ಬೆಂಗಳೂರು: ‘ಪದವಿ ಕಾಲೇಜುಗಳ ಪ್ರವೇಶ ಪ್ರಕ್ರಿಯೆಯನ್ನು ಇದೇ 23 ರಿಂದ ಆರಂಭಿಸಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ತಿಳಿಸಿದರು.
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಕುರಿತು ವಿವಿಧ ಕುಲಪತಿಗಳ ಜತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ‘ನೂತನ ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆಯಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭಿಸಲಾಗುವುದು’ ಎಂದರು.
‘ಶಿಕ್ಷಣ ನೀತಿ ಜಾರಿಗೆ ಕೇಂದ್ರ ಸರ್ಕಾರ 15 ವರ್ಷ ಕಾಲಾವಕಾಶ ನೀಡಿದೆ. ಆದರೆ, ರಾಜ್ಯ ಸರಕಾರ ಹತ್ತೇ ವರ್ಷಗಳಲ್ಲಿ ಅನುಷ್ಠಾನಕ್ಕೆ ತರಲು ನಿರ್ಧರಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿ ಮಾಡುವುದಕ್ಕೆ ಆಗಸ್ಟ್ 7ರಂದೇ ಆದೇಶ ಹೊರಡಿಸಿ, ಮಾರ್ಗಸೂಚಿ ಪ್ರಕಟಿಸಲಾಗಿದೆ’ ಎಂದರು.
‘ಈ ನೀತಿಯಲ್ಲಿ ಮಾತೃಭಾಷೆಗೆ ಹೆಚ್ಚು ಒತ್ತು ನೀಡಲಾಗಿದೆ. ಮೊದಲಿಗಿಂತ ಹೆಚ್ಚು ವಿಸ್ತೃತವಾಗಿ ಕನ್ನಡವನ್ನು ಕಲಿಯುವ ಅವಕಾಶ ಕಲ್ಪಿಸಲಾಗಿದೆ. ಯಾವುದೇ ಕಾರಣಕ್ಕೂ ಕನ್ನಡವನ್ನು ಉಪೇಕ್ಷೆ ಮಾಡಿಲ್ಲ. ಎರಡು ವರ್ಷಗಳ ಕನ್ನಡ ಕಲಿಕೆ ಇತ್ತು. ಹಾಗೆ, ನೋಡಿದರೆ ಮೊದಲು ಕಡ್ಡಾಯ ಇರಲಿಲ್ಲ. ಈಗ ಕಡ್ಡಾಯ ಮಾಡಲಾಗಿದೆ’ ಎಂದೂ ಹೇಳಿದರು.
‘ಈ ನೀತಿಗೆ ಪೂರಕವಾಗಿ ಪದವಿ ಮತ್ತು ಸ್ನಾತಕೋತ್ತರ ಪದವಿಗಳ ವಿಷಯವಾರು ಮಾದರಿ ಪಠ್ಯಕ್ರಮ ಸಿದ್ಧಪಡಿಸಲು ವಿಷಯ ತಜ್ಞರ 32 ಸಮಿತಿ ರಚಿಸಲಾಗಿದೆ. ಸಮಿತಿಗಳ ವರದಿ ಆಧರಿಸಿ 31 ರೊಳಗೆ ಪಠ್ಯ ಸಿದ್ಧಪಡಿಸಲು ಸೂಚಿಸಲಾಗಿದೆ’ ಎಂದರು.
ಅನುದಾನಕ್ಕೆ ಬೇಡಿಕೆ: ‘ನೀತಿ ಜಾರಿ ಕಾರಣ ಇನ್ನಷ್ಟು ಅನುದಾನ ನೀಡುವಂತೆ ಮುಖ್ಯಮಂತ್ರಿಗೆ ಬೇಡಿಕೆ ಇಡುತ್ತೇವೆ. ಉನ್ನತ ಶಿಕ್ಷಣ ಸುಧಾರಣೆಗೆ ಕನಿಷ್ಠ 3 ಸಾವಿರ ಕೋಟಿ ಬೇಕು. ವರ್ಷಕ್ಕೊಂದು ಸಾವಿರ ಕೋಟಿ ಕೊಟ್ಟರೆ ಒಳ್ಳೆಯದು’ ಎಂದರು.