ಬೆಂಗಳೂರು: ‘ಯುವತಿಯನ್ನು ಪ್ರೀತಿಸಿ ಮದುವೆಯಾಗುತ್ತೇನೆ ಎಂದು ಭರವಸೆ ನೀಡಿ ನಂತರ ಆ ಭರವಸೆ ನಿರಾಕರಿಸುವುದು ಭಾರತೀಯ ದಂಡ ಸಂಹಿತೆ–1860 (ಐಪಿಸಿ) ಕಲಂ 420ರ ಅಡಿಯಲ್ಲಿ ವಂಚನೆಯಲ್ಲ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
‘ನನ್ನ ವಿರುದ್ಧ ಯುವತಿ ದಾಖಲಿಸಿರುವ ಎಫ್ಐಆರ್ ರದ್ದುಪಡಿಸಬೇಕು’ ಎಂದು ಕೋರಿ ಕೆ.ಆರ್ ಪುರ ನಿವಾಸಿ ವೆಂಕಟೇಶ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.
‘ಮದುವೆಯ ಭರವಸೆ ಮುರಿಯುವುದನ್ನು ಐಪಿಸಿ ಕಲಂ 415ರ ಅನುಸಾರ ವಂಚನೆ ವ್ಯಾಖ್ಯಾನದ ವ್ಯಾಪ್ತಿಗೆ ಸೇರಿಸಲಾಗದು. ಮೋಸ ಮಾಡುವ ಉದ್ದೇಶದಿಂದಲೇ ಒಪ್ಪಂದ ಮಾಡಿಕೊಂಡು ಬಳಿಕ ಅದನ್ನು ಉಲ್ಲಂಘಿಸಿದಾಗ ಮಾತ್ರ ಕ್ರಿಮಿನಲ್ ಪ್ರಕರಣ ದಾಖಲಿಸಬಹುದು’ ಎಂದು ನ್ಯಾಯಪೀಠ ಹೇಳಿದೆ.
‘ಅರ್ಜಿದಾರ ವ್ಯಕ್ತಿ ಮೋಸ ಮಾಡುವ ಉದ್ದೇಶದಿಂದಲೇ ಈ ರೀತಿ ವಂಚಿಸಿದ್ದಾನೆ ಎಂಬುದನ್ನು ನ್ಯಾಯಾಲಯಕ್ಕೆ ಮನದಟ್ಟು ಮಾಡುವಲ್ಲಿ ಯುವತಿ ವಿಫಲವಾಗಿದ್ದಾರೆ’ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಎಫ್ಐಆರ್ ರದ್ದುಪಡಿಸಿದೆ.