ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರಿನಲ್ಲಿ ಡೆಲ್ಟಾ ಪ್ಲಸ್‌ ಪತ್ತೆ, ವೈರಾಣು ಪತ್ತೆಗೆ 6 ಪ್ರಯೋಗಾಲಯ: ಸುಧಾಕರ್

ಅಕ್ಷರ ಗಾತ್ರ

ಬೆಂಗಳೂರು: ಡೆಲ್ಟಾ ಪ್ಲಸ್‌ ವೈರಾಣುವಿನ ಪತ್ತೆಗಾಗಿ ಆರು ಪ್ರಯೋಗಾಲಯ ರೂಪಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಜಿನೋಮಿಕ್‌ ಸೀಕ್ವೆನ್ಸ್‌ನಿಂದ ರೂಪಾಂತರಗೊಂಡ ವೈರಾಣು ಪತ್ತೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ಡೆಲ್ಟಾ ಪ್ಲಸ್‌ ವೈರಾಣುವಿನ ಒಂದು ಪ್ರಕರಣ ಮೈಸೂರಿನಲ್ಲಿ ಕಂಡು ಬಂದಿದ್ದು, ರೋಗಿಯನ್ನು ಪ್ರತ್ಯೇಕಿಸಲಾಗಿದೆ ಎಂದು ಸುಧಾಕರ್‌ ತಿಳಿಸಿದರು.

18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಿ ನಂತರ ಕಾಲೇಜು ಆರಂಭಿಸುವ ಕುರಿತು ಪ್ರಾಥಮಿಕ ಶಿಕ್ಷಣ ಹಾಗೂ ಉನ್ನತ ಶಿಕ್ಷಣ ಸಚಿವರೊಂದಿಗೆ ಚರ್ಚಿಸಲಾಗುವುದು. ಕಾಲೇಜು ಆರಂಭದ ವಿಚಾರದಲ್ಲಿ ಯಾವುದೇ ಗೊಂದಲ ಬೇಡ. ಕಾಲೇಜು ವಿದ್ಯಾರ್ಥಿಗಳೆಲ್ಲರಿಗೂ ಲಸಿಕೆ ನೀಡಿದ ಬಳಿಕ ಕಾಲೇಜು ಆರಂಭಿಸಬಹುದು ಎಂದು ತಾಂತ್ರಿಕ ಸಲಹಾ ಸಮಿತಿಯು ಮುಖ್ಯಮಂತ್ರಿಗಳ ಸಭೆಯಲ್ಲಿ ಸಲಹೆ ನೀಡಿತ್ತು. ಈ ಬಗ್ಗೆ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಮತ್ತೆ ಚರ್ಚಿಸಲಾಗುವುದು ಎಂದು ಹೇಳಿದರು.

ವಿದ್ಯಾರ್ಥಿಗಳ ಕ್ಷೇಮ ಸರ್ಕಾರದ ಮೊದಲ ಆದ್ಯತೆಯಾಗಿದೆ. ಆದ್ದರಿಂದ ಲಸಿಕೆ ಕೊಟ್ಟೇ ಕಾಲೇಜು ಆರಂಭಿಸಬೇಕೆಂದರೆ ಯಾವ ರೀತಿ, ಎಷ್ಟು ದಿನದೊಳಗೆ ಲಸಿಕಾ ಕಾರ್ಯಕ್ರಮ ಮಾಡಬೇಕೆಂದು ಚರ್ಚಿಸಲಾಗುವುದು ಎಂದರು.

ಮೊದಲು ಉನ್ನತ ಶಿಕ್ಷಣ, ನಂತರ ಪ್ರೌಢಶಾಲೆ ಆರಂಭಿಸಬೇಕಾಗುತ್ತದೆ. ಹೀಗೆ ಹಂತಹಂತವಾಗಿ ಆರಂಭಿಸಬೇಕಾಗುತ್ತದೆ. ಸಣ್ಣ ಮಕ್ಕಳಿಗೆ ಮೊದಲೇ ಶಾಲೆ ಆರಂಭಿಸಲಾಗುವುದಿಲ್ಲ. ಇದರಲ್ಲಿ ಸರ್ಕಾರದ ಜವಾಬ್ದಾರಿ ಹೆಚ್ಚಿದೆ ಎಂದರು.

ರಾಜ್ಯದಲ್ಲಿ 2 ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡಿದ್ದು, ದಕ್ಷಿಣ ಭಾರತದಲ್ಲೇ ರಾಜ್ಯ ನಂ.1 ಆಗಿದೆ. ಲಸಿಕೆ ಪಡೆದವರು ಸೋಂಕಿಗೊಳಗಾಗಿರುವುದು ತೀರಾ ಕಡಿಮೆ ಎಂದು ಸುಧಾಕರ್ ಹೇಳಿದರು.

ಸರ್ಕಾರಿ ಆಸ್ಪತ್ರೆಗಳಲ್ಲೇ ಹಾಸಿಗೆ ಖಾಲಿ ಇದೆ. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ ಅಲ್ಲದ ರೋಗಿಗಳು ಬಂದರೆ ಚಿಕಿತ್ಸೆ ನೀಡಲು ಸೂಚಿಸಲಾಗಿದೆ. 3 ನೇ ಅಲೆ ಬಂದರೆ ಆಗ ಮತ್ತೆ ಹಾಸಿಗೆ ಕೇಳಲಾಗುವುದು ಎಂದರು.

ಕೇಂದ್ರ ಸರ್ಕಾರ ಒಂದೇ ದಿನ 80 ಲಕ್ಷಕ್ಕೂ ಹೆಚ್ಚು ಜನರಿಗೆ ಲಸಿಕೆ ನೀಡಿರುವುದನ್ನು ಕಾಂಗ್ರೆಸ್ ಮುಖಂಡರು ಸ್ವಾಗತಿಸಬೇಕಿತ್ತು. ರಾಜಕೀಯದಲ್ಲಿ ಇಷ್ಟು ಕೆಳಮಟ್ಟಕ್ಕೆ ಇಳಿಯಬಾರದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT