ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ನಾಲ್ಕು ದಿನಗಳಲ್ಲಿ ಕಾರ್ಯಪಡೆ ವರದಿ

ಬೆಂಗಳೂರು: ‘ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಕುರಿತು ರಚಿಸಿರುವ ಕಾರ್ಯಪಡೆ ನಾಲ್ಕು ದಿನಗಳಲ್ಲಿ ವರದಿ ಸಲ್ಲಿಸಲಿದ್ದು, ಆ ಬಳಿಕ ಹೊಸ ನೀತಿ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.
ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ಮತ್ತು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರೊಂದಿಗೆ ಭಾನುವಾರ ನಡೆದ ವಿಡಿಯೊ ಸಂವಾದದಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ‘ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ. ನೀತಿಯನ್ನು ಎಷ್ಟು ಹಂತಗಳಲ್ಲಿ, ಹೇಗೆ ಅನುಷ್ಠಾನಕ್ಕೆ ತರಬೇಕು ಎಂಬುದನ್ನು ಕಾರ್ಯಪಡೆಯು ವರದಿಯಲ್ಲಿ ತಿಳಿಸಲಿದೆ. ಈ ವರದಿ ಆಧರಿಸಿ ಮುಂದಿನ ಹೆಜ್ಜೆ ಇಡಲಾಗುವುದು’ ಎಂದರು.
ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳ ಜತೆಗೂ ಸಂವಾದ ನಡೆಸಲಾಗಿದೆ. ವಿವಿಧ ಕ್ಷೇತ್ರಗಳ ತಜ್ಞರ ಜತೆಗೂ ಸಮಾಲೋಚನೆ ನಡೆಸಲಾಗಿದೆ. ಹೊಸ ನೀತಿಯ ಕುರಿತು ಸಮಾಜದ ಎಲ್ಲ ವರ್ಗಗಳಿಂದಲೂ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಕೇಂದ್ರ ಸಚಿವರಿಗೆ ಮಾಹಿತಿ ನೀಡಿದರು.
ಹೊಸ ಶಿಕ್ಷಣ ನೀತಿಯ ಅನುಷ್ಠಾನಕ್ಕೆ ಪೂರಕವಾಗಿ ಕಾನೂನು ಮತ್ತು ನಿಯಮಗಳಿಗೆ ತಿದ್ದುಪಡಿ ತರುವ ಪ್ರಕ್ರಿಯೆಯೂ ಆರಂಭವಾಗಿದೆ. ಶಿಕ್ಷಣ ಸಂಸ್ಥೆಗಳ ಸಾಂಸ್ಥಿಕ ರಚನೆಯಲ್ಲೂ ಬದಲಾವಣೆಗೆ ಸಿದ್ಧತೆ ನಡೆದಿದೆ. ಹೊಸ ನೀತಿ ಜಾರಿಯಾದ ಬಳಿಕ ಅಧಿಕಾರ ವಿಕೇಂದ್ರೀಕರಣವಾಗಲಿದೆ. ಶಿಕ್ಷಣ ಸಂಸ್ಥೆಗಳಿಗೆ ಹೆಚ್ಚಿನ ಅಧಿಕಾರ ಲಭಿಸಲಿದೆ. ಬೋಧನೆ ಮತ್ತು ಸಂಶೋಧನೆಯಲ್ಲಿ ಹೊಸತನ ತರುವುದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.