ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 6,257 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 6,473 ಸೋಂಕಿತರು ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.
ಎರಡು ದಿನಗಳಿಂದ ಸೋಂಕಿತರಿಗಿಂತ ಚೇತರಿಸಿಕೊಳ್ಳುವವರ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದೆ.
ಒಂದು ವಾರದಲ್ಲಿ 42,781 ಮಂದಿ ಕೋವಿಡ್ ಪೀಡಿತರಾಗಿರುವುದು ಖಚಿತಪಟ್ಟಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 1.88 ಲಕ್ಷಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ 36,287 ಮಂದಿ ಗುಣಮುಖರಾಗಿದ್ದು, ಚೇತರಿಸಿಕೊಂಡವರ ಸಂಖ್ಯೆ ಲಕ್ಷದ ಗಡಿ ದಾಟಿದೆ.ಸೋಂಕಿತರಲ್ಲಿ 86 ಮಂದಿ ಮೃತಪಟ್ಟಿದ್ದಾರೆ. ಪರಿಣಾಮಒಟ್ಟು ಸಾವಿಗೀಡಾದವರ ಸಂಖ್ಯೆ 3,398ಕ್ಕೆ ತಲುಪಿದೆ.
ಸದ್ಯ 79 ಸಾವಿರಕ್ಕೂ ಅಧಿಕ ರೋಗಿಗಳು ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಬೆಂಗಳೂರಿನಲ್ಲಿ ಹೊಸದಾಗಿ 1,610 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಬಳ್ಳಾರಿಯಲ್ಲಿಕೂಡ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಅಲ್ಲಿ ಮತ್ತೆ 736 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಬೆಳಗಾವಿ (575), ಧಾರವಾಡ (276), ದಕ್ಷಿಣ ಕನ್ನಡ (243), ಮೈಸೂರು (238), ಉಡುಪಿ (219), ರಾಯಚೂರು (201), ಶಿವಮೊಗ್ಗ (189), ದಾವಣಗೆರೆ (172), ಕೊಪ್ಪಳ (169), ಕಲಬುರ್ಗಿ (156), ಹಾಸನ (146), ಮಂಡ್ಯ (141), ಬಾಗಲಕೋಟೆ (135)ಜಿಲ್ಲೆಯಲ್ಲಿಯೂ ಅಧಿಕ ಪ್ರಕರಣಗಳು ಹೊಸದಾಗಿ ವರದಿಯಾಗಿವೆ.
ಮಂಗಳವಾರ ದೃಢಪಟ್ಟ ಮರಣ ಪ್ರಕರಣಗಳಲ್ಲಿ 16 ಮಂದಿ 50 ವರ್ಷದ ಒಳಗಿನವರಾಗಿದ್ದಾರೆ. ಬೆಂಗಳೂರು (17), ಮೈಸೂರು (11), ಧಾರವಾಡ (9), ದಕ್ಷಿಣ ಕನ್ನಡ (9)ಜಿಲ್ಲೆಯಲ್ಲಿ ಅಧಿಕ ಮಂದಿ ಮೃತಪಟ್ಟಿದ್ದಾರೆ. ಸದ್ಯ ಸೋಂಕಿತರೊಂದಿಗೆ ನೇರ ಹಾಗೂ ಪರೋಕ್ಷ ಸಂಪರ್ಕ ಹೊಂದಿದ್ದ 3.32 ಲಕ್ಷ ಮಂದಿ ಮೇಲೆ ನಿಗಾ ಇರಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.