ಚಿತ್ರದುರ್ಗ: ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಸಿ.ಡಿ. ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಈವರೆಗೆ ಯಾವುದೇ ನೋಟಿಸ್ ನೀಡಿಲ್ಲ ಎಂದು ಮಾಜಿ ಸಚಿವ ಡಿ.ಸುಧಾಕರ್ ತಿಳಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಕಾನೂನು ಗೌರವಿಸುತ್ತೇನೆ. ಎಸ್ಐಟಿ ಕರೆದರೆ ಖಂಡಿತ ವಿಚಾರಣೆಗೆ ಹಾಜರಾಗುತ್ತೇನೆ. ವಿಚಾರಣೆಗೆ ಬರುವಂತೆ ನೋಟಿಸ್ ನೀಡಿದರೆ ಮಾಧ್ಯಮಕ್ಕೆ ಮಾಹಿತಿ ನೀಡುತ್ತೇನೆ’ ಎಂದು ಹೇಳಿದರು.
‘ನನ್ನ ವಿರುದ್ಧ ಷಡ್ಯಂತ್ರ ನಡೆದಿದ್ದರೆ ಅದನ್ನು ಕಾಲವೇ ನಿರ್ಣಯಿಸಲಿದೆ. ಪ್ರಕರಣದಲ್ಲಿ ಹೆಸರು ತಳುಕು ಹಾಕಿಕೊಂಡಿದ್ದರಿಂದ ಸಂಕಟಪಡುತ್ತಿದ್ದೇನೆ. ದಯವಿಟ್ಟು ನನ್ನ ಪಾಡಿಗೆ ಬಿಟ್ಟುಬಿಡಿ’ ಎಂದು ಮನವಿ ಮಾಡಿದರು.