ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಕೆಶಿ ಹೇಳಿಕೆ–ಯಾವುದೇ ತಪ್ಪಿಲ್ಲ: ಖರ್ಗೆ ಭೇಟಿ ಬಳಿಕ ಡಾ.ಜಿ.ಪರಮೇಶ್ವರ ಹೇಳಿಕೆ

Last Updated 24 ಜುಲೈ 2022, 19:10 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಕಾಂಗ್ರೆಸ್‌ ನಾಯಕರ ಮಧ್ಯೆ ‘ಮುಖ್ಯಮಂತ್ರಿ‘ ಗಾದಿಗಾಗಿ ಬಿರುಸಿನ ವಾಕ್ಸಮರ ನಡೆಯುತ್ತಿರುವ ಹೊತ್ತಿನಲ್ಲೇ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್‌ ಶಾಸಕ ಡಾ.ಜಿ.ಪರಮೇಶ್ವರ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಹುಟ್ಟುಹಬ್ಬಕ್ಕೆ ಶುಭಕೋರುವ ನೆಪದಲ್ಲಿ ಸದಾಶಿವನಗರದಲ್ಲಿರುವ ಖರ್ಗೆ ನಿವಾಸಕ್ಕೆ ಭಾನುವಾರ ಭೇಟಿಗಾಗಿ ಜಿ. ಪರಮೇಶ್ವರ ಬಂದಿದ್ದರು. ಈ ವೇಳೆ, ನಾಲ್ಕು ಗೋಡೆಗಳ ಮಧ್ಯೆ ಉಭಯ ನಾಯಕರು 45 ನಿಮಿಷಕ್ಕೂ ಹೆಚ್ಚು ಕಾಲ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.

ಬಳಿಕ ಸುದ್ದಿಗಾರರ ಜೊತೆ ಮಾತ ನಾಡಿದ ಮಲ್ಲಿಕಾರ್ಜುನ ಖರ್ಗೆ, ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನದ ಬಗ್ಗೆ ನಡೆಯುತ್ತಿರುವ ಚರ್ಚೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ‘ನಮ್ಮ ಹೈಕಮಾಂಡ್ ವಿಜಯಪುರ, ಬೆಳಗಾವಿ, ಮೈಸೂರು, ಬೆಂಗಳೂರು, ಕಲಬುರಗಿಯಲ್ಲಿಲ್ಲ. ಅದು ದೆಹಲಿಯಲ್ಲಿದೆ’ ಎಂದು ಹೇಳುವ ಮೂಲಕ ಪರೋಕ್ಷವಾಗಿ ಎಚ್ಚರಿಸಿದರು.

‘ನೀವು ಮುಖ್ಯಮಂತ್ರಿ ಆಕಾಂಕ್ಷಿಯಾ?’ ಎಂಬ ಸುದ್ದಿಗಾರರ ಪ್ರಶ್ನೆಗೆ, ‘ನಾನು ಮುಖ್ಯಮಂತ್ರಿ ಆಗುವುದನ್ನು ಹೈಕಮಾಂಡ್‌ ಕೇಳಿಕೊಂಡು ಬಂದು ಹೇಳಬೇಕಷ್ಟೇ’ ಎಂದು ಉತ್ತರಿಸಿದರು.

‘ಮೊದಲು ಪಕ್ಷವನ್ನು ಅಧಿಕಾರಕ್ಕೆ ತರಬೇಕು. 113 ಸ್ಥಾನಗಳು ಬಂದ ನಂತರ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಯೋಚನೆ ಮಾಡಬೇಕು. ಈ ಬಗ್ಗೆ ಈಗಲೇ ಯಾರೇ ಚರ್ಚಿಸಿದರೂ ಉಪಯೋಗವಿಲ್ಲ. ಹೀಗಾಗಿ, ಮುಖ್ಯಮಂತ್ರಿ ಬಗ್ಗೆ ಆ ಮೇಲೆ ಮಾತನಾಡೋಣವೆಂದು ನಮ್ಮ ನಾಯಕರಿಗೆ ಮನವಿ ಮಾಡುತ್ತೇನೆ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಎಲ್ಲರೂ ಒಮ್ಮತದಿಂದ ಇರಬೇಕು. ಯಾವುದೇ ಕಾರಣಕ್ಕೂ ಗೊಂದಲಕ್ಕೆ ಅವಕಾಶ ನೀಡಬಾರದು’ ಎಂದು ಸಲಹೆ ನೀಡಿದರು.

ಡಿ.ಕೆ ಆಸೆಪಟ್ಟರೆ ತಪ್ಪೇನು?: ಡಿ.ಕೆ. ಶಿವಕುಮಾರ್‌ ಅವರಿಂದ ಒಕ್ಕಲಿಗ ಸಮುದಾಯದ ಓಲೈಕೆ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ, ‘ಒಕ್ಕಲಿಗ ಸಮುದಾಯದ ಓಲೈಕೆ ತಪ್ಪೇನಿಲ್ಲ. ಸಮುದಾಯದ ಮುಂದೆ ಕೇಳಬಾರದು ಎನ್ನಲು ಆಗುತ್ತಾ? ಆ ಸಮುದಾಯ ಆಸೆಪಟ್ಟರೆ ಬೇಡ ಎಂದು ಹೇಳಲು ನಾವು ಯಾರು? ಸಾಮೂಹಿಕ ನಾಯಕತ್ವದಲ್ಲಿ ಪಕ್ಷ ಹೋಗಲಿದೆ. ಒಟ್ಟಿಗೆ ಹೋಗುವ ಇಚ್ಛಾಶಕ್ತಿ ಎಲ್ಲರಲ್ಲೂ ಇರಬೇಕು‘ ಎಂದರು.

‘ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ’ ಎಂಬ ಡಿ.ಕೆ. ಶಿವಕುಮಾರ್‌ ಹೇಳಿಕೆಯನ್ನು ಸಮರ್ಥಿಸಿದ ಪರಮೇಶ್ವರ, ’ಕೆಪಿಸಿಸಿ ಅಧ್ಯಕ್ಷರಾಗಿ ಅವರು ಆ ಮಾತು ಹೇಳಲೇಬೇಕು. ನಾನು ಕೂಡ ಎಂಟು ವರ್ಷ ಕೆಪಿಸಿಸಿ ಅಧ್ಯಕ್ಷನಾಗಿದ್ದೆ. ಈ ವೇಳೆ ಅಷ್ಟು ಕಟುವಾಗಿ ನಾನು ಹೇಳದೇ ಇರ ಬಹುದು. ಆದರೂ ನನ್ನದೇ ಆದ ರೀತಿ ಯಲ್ಲಿ, ಪಕ್ಷದ ಕೆಲಸ ಮಾಡಿ ಎನ್ನುತ್ತಿದ್ದೆ. ಅದರಲ್ಲಿ ತಪ್ಪೇನೂ ಇಲ್ಲ’ ಎಂದರು.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT