ಬೆಂಗಳೂರು: ಸ್ಥಳೀಯ ಪರಿಸ್ಥಿತಿಯನ್ನು ಆಧರಿಸಿ ಕೋವಿಡ್ ನಿಯಂತ್ರಣಕ್ಕೆ ಹೆಚ್ಚುವರಿ ನಿರ್ಬಂಧಗಳನ್ನು ವಿಧಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಿ ರಾಜ್ಯ ವಿಪತ್ತು ನಿರ್ವಹಣಾ ಕಾರ್ಯಕಾರಿ ಸಮಿತಿ ಶುಕ್ರವಾರ ಆದೇಶ ಹೊರಡಿಸಿದೆ.
ಕೋವಿಡ್ ಪ್ರಕರಣಗಳ ದೃಢ ಪ್ರಮಾಣ ದರ ಸೇರಿದಂತೆ ವಿವಿಧ ಅಂಶಗಳ ಆಧಾರದಲ್ಲಿ ಆಯಾ ಜಿಲ್ಲಾಧಿಕಾರಿಗಳು ಕೋವಿಡ್ ನಿಯಂತ್ರಣ ಕ್ರಮಗಳಲ್ಲಿ ಬದಲಾವಣೆ ಮಾಡಬಹುದು. ಅಗತ್ಯ ಕಂಡುಬಂದಲ್ಲಿ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಬಹುದು ಎಂದು ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಆದೇಶದಲ್ಲಿ ತಿಳಿಸಿದ್ದಾರೆ.
ಅಂತರ ರಾಜ್ಯ ಗಡಿಗಳಲ್ಲಿ ಕೂಡ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸುವ ನಿರ್ಧಾರವನ್ನೂ ಜಿಲ್ಲಾಧಿಕಾರಿಗಳೇ ಕೈಗೊಳ್ಳಬಹುದು ಎಂದು ತಿಳಿಸಿದ್ದಾರೆ.