ವಿಜಯಪುರ: ಕರ್ನಾಟಕವನ್ನು ಶೀಘ್ರ ಡ್ರಗ್ಸ್ ಮುಕ್ತ ರಾಜ್ಯವನ್ನಾಗಿಸಲು ಪೊಲೀಸ್ ಇಲಾಖೆ ದಿಟ್ಟ ಕ್ರಮ ಕೈಗೊಂಡಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದರು.
ನಗರದಲ್ಲಿ ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಡ್ರಗ್ಸ್ ವಿರುದ್ಧದ ಕಾರ್ಯಾಚರಣೆ ಯಾವಾಗಲೂ ನಿಂತಿಲ್ಲ. ಈಗಾಗಲೇ ಅನೇಕ ಕಡೆ ದಾಳಿ ಮಾಡಲಾಗಿದೆ. ಇನ್ನೂ ಹಲವು ಕಡೆ ದಾಳಿ ನಡೆಯಲಿದೆ ಎಂದರು.
ರಾಜ್ಯದ ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದ ಗಡಿಗಳಲ್ಲಿ ಅಂತರರಾಜ್ಯಗಳಿಂದ ಬರುವ–ಹೋಗುವ ವಾಹನಗಳ ತಪಾಸಣೆ ಕಟ್ಟುನಿಟ್ಟಾಗಿ ಮಾಡಲಾಗುತ್ತಿದೆ. ಆಯಾ ಎಸ್ಪಿ, ಐಜಿಗಳಿಗೆ ಈ ಸಂಬಂಧ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
44 ಪೊಲೀಸರು ಸಾವು:ರಾಜ್ಯದಲ್ಲಿ ಇದುವರೆಗೆ 6 ಸಾವಿರ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಇದರಲ್ಲಿ 44 ಜನ ಸಾವಿಗೀಡಾಗಿದ್ದಾರೆ ಎಂದು ಹೇಳಿದರು.
ಕೋವಿಡ್ನಿಂದ ಸಾವಿಗೀಡಾದ ಎಲ್ಲರ ಕುಟುಂಬಕ್ಕೂ ಈಗಾಗಲೇ ತಲಾ ₹30 ಲಕ್ಷ ಪರಿಹಾರ ನೀಡಲಾಗಿದೆ. ಸಾವಿಗೀಡಾದವರ ಅವಲಂಭಿತರಿಗೆ ಸರ್ಕಾರಿ ನೌಕರಿ ನೀಡಲಾಗುವುದು ಎಂದು ಭರವಸೆ ನೀಡಿದರು.