ಬೆಂಗಳೂರು: ಎಂಜಿನಿಯರಿಂಗ್ ವ್ಯಾಸಂಗಕ್ಕಾಗಿ ಹೊರ ರಾಜ್ಯದಿಂದ ಬೆಂಗಳೂರಿಗೆ ಬಂದಿದ್ದ ವಿದ್ಯಾರ್ಥಿನಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
‘ಈ ಸಂಬಂಧ 25 ವರ್ಷದ ಯುವಕನನ್ನು ಪೊಲೀಸರು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ತಿಳಿಸಿದರು.
‘ನಗರ ಕಾಲೇಜೊಂದರಲ್ಲಿ ಎಂಜಿನಿಯರಿಂಗ್ ಸೇರಲು ಬಂದಿದ್ದ ವಿದ್ಯಾರ್ಥಿನಿಗೆ ಹಾಗೂ ಅವರ ಕುಟುಂಬಸ್ಥರಿಗೆ ಅದೇ ರಾಜ್ಯ ದವನಾದ ಆರೋಪಿ ಪರಿಚಯವಾಗಿದ್ದ. ಎಂಜಿನಿಯರಿಂಗ್ ಪ್ರವೇಶ ಸಂಬಂಧ ಯುವಕನನ್ನು ಮಂಗಳವಾರ ಭೇಟಿಯಾಗಿ ಚರ್ಚಿಸಿದ್ದಳು. ಕಾಲೇಜಿಗೆ ಪ್ರವೇಶ ಶುಲ್ಕ ಪಾವತಿ ಮಾಡಲು ಬುಧವಾರ ತೆರಳಿದ್ದಾಗ, ಆಕೆಯ ಮೇಲೆ ಅತ್ಯಾಚಾರ ನಡೆದಿದೆ’ ಎಂದು ಮಾಹಿತಿ ನೀಡಿದರು.
‘ಪ್ರಜ್ಞೆ ಕಳೆದುಕೊಂಡಿದ್ದ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿಯನ್ನು ಯುವಕ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಆದರೆ, ಆಕೆ ಮನೆಯಲ್ಲಿಯೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಪ್ರಕರಣ ಸಂಬಂಧ ಯುವಕನನ್ನು ವಶಕ್ಕೆ ಪಡೆದು, ತನಿಖೆ ಮುಂದುವರಿಸಿದ್ದೇವೆ’ ಎಂದೂ ಹೇಳಿದರು.