ಬೆಂಗಳೂರು: ರಾಜ್ಯದ ಒಂದು ಲೋಕಸಭೆ (ಬೆಳಗಾವಿ) ಮತ್ತು ಮೂರು ವಿಧಾನಸಭಾ ಕ್ಷೇತ್ರಗಳಿಗೆ (ಮಸ್ಕಿ, ಸಿಂದಗಿ, ಬಸವಕಲ್ಯಾಣ) ಉಪಚುನಾವಣೆ ದಿನಾಂಕ ಮುಂದಿನ ವಾರ ಪ್ರಕಟವಾಗುವ ಸಾಧ್ಯತೆ ಇದೆ.
ಕೇಂದ್ರ ಚುನಾವಣಾ ಆಯೋಗ ದೆಹಲಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಮತ್ತು ಆಯಾ ರಾಜ್ಯಗಳಲ್ಲಿ ತೆರವಾಗಿರುವ ಲೋಕಸಭಾ ಕ್ಷೇತ್ರಗಳಿಗೆ ಚುನಾವಣಾ ದಿನಾಂಕ ಘೋಷಿಸಿತ್ತು.
ರಾಜ್ಯದಲ್ಲಿ ಖಾಲಿ ಇರುವ ಕ್ಷೇತ್ರಗಳಿಗೆ ಚುನಾವಣೆ ವೇಳಾ ಪಟ್ಟಿ ಪ್ರಕಟವಾಗುವ ನಿರೀಕ್ಷೆಗಳಿದ್ದವು. ಆದರೆ, ಈ ಕ್ಷೇತ್ರಗಳ ಚುನಾವಣೆಗೆ ಪ್ರತ್ಯೇಕ ಅಧಿಸೂಚನೆ ಹೊರಡಿಸುವುದಾಗಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಸುನೀಲ್ ಅರೋರಾ ಹೇಳಿದ್ದರು.
ಉಪಚುನಾವಣೆಗಳ ವೇಳಾ ಪಟ್ಟಿ ಕುರಿತಂತೆ ‘ಪ್ರಜಾವಾಣಿ’ಗೆ ಶನಿವಾರ ಪ್ರತಿಕ್ರಿಯಿಸಿದ ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್, ‘ನಾವು ಚುನಾವಣೆಗೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಚುನಾವಣಾ ದಿನ ಘೋಷಣೆಯ ನಿರೀಕ್ಷೆಯಲ್ಲಿದ್ದೇವೆ’ ಎಂದರು.