ಬೆಂಗಳೂರು:ರಾಜ್ಯದಲ್ಲಿ ಡೆಂಗಿ ಪ್ರಕರಣಗಳು ಏರುಗತಿ ಪಡೆದುಕೊಂಡಿದ್ದು, ಮೂರು ತಿಂಗಳು ಕಳೆಯುವುದರೊಳಗೆ 907 ಪ್ರಕರಣಗಳು ವರದಿಯಾಗಿವೆ.
ಕಳೆದ ವರ್ಷ ಐದು ತಿಂಗಳಲ್ಲಿ ಇಷ್ಟು ಪ್ರಕರಣಗಳು ವರದಿಯಾಗಿದ್ದವು. ಈ ವರ್ಷ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಡೆಂಗಿ ಪ್ರಕರಣಗಳು ಪತ್ತೆಯಾಗಿವೆ.ಬಿಬಿಎಂಪಿ ವ್ಯಾಪ್ತಿಯಲ್ಲಿ 205 ಮಂದಿ ಡೆಂಗಿ ಜ್ವರಕ್ಕೆ ಒಳಗಾಗಿದ್ದಾರೆ. 20 ಜಿಲ್ಲೆಗಳಲ್ಲಿ ಈ ಸಂಖ್ಯೆ ಎರಡಂಕಿ ತಲುಪಿದೆ.
ಮೈಸೂರಿನಲ್ಲಿ 83,ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ತಲಾ 70, ಬಳ್ಳಾರಿಯಲ್ಲಿ 68, ಚಿತ್ರದುರ್ಗದಲ್ಲಿ 64, ಕೊಪ್ಪಳದಲ್ಲಿ 62 ಪ್ರಕರಣಗಳು ದೃಢಪಟ್ಟಿವೆ. ಉಳಿದ ಜಿಲ್ಲೆಗಳಲ್ಲಿ ಈ ಸಂಖ್ಯೆ 50ಕ್ಕಿಂತ ಕಡಿಮೆ ಇವೆ. ಯಾವುದೇ ಮರಣ ಪ್ರಕರಣ ವರದಿಯಾಗಿಲ್ಲ.2021ರಲ್ಲಿ 7,189 ಮಂದಿ ಡೆಂಗಿ ಪೀಡಿತರಾಗಿದ್ದರು. ಅವರಲ್ಲಿ ಐವರು ಮೃತಪಟ್ಟಿದ್ದರು.
ಕೊಡಗು, ಚಿಕ್ಕಮಗಳೂರು, ಹಾಸನ, ಮಂಡ್ಯ, ಚಾಮರಾಜನಗರ, ಬೀದರ್, ಕಲಬುರಗಿ ಹಾಗೂ ಉತ್ತರ ಕನ್ನಡದಲ್ಲಿ ಡೆಂಗಿ ನಿಯಂತ್ರಣದಲ್ಲಿದ್ದು, ಪ್ರಕರಣಗಳ ಸಂಖ್ಯೆ 10ಕ್ಕಿಂತ ಕಡಿಮೆಯಿವೆ.
22 ಜಿಲ್ಲೆಗಳಲ್ಲಿಚಿಕೂನ್ಗುನ್ಯಾ ಪ್ರಕರಣಗಳು ಪತ್ತೆಯಾಗಿದ್ದು,232 ಮಂದಿ ಈ ಜ್ವರಕ್ಕೆ ಒಳಗಾಗಿದ್ದಾರೆ. ಕೋಲಾರದಲ್ಲಿ 42, ವಿಜಯಪುರದಲ್ಲಿ 40, ತುಮಕೂರಿನಲ್ಲಿ 28, ಬೆಂಗಳೂರು ಗ್ರಾಮಾಂತರದಲ್ಲಿ 27, ಚಿತ್ರದುರ್ಗದಲ್ಲಿ 17 ಹಾಗೂ ದಾವಣಗೆರೆಯಲ್ಲಿ 14 ಪ್ರಕರಣಗಳು ವರದಿಯಾಗಿವೆ. ಉಳಿದ ಜಿಲ್ಲೆಗಳಲ್ಲಿ ಈ ಸಂಖ್ಯೆ 10ಕ್ಕಿಂತ ಕಡಿಮೆ ಇವೆ.
‘ಕಳೆದ ವರ್ಷ ಡೆಂಗಿ ಜ್ವರ ನಿಯಂತ್ರಣದಲ್ಲಿತ್ತು. ಈಗ ಕೆಲವರಲ್ಲಿ ಈ ಜ್ವರ ಕಾಣಿಸಿಕೊಳ್ಳುತ್ತಿದೆ.ಮನೆಯ ಸುತ್ತಮುತ್ತಲಿನ ಘನತ್ಯಾಜ್ಯ ವಸ್ತುಗಳಲ್ಲಿ ಸಂಗ್ರಹವಾಗುವ ನೀರಿನಿಂದ ಈಡಿಸ್ ಜಾತಿಯ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಆ ಸೊಳ್ಳೆಗಳ ಕಡಿತದಿಂದ ಡೆಂಗಿ ಜ್ವರ ಬರುತ್ತದೆ. ಅಕಾಲಿಕ ಮಳೆಯಿಂದ ಈ ಜ್ವರ ಹೆಚ್ಚುವ ಸಾಧ್ಯತೆ ಇದೆ. ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು’ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.