ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ | ಶಿಕ್ಷಣ ಪ್ರಕ್ರಿಯೆ ಕುರಿತು ತಜ್ಞರ ಸಮಿತಿ ರಚನೆ: ಸಚಿವ ಸುರೇಶ್ ಕುಮಾರ್

Last Updated 19 ಮೇ 2021, 12:44 IST
ಅಕ್ಷರ ಗಾತ್ರ

ಬೆಂಗಳೂರು: ‘ಕೋವಿಡ್ ಸಂಕಷ್ಟದ ಕಾಲದಲ್ಲಿ ಶಿಕ್ಷಣದ ಮುಂದುವರಿಕೆ ಮತ್ತು ಕಲಿಕೆಯಿಂದ ಮಕ್ಕಳು ಹೊರಗುಳಿಯದಂತೆ ಮಾಡುವ ಉದ್ದೇಶದಿಂದ ತಜ್ಞರ ಸಮಿತಿ ರಚಿಸಿ ವರದಿ ಪಡೆಯಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.

ಕೊರೊನಾ ಸೋಂಕಿನ ಭೀತಿಯಿಂದಾಗಿ 2021-22ನೇ ಶೈಕ್ಷಣಿಕ ವರ್ಷ ಕೂಡಾ ನಿಗದಿಯಂತೆ ಆರಂಭವಾಗುವ ಲಕ್ಷಣಗಳಿಲ್ಲ. ಹೀಗಾಗಿ, ಮಕ್ಕಳ ಕಲಿಕಾ ನಿರಂತರತೆಗೆ ತೊಂದರೆ ಆಗದಂತೆ ಈಗಿನಿಂದಲೇ ಕ್ರಮ ವಹಿಸುವ ಕುರಿತು ಅಧಿಕಾರಿಗಳ ಜೊತೆ ಸಚಿವರು ಬುಧವಾರ ಸಭೆ ನಡೆಸಿದರು.

ಬಳಿಕ ಮಾತನಾಡಿದ ಅವರು, ‘ವಿಶೇಷವಾಗಿ ಗ್ರಾಮೀಣ ಹಾಗೂ ಸರ್ಕಾರಿ ಶಾಲಾ ಮಕ್ಕಳನ್ನು ಕಲಿಕೆಯಿಂದ ಹೊರಗುಳಿಯದಂತೆ ಮಾಡುವುದು ಮತ್ತು ಆ ಮೂಲಕ ಅವರ ಶಿಕ್ಷಣದ ಹಕ್ಕುಗಳನ್ನು ರಕ್ಷಿಸುವುದು, ಕಳೆದ ಸಾಲಿನಲ್ಲಿ ಕಲಿತ ಪಾಠದಂತೆ ಮಕ್ಕಳನ್ನು ತಲುಪಲು ಪರ್ಯಾಯ ಕ್ರಮಗಳನ್ನು ಅನುಸರಿಸುವಂತೆ ಕುರಿತಂತೆ ಈ ಸಮಿತಿ ರೂಪುರೇಷೆ ಸಿದ್ಧಪಡಿಸಲಿದೆ. ತಜ್ಞರ ವರದಿಯ ಆಧಾರದಲ್ಲಿ ಬರುವ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು’ ಎಂದು ಸಚಿವರು ತಿಳಿಸಿದರು.

‘ಲಭ್ಯವಿರುವ ಸ್ಥಿತಿಗತಿಗಳು, ಮೌಲ್ಯಾಂಕನ ಪದ್ಧತಿ, ಮಂಡಳಿ ಪರೀಕ್ಷೆಗಳು, ಆನ್‌ಲೈನ್, ದೂರಶಿಕ್ಷಣ, ಶಿಕ್ಷಕರ ತರಬೇತಿ, ಸಂಪನ್ಮೂಲ ಸದ್ಬಳಕೆ ಸೇರಿದಂತೆ ಎಲ್ಲ ಆಯಾಮಗಳನ್ನೂ ಆಧ್ಯಯನ ಮಾಡಿ ವರದಿ ನೀಡಲು ಸಮಿತಿಯಲ್ಲಿ ಖ್ಯಾತ ವಿವಿಧ ಶಿಕ್ಷಣ ತಜ್ಞರು, ಭಾರತೀಯ ವಿಜ್ಞಾನ ಸಂಸ್ಥೆಯ ಪ್ರತಿನಿಧಿಗಳು, ನಿಮ್ಹಾನ್ಸ್ ಪ್ರತಿನಿಧಿಗಳು,ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರು, ಖಾಸಗಿ ಶಾಲೆಗಳ ಪ್ರತಿನಿಧಿ, ಪೋಷಕ ಸಂಘಟನೆಯ ಪ್ರತಿನಿಧಿಗಳು, ಶಿಕ್ಷಕ– ಉಪನ್ಯಾಸಕರ ಸಂಘಟನೆಗಳ ಪ್ರತಿನಿಧಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಇರಲಿದ್ದಾರೆ. ತಕ್ಷಣದಲ್ಲೇ ಸಮಿತಿ ರಚಿಸಿ, ಒಂದು ತಿಂಗಳಲ್ಲಿ ನೀಲನಕ್ಷೆ ಮಂಡಿಸಲು ಮನವಿ ಮಾಡಲಾಗುವುದು’ ಎಂದು ಅವರು ತಿಳಿಸಿದರು.

‘ರಾಷ್ಟ್ರೀಯ ಶಿಕ್ಷಣ ನೀತಿ ಕುರಿತಂತೆ ಕೇಂದ್ರ ಶಿಕ್ಷಣ ಸಚಿವರು ಮಂಗಳವಾರದ ನಡೆಸಿದ ಸಭೆಯಲ್ಲಿ ಚರ್ಚೆ ನಡೆದಿದೆ. ಕರ್ನಾಟಕದಲ್ಲಿಯೂ ಈ ಬಗ್ಗೆ ವರದಿ ಸಲ್ಲಿಕೆಯಾದ ಬಳಿಕ ಇನ್ನಷ್ಟು ಸಾಂಸ್ಥಿಕ ಸುಧಾರಣೆಗಳು ಅವಶ್ಯವಿದ್ದು, ರಾಜ್ಯ ಸಂಪನ್ಮೂಲ ತಂಡದ ರಚನೆಯೂ ಸೇರಿದಂತೆ ಅದರಲ್ಲಿ ಉಲ್ಲೇಖಿಸಿರುವ ಹಲವು ಆಡಳಿತಾತ್ಮಕ ಪ್ರಕ್ರಿಯೆಗಳಿಗೆ ಚಾಲನೆ ನೀಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ’ ಎಂದರು.

ಮೃತ ಶಿಕ್ಷಕರಿಗೆ ಪರಿಹಾರ: ‘ಕೋವಿಡ್‌ನಿಂದ ರಾಜ್ಯದ ವಿವಿಧೆಡೆ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕರು ಮೃತರಾಗಿರುವ ಕುರಿತು ಅಂಕಿ ಅಂಶಗಳನ್ನು ಮಂಡಿಸಲು ಈಗಾಗಲೇ ಸೂಚಿಸಲಾಗಿದೆ. ಶಿಕ್ಷಕರ‌ ಕಲ್ಯಾಣ ನಿಧಿಯಿಂದ ವಿಶೇಷ ಪ್ರಕರಣವೆಂದು ಈ ಶಿಕ್ಷಕರ ಕುಟುಂಬಗಳಿಗೆ ಪರಿಹಾರ ನೀಡುವ ಕುರಿತು ಚಿಂತನೆ ನಡೆದಿದೆ’ ಎಂದರು.

‘ಶಿಕ್ಷಕ ಸಮುದಾಯವನ್ನು ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಿ ಮುಂದಿನ ಶೈಕ್ಷಣಿಕ ಸಾಲಿನ ಆರಂಭಕ್ಕೂ ಮೊದಲು ಲಸಿಕೆ‌ ನೀಡಲು ಆದ್ಯತೆ ನೀಡಬೇಕಿದೆ. ಈ ಕುರಿತು ಆರೋಗ್ಯ ಇಲಾಖೆಗೆ ಕೂಡಲೇ‌ ಪ್ರಸ್ತಾವನೆ ಸಲ್ಲಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದ ಸುರೇಶ್ ಕುಮಾರ್, ‘ಈ ಕುರಿತಂತೆ ಮುಖ್ಯಮಂತ್ರಿ ಜೊತೆ ಚರ್ಚಿಸಿದ್ದೇನೆ. ಅವರೂ ತಾತ್ವಿಕವಾಗಿ ಒಪ್ಪಿಗೆ ಸೂಚಿಸಿದ್ದಾರೆ. ಆರೋಗ್ಯ ಸಚಿವರೊಂದಿಗೂ ಮಾತನಾಡುವುದಾಗಿ ತಿಳಿಸಿದ್ದಾರೆ’ ಎಂದರು.

‘ಕೋವಿಡ್ ಮೂರನೇ ಅಲೆ ಅಪ್ಪಳಿಸಬಹುದೆಂಬ ವರದಿಗಳ ಹಿನ್ನೆಲೆಯಲ್ಲಿ ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಮತ್ತು ಆರೋಗ್ಯ ಸಚಿವರ ಜೊತೆ ಶೀಘ್ರದಲ್ಲೇ ಸಭೆ ನಡೆಸಲಾಗುವುದು’ ಎಂದೂ ಸುರೇಶ್ ಕುಮಾರ್ ಹೇಳಿದರು.

ಶಿಕ್ಷಕರ ವರ್ಗಾವಣೆ ಚುರುಕುಗೊಳಿಸಿ: ‘ಶಿಕ್ಷಕರ ವರ್ಗಾವಣೆ ಈಗಾಗಲೇ ತಡವಾಗಿದೆ. ಹೀಗಾಗಿ, ಈ ಪ್ರಕ್ರಿಯೆಯನ್ನು ಲಾಕ್ ಡೌನ್ ಮುಗಿದ ತಕ್ಷಣ ಆರಂಭಿಸಲು ಸೂಚಿಸಲಾಗಿದೆ’ ಎಂದರು.

ವೃಂದ ಮತ್ತು ನೇಮಕಾತಿ ನಿಯಮ: ‘6-8ನೇ ತರಗತಿ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ವೃಂದ ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲು ಆದೇಶ ಮಾಡಲಾಗಿತ್ತು. ವಿಳಂಬದ ಕಾರಣ ನೇಮಕಾತಿಗೆ ಯಾವುದೇ ಕ್ರಮವಾಗಿಲ್ಲ. ಕಾಲಮಿತಿ ವಿಧಿಸಿಕೊಂಡು ಅದನ್ನು ಪೂರ್ಣಗೊಳಿಸಬೇಕು. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ನೇಮಕಾತಿಗೆ ನಿರ್ಬಂಧ ಇಲ್ಲದ ಕಾರಣ ಆ ಪ್ರದೇಶದ ಖಾಲಿ ಹುದ್ದೆಗಳ ನೇಮಕಾತಿಗೆ ಕೂಡಲೇ ಕ್ರಿಯಾಯೋಜನೆ ರೂಪಿಸಿ ಮಂಡಿಸುವಂಗತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದೂ ಸಚಿವರು ಹೇಳಿದರು.

ಸಂಕನೂರ ಸಮಿತಿ ವರದಿ: ಶಾಲಾ ಕಾಲೇಜುಗಳ ಆರ್.ಆರ್. ನವೀಕರಣ ಸೇರಿದಂತೆ ವಿವಿಧ ವಿಷಯಗಳ ಕುರಿತು ವರದಿ‌ ಮಂಡಿಸಲು ರಚಿಸಲಾಗಿದ್ದ ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ ನೇತೃತ್ವದ ಸಮಿತಿ ವರದಿ ಕುರಿತಂತೆ ಪ್ರಸ್ತಾಪಿಸಿದ ಸಚಿವರು, ವರ್ಚುವಲ್ ಮೂಲಕ ಸಭೆ ನಡೆಸಿ ಶೀಘ್ರವೇ ವರದಿ ನೀಡುವ ಸಂಬಂಧದಲ್ಲಿ ಸಂಕನೂರು ಜೊತೆ ಚರ್ಚಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ದೀಕ್ಷಾ ಆ್ಯಪ್‌ ಸದ್ಬಳಕೆಗೆ ಸೂಚನೆ: ‘ಕೇಂದ್ರ ಸರ್ಕಾರದ ಪೋರ್ಟಲ್ ದೀಕ್ಷಾ ಆ್ಯಪ್ ಮೂಲಕ ಪದವಿಪೂರ್ವ ವಿದ್ಯಾರ್ಥಿಗಳು ಆನ್‌ಲೈನ್ ಕಲಿಕೆ ಪ್ರಕ್ರಿಯೆಯಲ್ಲಿ ತೊಡಗಲು ಅನುವಾಗುವಂತೆ ಪಠ್ಯ ಭಾಗಗಳನ್ನು ಅಳವಡಿಸಲಾಗುತ್ತಿದ್ದು, ಮುಂದಿನ ವಾರದಲ್ಲಿ ಪೋರ್ಟಲ್ ಲೋಕಾರ್ಪಣೆ ಮಾಡಲಾಗುವುದು’ ಎಂದು ಸುರೇಶ್ ಕುಮಾರ್ ತಿಳಿಸಿದರು.

‘ನಮ್ಮ ರಾಜ್ಯಕ್ಕೆ ಸಂಬಂಧಿಸಿದಂತೆ 1ರಿಂದ 10ನೇ ತರಗತಿಗಳಿಗೆ ಅನ್ವಯವಾಗುವಂತೆ 22 ಸಾವಿರ ಇ-ಪಠ್ಯಗಳನ್ನು ಪೋರ್ಟಲ್‌ನಲ್ಲಿ ಅಳವಡಿಸಲಾಗಿದೆ. ಎಲ್ಲ ಪಠ್ಯಪುಸ್ತಕಗಳು, ವರ್ಕ್ ಪುಸ್ತಕಗಳು, ತರಬೇತಿ ಪಠ್ಯಗಳು ಅಧ್ಯಾಯವಾರು ಲಭ್ಯವಿದೆ. ಪದವಿ ಪೂರ್ವ ಉಪನ್ಯಾಸಕರ ತರಬೇತಿ ಮಾಡ್ಯೂಲ್ ಕೂಡಾ ಅಪ್‌ಲೋಡ್ ಮಾಡಲಾಗುತ್ತಿದೆ’ ಎಂದರು.

ಪಠ್ಯಪುಸ್ತಕ ಪೂರೈಕೆಗೆ ಸೂಚನೆ: ‘ಮಕ್ಕಳ ಕಲಿಕೆಗೆ ಪೂರಕವಾಗಿ ಪಠ್ಯಪುಸ್ತಕಗಳನ್ನು ಸಕಾಲದಲ್ಲಿ ತಲುಪಿಸಲು ಎಲ್ಲ ರೀತಿಯ ಕ್ರಮಗಳನ್ನು ಅನುಸರಿಸಬೇಕು. ಮುಂದಿನ ಎರಡು ತಿಂಗಳ ಅವಧಿಯಲ್ಲಿ ಪುಸ್ತಕಗಳು ಪ್ರತಿಯೊಬ್ಬ ವಿದ್ಯಾರ್ಥಿಗೆ ತಲುಪಬೇಕು’ ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಗೊಂದಲ ಪರಿಹಾರ: ಪ್ರಸ್ತುತ ನ್ಯಾಯಾಲಯದ ಅಂಗಳದಲ್ಲಿರುವ ಶಾಲಾ ಶುಲ್ಕಕ್ಕೆ ಸಂಬಂಧಿಸಿದ ಪ್ರಕರಣದ ಮಾಹಿತಿ ಪಡೆದ ಸಚಿವರು, ‘ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಮಕ್ಕಳಿಗೆ ತೊಂದರೆಯಾಗದ ರೀತಿಯಲ್ಲಿ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಸೂಕ್ತ ಪರಿಹಾರ ಮಾರ್ಗಗಳನ್ನು ಆಲೋಚಿಸಬೇಕೆಂದು’ ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT