ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಎಸ್‌ಡಿಪಿಐ, ಪಿಎಫ್‌ಐ ಕೈವಾಡಗಳನ್ನು ಸಮರ್ಥಿಸುವ ಸಾಕ್ಷ್ಯ ಇಲ್ಲ: ಮಾಧುಸ್ವಾಮಿ

ಡಿ.ಜೆ.ಹಳ್ಳಿ ಗಲಭೆ: ಸಾಕ್ಷ್ಯ ಸಂಗ್ರಹಿಸಿ ವರದಿ ಪಡೆದ ಬಳಿಕ ಮುಂದಿನ ಕ್ರಮ, ಸಂಪುಟ ತೀರ್ಮಾನ
Last Updated 20 ಆಗಸ್ಟ್ 2020, 21:34 IST
ಅಕ್ಷರ ಗಾತ್ರ

ಬೆಂಗಳೂರು:‍ ‍‍‌‘ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿಗಳಲ್ಲಿ ನಡೆದ ಗಲಭೆಯಲ್ಲಿ ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳ ಕೈವಾಡಗಳನ್ನು ಸಮರ್ಥಿಸುವ ಬಲವಾದ ಸಾಕ್ಷ್ಯಗಳು ಸದ್ಯಕ್ಕೆ ಸಿಗದ ಕಾರಣ ಅವುಗಳನ್ನು ನಿಷೇಧಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ತೀರ್ಮಾನ ಕೈಗೊಂಡಿಲ್ಲ’ ಎಂದುಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.

ಸಂಪುಟ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಈ ಸಂಘಟನೆಗಳನ್ನು ನಿಷೇಧಿಸಲು ಹೆಚ್ಚಿನ ಸಾಕ್ಷ್ಯ ಮತ್ತು ಮಾಹಿತಿಯನ್ನು ಸಂಗ್ರಹಿಸಿ ವರದಿ ನೀಡುವಂತೆ ಪೊಲೀಸ್‌ ಇಲಾಖೆಗೆ ಸೂಚಿಸಲಾಗಿದೆ. ವರದಿ ಆಧಾರದ ಮೇಲೆ ಮುಂದಿನ ಕ್ರಮ ಜರುಗಿಸಲಾಗುವುದು. ಗೃಹ ಇಲಾಖೆ ಮತ್ತು ಕಾನೂನು ಇಲಾಖೆಯ ಅಭಿಪ್ರಾಯಗಳನ್ನೂ ಪಡೆಯಲಾಗುವುದು’ ಎಂದು ತಿಳಿಸಿದರು.

‘ಎಸ್‌ಡಿಪಿಐ ಒಂದು ಸಂಘಟನೆ ಮಾತ್ರವಲ್ಲ, ಅದು ರಾಜಕೀಯ ಪಕ್ಷವೂ ಆಗಿದೆ. ಆದ್ದರಿಂದ ಅದನ್ನು ನಿಷೇಧಿಸಲು ಕಾನೂನಿಗೆ ತಿದ್ದುಪಡಿ ಅಗತ್ಯ ಇದೆಯೇ ಎಂಬುದನ್ನು ಪರಿಶೀಲಿಸಲಾಗುವುದು. ಅಗತ್ಯವಿದ್ದರೆ ಕಾಯ್ದೆಗೆ ತಿದ್ದುಪಡಿ ಮಾಡಲಾಗುವುದು. ಗಲಭೆಗಳು, ಅಪರಾಧ ಚಟುವಟಿಕೆಗಳಲ್ಲಿ ಈ ಸಂಘಟನೆಗಳು ಭಾಗಿಯಾಗಿರುವುದು ಸಾಬೀತಾದರೆ ನಿಷೇಧ ಮಾಡಲು ಹಿಂಜರಿಯುವುದಿಲ್ಲ’ ಎಂದೂ ಅವರು ಹೇಳಿದರು.

‘ಗಲಭೆಕೋರರಿಂದ ದಂಡ ವಸೂಲಿಗೆ ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು. ಯಾವುದೇ ಗಲಭೆಗಳಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದರೆ, ದಂಡ ವಸೂಲಿ ಮಾಡುವ ಬಗ್ಗೆ 1981 ರಲ್ಲಿಯೇ ಕಾಯ್ದೆಗೆ ತಿದ್ದುಪಡಿ ಮಾಡಲಾಗಿತ್ತು. ಡಿ.ಜೆ.ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಕ್ಲೇಮ್‌ ಕಮಿಷನರ್‌ ನೇಮಕ ಆದ ಬಳಿಕ, ಅವರಿಗೆ ರಾಜ್ಯದ 81 ರ ಕಾಯ್ದೆಯನ್ನು ಒದಗಿಸಲಾಗುವುದು. ಅಲ್ಲದೆ, ಉತ್ತರ ಪ್ರದೇಶ ರಾಜ್ಯವೂ ಕಾಯ್ದೆಯೊಂದನ್ನು ರೂಪಿಸಿದೆ. ಅದನ್ನೂ ಅಧ್ಯಯನ ನಡೆಸಿ ಅಗತ್ಯವಿದ್ದರೆ ನಮ್ಮ ಕಾಯ್ದೆಗೆ ತಿದ್ದುಪಡಿ ಮಾಡಲಾಗುವುದು’ ಎಂದು ಹೇಳಿದರು.

ಸಚಿವರ ಒತ್ತಡ: ‘ಎಸ್‌ಡಿಪಿಐ ಮತ್ತು ಪಿಎಫ್‌ಐ ನಿಷೇಧಿಸಲು ಸಚಿವ ಸಂಪುಟ ಸಭೆಯಲ್ಲಿ ಬಹುತೇಕ ಸಚಿವರು ಒತ್ತಡ ಹೇರಿದರು. ಡಿ.ಜೆ.ಹಳ್ಳಿ ಗಲಭೆ, ಶಾಸಕ ತನ್ವೀರ್ ಸೇಠ್ ಮೇಲೆ ಹಲ್ಲೆ, ಮಂಗಳೂರು ಗಲಭೆಯಲ್ಲಿ ಈ ಸಂಘಟನೆಗಳ ಕೈವಾಡ ಇರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಆದ್ದರಿಂದ ನಿಷೇಧ ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಬೇಕು ಎಂದು ಸಚಿವರಾದ ಕೆ.ಎಸ್‌.ಈಶ್ವರಪ್ಪ, ಸಿ.ಟಿ.ರವಿ, ಆರ್‌.ಅಶೋಕ ಒತ್ತಾಯಿಸಿದರು’ ಎಂದು ಮೂಲಗಳು ತಿಳಿಸಿವೆ.

ಸಂಪುಟ ಸಭೆಗೂ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಸಚಿವ ಸಿ.ಟಿ.ರವಿ, ‘ಗಲಭೆಗೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುವ ಕಾರ್ಯ ಪ್ರಗತಿಯಲ್ಲಿದೆ. ಯಾವುದೇ ಒಂದು ಘಟನೆಯ ಆಧಾರದಲ್ಲಿ ನಿಷೇಧ ನಿರ್ಧಾರ ಮಾಡಲು ಸಾಧ್ಯವಿಲ್ಲ. ಆ ಸಂಘಟನೆಗಳ ಸಮಾಜಘಾತುಕ ಕಾರ್ಯಗಳ ಬಗ್ಗೆ ಸಾಕ್ಷ್ಯಗಳನ್ನು ಕಲೆ ಹಾಕುವ ಕೆಲಸ ನಡೆದಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT