ಬೆಂಗಳೂರು: ಪ್ರವಾಹಪೀಡಿತ ಮತ್ತು ಭೂಕುಸಿತ ಉಂಟಾಗುವ ಪ್ರದೇಶಗಳ ಜನರನ್ನು ಮುಂಚಿತವಾಗಿಯೇ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೊಡಗು, ಬಳ್ಳಾರಿ, ಹಾಸನ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಮಂಗಳೂರು, ಚಿಕ್ಕಮಗಳೂರು, ವಿಜಯಪುರ, ಕಲಬುರ್ಗಿ, ಮೈಸೂರು, ಕೊಪ್ಪಳ ಹಾಗೂ ಬೆಳಗಾವಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜತೆ ಮಂಗಳವಾರ ವಿಡಿಯೊ ಸಂವಾದ ನಡೆಸಿ, ಪರಿಸ್ಥಿತಿ ಅವಲೋಕಿಸಿದರು.
ಪ್ರವಾಹವನ್ನು ತಡೆಗಟ್ಟಲು ಅತ್ಯಾಧುನಿಕ ಉಪಕರಣಗಳನ್ನು ಖರೀದಿಸಲು ತಕ್ಷಣವೇ ಹಣ ಬಿಡುಗಡೆ ಮಾಡಲಾಗುವುದು. ಜಿಲ್ಲಾಧಿಕಾರಿಗಳ ಪಿ.ಡಿ ಖಾತೆಗಳಲ್ಲಿ ಲಭ್ಯವಿರುವ ಹಣವನ್ನು ಪ್ರವಾಹ ಪರಿಸ್ಥಿತಿ ನಿಭಾಯಿಸಲು ಬಳಕೆ ಮಾಡಬೇಕು ಎಂದು ಯಡಿಯೂರಪ್ಪ ಸೂಚಿಸಿದರು.
ಸಭೆಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಕಂದಾಯ ಸಚಿವ ಆರ್.ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ಕೃಷಿ ಸಚಿವ ಬಿ.ಸಿ.ಪಾಟೀಲ ಹಾಜರಿದ್ದರು.