ನವದೆಹಲಿ: ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಐವರು ಆರೋಪಿಗಳ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆ ಇಲ್ಲಿನಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜುಲೈ 1ರಿಂದ ನಡೆಯಲಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಡಿ.ಕೆ. ಶಿವಕುಮಾರ್, ಪ್ರಕರಣದ ಇತರ ಆರೋಪಿಗಳಾದ ಸಚಿನ್ ನಾರಾಯಣ್, ಸುನೀಲ್ ಕುಮಾರ್ ಶರ್ಮಾ, ರಾಜೇಂದ್ರ ಹಾಗೂ ದೆಹಲಿ ಕರ್ನಾಟಕ ಭವನದ ನೌಕರ ಆಂಜನೇಯ ಹನುಮಂತಯ್ಯ ಅವರಿಗೆ ಮೇ ತಿಂಗಳಲ್ಲಿ ಸಮನ್ಸ್ ಜಾರಿ ಮಾಡಲಾಗಿತ್ತು.
ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ 2019ರ ಸೆಪ್ಟೆಂಬರ್ನಲ್ಲಿ ಬಂಧನಕ್ಕೆ ಒಳಗಾಗಿ ಜಾಮೀನು ಪಡೆದಿರುವ ಶಿವಕುಮಾರ್ ವಿರುದ್ಧ ಇ.ಡಿ. ಅಧಿಕಾರಿಗಳು ಮೇ ತಿಂಗಳಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ (ಚಾರ್ಜ್ಶೀಟ್) ಸಲ್ಲಿಸಿದ್ದರು.
2017ರಲ್ಲಿ ಶಿವಕುಮಾರ್ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿಮಾಡಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶೋಧ ನಡೆಸಿದ್ದರು. ಆಗ, ದೆಹಲಿಯ ವಿವಿಧ ಸ್ಥಳಗಳಲ್ಲಿ ₹ 8.59 ಕೋಟಿ ನಗದು ವಶಕ್ಕೆ ಪಡೆಯಲಾಗಿತ್ತು. ಈ ಕುರಿತು ಜಾರಿ ನಿರ್ದೇಶನಾಲಯ ತನಿಖೆ ನಡೆಸಿತ್ತು.