ಹಾವೇರಿ: ‘ಬಿ.ಎಸ್. ಯಡಿಯೂರಪ್ಪ ಇಂದು ಮೌನವಾಗಿದ್ದರೆ ಅಂದರೆ, ಅದನ್ನು ಯಾರಾದರೂ ದೌರ್ಬಲ್ಯ ಎಂದು ಭಾವಿಸಿದರೆ ಪಶ್ಚಾತ್ತಾಪ ಪಡಬೇಕಾಗುತ್ತದೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ವಿಜಯೇಂದ್ರ ಖಡಕ್ ಎಚ್ಚರಿಕೆ ನೀಡಿದರು.
ರಾಣೆಬೆನ್ನೂರು ನಗರದಲ್ಲಿ ಬುಧವಾರ ಆಯೋಜಿಸಿದ್ದ ಬಿಜೆಪಿ ಯುವ ಮೋರ್ಚಾ ಸಮಾವೇಶದಲ್ಲಿ ಅವರು ಮಾತನಾಡಿ, ಯಡಿಯೂರಪ್ಪನವರನ್ನು ಟೀಕೆ ಮಾಡುವ ಸಂದರ್ಭದಲ್ಲಿ ಎಚ್ಚರಿಕೆ ಇರಬೇಕು. ಇಂದು ಅವರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತಿಲ್ಲ. ಯಾವುದೇ ದೊಡ್ಡ ಸ್ಥಾನಮಾನದಲ್ಲಿ ಇಲ್ಲದಿದ್ದರೂ ಕೂಡ, ಆರೂವರೆ ಕೋಟಿ ಕನ್ನಡಿಗರು ತಮ್ಮ ಹೃದಯದಲ್ಲಿ ಶಾಶ್ವತ ಸ್ಥಾನ ಕೊಟ್ಟಿದ್ದಾರೆ ಎಂದರು.
‘ಯಡಿಯೂರಪ್ಪನವರು ಕುಟುಂಬವನ್ನು ಬೆಳೆಸಬೇಕು ಎಂದು ಯಾವತ್ತೂ ರಾಜಕಾರಣ ಮಾಡಲಿಲ್ಲ. ನಾಳೆ ಮತ್ತೆ ಮುಖ್ಯಮಂತ್ರಿ ಆಗಬೇಕು, ಮಗನನ್ನು ಮಂತ್ರಿ ಮಾಡಬೇಕು ಎಂಬ ಕನಸು ಇಟ್ಟುಕೊಂಡಿಲ್ಲ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಬೇಕು. ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಬೇಕು ಎಂದು ರಾಜ್ಯದಾದ್ಯಂತ ಪ್ರವಾಸ ಮಾಡುತ್ತಿದ್ದಾರೆ’ ಎಂದು ಹೇಳಿದರು.
‘ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು’ ಎಂಬ ತತ್ವದಡಿ ಸಾಮಾಜಿಕ ನ್ಯಾಯದಡಿ ಆಡಳಿತ ನಡೆಸಿದರು. ಎಲ್ಲ ಸಮಾಜಗಳ ಕಣ್ಣೀರನ್ನು ಒರೆಸುವ ಕೆಲಸವನ್ನು ಯಡಿಯೂರಪ್ಪ ಮಾಡಲಿಲ್ವಾ? ಎಂದು ಪ್ರಶ್ನಿಸಿದರು.
ಎದೆಗಾರಿಕೆ ಬೇರೆಯವರಿಗೆ ಇದೆಯಾ?: ‘ಯಡಿಯೂರಪ್ಪನವರಿಗೆ 81 ವರ್ಷ ಆಗಿದ್ದು, ವಯಸ್ಸಾಗಿದೆ ಎಂದು ಕೆಲವರು ಟೀಕೆ ಮಾಡುತ್ತಾರೆ. ಈ ವಯಸ್ಸಲ್ಲೂ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ರಾಜ್ಯದಾದ್ಯಂತ ಪ್ರವಾಸ ಮಾಡಿ, ಪಕ್ಷ ಸಂಘಟನೆ ಮಾಡಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇನೆ ಎಂಬ ಎದೆಗಾರಿಕೆ ಬೇರೆ ಯಾರಿಗಾದರೂ ಇದೆಯಾ’ ಎಂದು ಪ್ರಶ್ನಿಸಿದರು. ಆಗ, ಕಾರ್ಯಕರ್ತರು, ಅದಕ್ಕೇ ಅವರನ್ನು ‘ರಾಜಹುಲಿ’ ಅನ್ನುವುದು ಎಂದು ಕೂಗಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.