ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಲಸಿಕೆ ಅಭಿಯಾನ ಪ್ರಾರಂಭವಾಗಿ ತಿಂಗಳು ಕಳೆದರೂ ಗುರುತಿಸಲಾದ ಫಲಾನುಭವಿಗಳಲ್ಲಿ ಅರ್ಧದಷ್ಟು ಮಂದಿ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಲೇ ಇದ್ದಾರೆ.
ಗುರುವಾರ ನಿಗದಿಪಡಿಸಲಾಗಿದ್ದ ಫಲಾನುಭವಿಗಳಲ್ಲಿ 15,786 ಮಂದಿ ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ. ಮೊದಲ ಹಾಗೂ ಎರಡನೇ ಡೋಸ್ ಲಸಿಕೆ ಪಡೆಯಲು 54,682 ಮಂದಿಯನ್ನು ಗುರುತಿಸಲಾಗಿತ್ತು. ಅವರಲ್ಲಿ ಶೇ 29ರಷ್ಟು ಮಂದಿ ಹಾಜರಾಗಿ ಲಸಿಕೆ ಪಡೆದುಕೊಂಡಿದ್ದಾರೆ. ಉಳಿದವರು ಹಿಂಜರಿಕೆ ಸೇರಿದಂತೆ ನಾನಾ ಕಾರಣಗಳಿಂದ ಗೈರಾಗಿದ್ದಾರೆ. ಲಸಿಕೆ ಪಡೆದವರಲ್ಲಿ ಯಾರಲ್ಲಿಯೂ ತೀವ್ರ ಮತ್ತು ಗಂಭೀರ ಸ್ವರೂಪದ ಅಡ್ಡ ಪರಿಣಾಮಗಳು ಕಾಣಿಸಿಕೊಂಡಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಲಸಿಕೆ ವಿತರಣೆ ಪ್ರಾರಂಭವಾದಾಗಿನಿಂದ ಈವರೆಗೆ ನಿಗದಿಪಡಿಸಲಾಗಿದ್ದ 8,21,939 ಆರೋಗ್ಯ ಕಾರ್ಯಕರ್ತರಲ್ಲಿ 4,17,124 ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ.
ಇದರಿಂದ ಶೇ 51ರಷ್ಟು ಗುರಿ ಸಾಧ್ಯವಾಗಿದೆ. ಇವರಲ್ಲಿ 62,149 ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ. 2,84,950 ಮುಂಚೂಣಿ ಯೋಧರನ್ನು ಈವರೆಗೆ ಲಸಿಕೆ ಪಡೆಯಲು ಗುರುತಿಸಲಾಗಿತ್ತು. ಅವರಲ್ಲಿ 1,03,933 ಮಂದಿ ಹಾಜರಾಗಿ ಲಸಿಕೆ ಪಡೆದುಕೊಂಡಿದ್ದಾರೆ. ಇದರಿಂದ ಶೇ 36ರಷ್ಟು ಗುರಿ ಸಾಧ್ಯವಾಗಿದೆ.
406 ಮಂದಿಗೆ ಸೋಂಕು: ರಾಜ್ಯದಲ್ಲಿ ಹೊಸದಾಗಿ 406 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಈವರೆಗೆ ಕೋವಿಡ್ ಪೀಡಿತರಾದವರ ಸಂಖ್ಯೆ 9.46 ಲಕ್ಷ ದಾಟಿದೆ.
ಸೋಂಕಿತರಲ್ಲಿ ಬೆಂಗಳೂರಿನಲ್ಲಿ ನಾಲ್ವರು ಹಾಗೂ ಧಾರವಾಡ, ತುಮಕೂರಿನಲ್ಲಿ ತಲಾ ಒಬ್ಬರು ಮೃತಪಟ್ಟಿರುವುದು ದೃಢಪಟ್ಟಿದೆ. ಈವರೆಗೆ ಸಾವಿಗೀಡಾದವರ ಸಂಖ್ಯೆ 12,282ಕ್ಕೆ ತಲುಪಿದೆ. ಕೋವಿಡ್ ಪೀಡಿತರಲ್ಲಿ ಮತ್ತೆ 306 ಮಂದಿ ಗುಣಮುಖರಾಗಿದ್ದಾರೆ. ಇದರಿಂದಾಗಿ ಕಾಯಿಲೆಯಿಂದ ಚೇತರಿಸಿಕೊಂಡವರ ಸಂಖ್ಯೆ 9.28 ಲಕ್ಷ ದಾಟಿದೆ.
5,792 ಸೋಂಕಿತರು ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರಲ್ಲಿ 125 ಮಂದಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇದ್ದಾರೆ.
ಬೆಂಗಳೂರಿನಲ್ಲಿ 256 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 4.03 ಲಕ್ಷ ದಾಟಿದೆ. ಮೈಸೂರಿನಲ್ಲಿ ಮತ್ತೆ 12 ಪ್ರಕರಣಗಳು ವರದಿಯಾಗಿದೆ. ಅಲ್ಲಿ ಸೋಂಕಿತರ ಸಂಖ್ಯೆ 53,834ಕ್ಕೆ ಏರಿಕೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.