ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಕೆಶಿ, ಸಿದ್ದರಾಮಯ್ಯ ದೆಹಲಿಗೆ

Last Updated 19 ಜುಲೈ 2021, 20:01 IST
ಅಕ್ಷರ ಗಾತ್ರ

ಬೆಂಗಳೂರು: ಕೆಪಿಸಿಸಿಗೆ ಪದಾಧಿಕಾರಿಗಳ ನೇಮಕ, ವಿವಿಧ ಸಮಿತಿಗಳ ರಚನೆ, ಪಕ್ಷ ಸಂಘಟನೆಗೆ ಒತ್ತು ಹಾಗೂ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಾಗಿರುವ ಕಾರ್ಯಕ್ರಮಗಳ ಕುರಿತು ಪಕ್ಷದ ವರಿಷ್ಠರ ಜತೆ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ಸಂಜೆ ದೆಹಲಿಗೆ ತೆರಳಿದರು.

ಇಬ್ಬರು ನಾಯಕರು ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ರಣದೀಪ್ ಸಿಂಗ್ ಸುರ್ಜೇವಾಲಾ, ಕೆ.ಸಿ. ವೇಣುಗೋಪಾಲ್ ಜತೆ ಮಂಗಳವಾರ (ಜುಲೈ 20) ಚರ್ಚೆ ನಡೆಸಲಿದ್ದಾರೆ.

ಇತ್ತೀಚೆಗೆ ದೆಹಲಿಗೆ ತೆರಳಿದ್ದ ಡಿ.ಕೆ. ಶಿವಕುಮಾರ್, ವರಿಷ್ಠರೊಂದಿಗೆ ಸಮಾಲೋಚಿಸಿ ವಾಪಸಾಗಿದ್ದರು. ಬಳಿಕ ಕೆಪಿಸಿಸಿ ವಿವಿಧ ಸಮಿತಿಗಳ ರಚನೆ ಸಂಬಂಧ ಪ್ರಕ್ರಿಯೆ ಆರಂಭಿಸಿದ್ದರು. ಪದಾಧಿಕಾರಿಗಳ ನೇಮಕ ವಿಚಾರದಲ್ಲಿ ಸಿದ್ದರಾಮಯ್ಯ ಅವರನ್ನೂ ವಿಶ್ವಾಸಕ್ಕೆ ಪಡೆಯಲು ಅವರು ಮುಂದಾಗಿದ್ದು, ಇಬ್ಬರ ಮಧ್ಯೆ ಒಮ್ಮತ ಮೂಡಿಸಿ, ಆಯ್ಕೆ ಮಾಡಲು ವರಿಷ್ಠರು ನಿರ್ಧರಿಸಿದ್ದಾರೆ.

‘ವರಿಷ್ಠರ ಜೊತೆಗಿನ ಚರ್ಚೆಯ ಸಂದರ್ಭದಲ್ಲಿ ಪಕ್ಷದ ಬಲವರ್ಧನೆ, ಒಳ ಬೇಗುದಿ ಶಮನ, ಕೆಪಿಸಿಸಿ ಸಮಿತಿ ಪದಾಧಿಕಾರಿಗಳ ಆಯ್ಕೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ಇದೇ ತಿಂಗಳ ಅಂತ್ಯದೊಳಗೆ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಲು ಹೈಕಮಾಂಡ್ ನಿರ್ಧರಿಸಿದೆ’ ಎಂದೂ ಪಕ್ಷದ ಮೂಲಗಳು ಹೇಳಿವೆ.

‘12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಧ್ಯಕ್ಷರನ್ನು ಬದಲಿಸುವ, ಮುಂಚೂಣಿ ಘಟಕಗಳಿಗೆ ಅಧ್ಯಕ್ಷರ ನೇಮಕ ಸಂಬಂಧವೂ ಸಮಾಲೋಚನೆ ನಡೆಯಲಿದೆ. ಅಲ್ಲದೆ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಘಟಕ, ಮಹಿಳಾ ಘಟಕ, ಸೇವಾದಳ ಅಧ್ಯಕ್ಷರನ್ನು ಬದಲಿಸಿ ಹೊಸಬರನ್ನು ನೇಮಿಸುವ ಬಗ್ಗೆ ಸಮಾಲೋಚನೆ ನಡೆಯಲಿದೆ. ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಜೊತೆ ಚರ್ಚಿಸಿ, ಇಬ್ಬರ ಒಮ್ಮತ ಬಳಿಕ ವಿವಿಧ ಘಟಕಗಳು ಮತ್ತು ಸಮಿತಿಗೆ ಪದಾಧಿಕಾರಿಗಳನ್ನು ನೇಮಿಸಿ ಹೈಕಮಾಂಡ್ ಅಂತಿಮ ಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ’ ಎಂದೂ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT