ನವದೆಹಲಿ: ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಕಾಂಗ್ರೆಸ್ ಮುಖಂಡ ಯೂಸುಫ್ ಶರೀಫ್ (ಕೆಜಿಎಫ್ ಬಾಬು) ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಶುಕ್ರವಾರವೂ ವಿಚಾರಣೆ ನಡೆಸಿದರು.
ಕಳೆದ ಎರಡು ದಿನಗಳಲ್ಲಿ ಇ.ಡಿ. ಅಧಿಕಾರಿಗಳು ಬಾಬು ಅವರನ್ನು ಒಂಬತ್ತು ಗಂಟೆ ವಿಚಾರಣೆ ನಡೆಸಿದ್ದಾರೆ. ಈ ಮೂಲಕ ಮೊದಲ ಹಂತದ ವಿಚಾರಣೆ ಪೂರ್ಣಗೊಳಿಸಿದ್ದಾರೆ. ಬಾಬು ಅಳಿಯ ಸಲ್ಮಾನ್ ಖಾನ್ ಅವರನ್ನು ಸಹ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಹಣಕಾಸಿನ ವಹಿವಾಟಿನ ಬಗ್ಗೆ ಅಧಿಕಾರಿಗಳಿಗೆ ಕೆಜಿಎಫ್ ಬಾಬು ಲಿಖಿತ ಹೇಳಿಕೆಯನ್ನು ಸಲ್ಲಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ಮೂಲಗಳು ಹೇಳಿವೆ.
ಆದಾಯದ ಮೂಲದ ಬಗ್ಗೆ ತನಿಖಾಧಿಕಾರಿಗಳು ಯೂಸುಫ್ ಶರೀಫ್ಗೆ ಪ್ರಶ್ನೆ ಮಾಡಿದ್ದಾರೆ ಎಂದು ಮೂಲಗಳು ಹೇಳಿವೆ.
ಶರೀಫ್ ಹಾಗೂ ಕುಟುಂಬ ಸದಸ್ಯರ ಮನೆಗಳ ಮೇಲೆ ಇ.ಡಿ. ಅಧಿಕಾರಿಗಳು ಕಳೆದ ತಿಂಗಳು ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು.