ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ರಕೃತಿ ವಿಕೋಪ ಸಂದರ್ಭದಲ್ಲೂ ರಾಜಕೀಯ’: ಅಶ್ವತ್ಥನಾರಾಯಣ ಆಕ್ರೋಶ

ವಿರೋಧ ಪಕ್ಷದ ವಿರುದ್ಧ ಉಪ ಮುಖ್ಯಮಂತ್ರಿ ಕಿಡಿ​
Last Updated 8 ಆಗಸ್ಟ್ 2020, 8:47 IST
ಅಕ್ಷರ ಗಾತ್ರ

ಬೆಂಗಳೂರು: 'ಅತಿವೃಷ್ಟಿ ಮತ್ತು ನೆರೆಯಂಥ ಪ್ರಕೃತಿ ವಿಕೋಪದ ಸಂದರ್ಭದಲ್ಲೂ ವಿರೋಧ ಪಕ್ಷದ ನಾಯಕರು ರಾಜಕೀಯ ಮಾಡುತ್ತಿರುವುದು ಸರಿಯಲ್ಲ. ಸರ್ಕಾರಕ್ಕೆ ರಚನಾತ್ಮಕವಾಗಿ ಸಲಹೆ ನೀಡುವುದು ಬಿಟ್ಟು ಕೇವಲ ರಾಜಕೀಯ ಮಾಡಿ ಕಾಲಹರಣ ಮಾಡುವುದು ಎಷ್ಟು ಸರಿ’ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣಪ್ರಶ್ನಿಸಿದರು.

ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರ ಪುಣ್ಯತಿಥಿ ಅಂಗವಾಗಿ ವಿಧಾನಸೌಧ ಬಳಿ ಅವರ ಪ್ರತಿಮೆಗೆ ಶನಿವಾರ ಗೌರವಾರ್ಪಣೆ ಮಾಡಿದ ಬಳಿಕ ಮಾತನಾಡಿ, ‘ಇಷ್ಟು ದಿನ ಕೋವಿಡ್ ಇಟ್ಟುಕೊಂಡು ಟೀಕಿಸಿದರು. ಈಗ ನೆರೆ-ಪ್ರವಾಹ ಸಿಕ್ಕಿದೆ. ಒಟ್ಟಿನಲ್ಲಿ ಯಾವುದಾದರೊಂದು ವಿಷಯ ಇಟ್ಟುಕೊಂಡು ಸರ್ಕಾರವನ್ನು ವಿರೋಧ ಮಾಡುವುದೇ ವಿರೋಧ ಪಕ್ಷದ ಕೆಲಸವಾಗಿದೆ’ ಎಂದು ಟೀಕಿಸಿದರು.

‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷ ರಚನಾತ್ಮಕವಾಗಿ ಕೆಲಸ ಮಾಡಬೇಕು. ತುರ್ತು ಸಂದರ್ಭಗಳಲ್ಲಿ ಸರ್ಕಾರಕ್ಕೆ ಹೆಗಲುಕೊಟ್ಟು ಕೆಲಸ ಮಾಡಬೇಕು. ಹೊಣೆಗಾರಿಕೆಯಿಂದ ಕೆಲಸ ಮಾಡಿ ಲೋಪವಿದ್ದರೆ ತೋರಿಸಬೇಕು’ ಎಂದರು.

‘ಕೋವಿಡ್ ನಂತರ ಬಂದಿರುವ ಪ್ರವಾಹ ಪರಿಸ್ಥಿತಿಯನ್ನು ಸರ್ಕಾರ ಸಮರ್ಥವಾಗಿ ಎದುರಿಸುತ್ತಿದೆ. ಅಪಾಯದ ಸ್ಥಳಗಳಿಂದ ಜನರನ್ನು ಸುರಕ್ಷಿತ ಜಾಗಗಳಿಗೆ ಸ್ಥಳಾಂತರ ಮಾಡಲಾಗುತ್ತಿದೆ. ಸಂತ್ರಸ್ಥರಿಗೆ ₹10 ಸಾವಿರ ಹಾಗೂ ಮನೆ ಕಳೆದುಕೊಂಡವರಿಗೆ ₹ 5 ಲಕ್ಷ ನೆರವು ನೀಡಲಾಗುವುದು. ಕಳೆದ ವರ್ಷ ಉತ್ತರ ಕರ್ನಾಟಕ ಪ್ರದೇಶದ ನೆರೆ ಸಂತ್ರಸ್ಥರಿಗೆ ನೆರವಾದ ರೀತಿಯಲ್ಲೇ ಸಹಾಯ ಹಸ್ತ ಚಾಚಲಾಗುವುದು. ಕೇಂದ್ರ ಸರ್ಕಾರಕ್ಕೂ ಮನವಿ ಸಲ್ಲಿಸಲಾಗುವುದು’ ಎಂದು ಅವರು ತಿಳಿಸಕಿದರು.

‘ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರು ಎಲ್ಲ ಪರಿಸ್ಥಿತಿಯನ್ನು ನೋಡಿಕೊಳ್ಳುತ್ತಿದ್ದಾರೆ. ಜಿಲ್ಲಾಡಳಿತಗಳು ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿವೆ. ಸಂಕಷ್ಟಕ್ಕೆ ತುತ್ತಾಗಿರುವ ಎಲ್ಲ ಜಿಲ್ಲೆಗಳಿಗೂ ಅಗತ್ಯ ಸಂಪನ್ಮೂಲಗಳನ್ನು, ಸಾಮಗ್ರಿಗಳನ್ನು ಒದಗಿಸಲಾಗಿದೆ. ಜತೆಗೆ, ವೈದ್ಯಕೀಯ ನೆರವು ನೀಡಲಾಗಿದೆ. ಎಷ್ಟು ರೀತಿಯಲ್ಲಿ ನೆರೆ ಸಂತ್ರಸ್ಥರಿಗೆ ನೆರವಾಗಬೇಕೋ ಅಷ್ಟೆಲ್ಲ ರೀತಿಯಲ್ಲಿ ಸಹಾಯ ಮಾಡಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

ಕೋವಿಡ್ ವಾರಿಯರ್ಸ್’ಗೆ ಕಿವಿಮಾತು:‘ರಾಜ್ಯವನ್ನು ತೀವ್ರವಾಗಿ ಕಾಡುತ್ತಿರುವ ವೈರಾಣುವನ್ನು ಹತ್ತಿಕ್ಕಲು ವೈದ್ಯಕೀಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವವರ ಪಾತ್ರ ದೊಡ್ಡದು. ಹೀಗಾಗಿ, ಕರ್ತವ್ಯಕ್ಕೆ ಗೈರು ಹಾಜರಾಗಿರುವವರು ಕೂಡಲೇ ಹಾಜರಾಗಬೇಕು. ರಾಜ್ಯವೇ ಸಂಕಷ್ಟದಲ್ಲಿರುವ ಹೊತ್ತಿನಲ್ಲಿ ಹೀಗೆ ಕರ್ತವ್ಯದಿಂದ ಪಲಾಯನ ಮಾಡುವುದು ಸರಿಯಲ್ಲ’ ಎಂದು ಉಪ ಮುಖ್ಯಮಂತ್ರಿ ಕಿವಿಮಾತು ಹೇಳಿದರು.

‘ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿರುವ ಪ್ರತಿಯೊಬ್ಬರೂ ತಮಗೆ ವಹಿಸಿರುವ ಕೆಲಸವನ್ನು ಮಾಡಲೇಬೇಕು. ಅವರಿಗೆ ಅಗತ್ಯವಾಗಿ ಬೇಕಿರುವ ಎಲ್ಲ ಸುರಕ್ಷತಾ ಸಾಧನಗಳನ್ನು ಈಗಾಗಲೇ ಸರ್ಕಾರ ಒದಗಿಸಿದೆ. ಜತೆಗೆ ಕೋವಿಡ್ ಭತ್ಯೆ, ವಿಮೆ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಸರ್ಕಾರದ ಕೆಲಸ ದೇವರ ಕೆಲಸ ಎನ್ನುವುದು ನಮ್ಮ ಧ್ಯೇಯವಾಕ್ಯ. ಇದಕ್ಕೆ ಮನ್ನಣೆ ಕೊಟ್ಟು ಗೈರಾದವರೆಲ್ಲರೂ ತಕ್ಷಣ ಕೆಲಸಕ್ಕೆ ಹಾಜರಾಗಬೇಕು. ತಪ್ಪಿದರೆ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಡಿಸಿಎಂ ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT