಏಪ್ರಿಲ್ 2021, 17:57 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪೀಡಿತರ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದ್ದು, ಮಂಗಳವಾರ 21,794 ಮಂದಿ ಸೋಂಕಿತರಾಗಿರುವುದು ಹಾಗೂ 149 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ.

ರಾಜ್ಯದಲ್ಲಿ ಕೋವಿಡ್ ಕಾಣಿಸಿಕೊಂಡ ಬಳಿಕ 24 ಗಂಟೆಗಳ ಅವಧಿಯಲ್ಲಿ ವರದಿಯಾದ ಗರಿಷ್ಠ ಪ್ರಕರಣಗಳು ಇವಾಗಿವೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಕೋವಿಡ್ ವೇಗವಾಗಿ ವ್ಯಾಪಿಸಿಕೊಳ್ಳುತ್ತಿರುವ ಪರಿಣಾಮ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಲಾಗಿದೆ. ಒಂದು ದಿನದ ಅವಧಿಯಲ್ಲಿ 1.47 ಲಕ್ಷ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸೋಂಕು ದೃಢ ಪ್ರಮಾಣ ಶೇ 14.77ಕ್ಕೆ ಏರಿಕೆಯಾಗಿದೆ. ಮರಣ ಪ್ರಮಾಣ ದರ ಶೇ 0.68ಕ್ಕೆ ತಲುಪಿದೆ.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹೊಸದಾಗಿ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 23 ಜಿಲ್ಲೆಗಳಲ್ಲಿ ಮೂರಂಕಿ ತಲುಪಿದೆ. ಬೆಂಗಳೂರಿನಲ್ಲಿ 13,782 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ. ತುಮಕೂರಿನಲ್ಲಿ ಕೂಡ ಏರಿಕೆ ಕಂಡಿದ್ದು, ಅಲ್ಲಿ 1,055 ಮಂದಿ ಸೋಂಕಿತರಾಗಿದ್ದಾರೆ. ಕಲಬುರ್ಗಿ (818), ಮೈಸೂರು (699), ದಕ್ಷಿಣ ಕನ್ನಡ (482), ಹಾಸನ (410), ಬಳ್ಳಾರಿ (406) ಜಿಲ್ಲೆಯಲ್ಲಿಯೂ ಅಧಿಕ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಈವರೆಗೆ ಸೋಂಕಿತರಾದವರ ಸಂಖ್ಯೆ 12 ಲಕ್ಷ (11.98 ಲಕ್ಷ) ಸಮೀಪಿಸಿದೆ.

ಕೋವಿಡ್ ಪೀಡಿತರಲ್ಲಿ ಬೆಂಗಳೂರಿನಲ್ಲಿ 92 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರದಲ್ಲಿ 13 ಮಂದಿ, ಬೀದರ್‌ನಲ್ಲಿ ಏಳು ಮಂದಿ, ಬಳ್ಳಾರಿಯಲ್ಲಿ ಐವರು, ತುಮಕೂರು, ಮೈಸೂರು ಹಾಗೂ ಧಾರವಾಡದಲ್ಲಿ ತಲಾ ನಾಲ್ಕು ಮಂದಿ, ಶಿವಮೊಗ್ಗದಲ್ಲಿ ಇಬ್ಬರು, ಯಾದಗಿರಿ, ಉಡುಪಿ, ರಾಮನಗರ, ರಾಯಚೂರು, ಕೋಲಾರ, ಕೊಡಗು, ಚಿಕ್ಕಮಗಳೂರು ಹಾಗೂ ಚಾಮರಾಜನಗರದಲ್ಲಿ ತಲಾ ಒಬ್ಬರು ಮರಣ ಹೊಂದಿದ್ದಾರೆ. ಈವರೆಗೆ ಮೃತಪಟ್ಟವರ ಸಂಖ್ಯೆ 13,646ಕ್ಕೆ ಏರಿಕೆಯಾಗಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 1.59 ಲಕ್ಷ ದಾಟಿದೆ. ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಾಗುವವರ ಸಂಖ್ಯೆ ಕೂಡ ಏರಿಕೆ ಕಂಡಿದೆ. ಸದ್ಯ 751 ಮಂದಿ ಐಸಿಯುನಲ್ಲಿದ್ದಾರೆ. ಕೋವಿಡ್ ಪೀಡಿತರಲ್ಲಿ 4,571 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಗುಣಮುಖರಾದವರ ಸಂಖ್ಯೆ 10.25 ಲಕ್ಷಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT