ಬೆಂಗಳೂರು: ಬಿಜೆಪಿ ನಾಯಕ ಮತ್ತು ಶಿಕಾರಿಪುರ ಶಾಸಕ ಬಿ.ಎಸ್. ಯಡಿಯೂರಪ್ಪ ಅವರು ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.ಇದೇ ಮೊದಲ ಬಾರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಚೊಚ್ಚಲ ಪ್ರಶಸ್ತಿ ಯಡಿಯೂರಪ್ಪ ಅವರಿಗೆ ಲಭಿಸಿದೆ.
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಸಮ್ಮುಖದಲ್ಲಿ ವಿಧಾನಸಭೆಯ ಜಂಟಿ ಅಧಿವೇಶನದಲ್ಲಿ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈ ಘೋಷಣೆ ಮಾಡಿದರು.
ಸ್ಪೀಕರ್ ಕಾಗೇರಿ ನೇತೃತ್ವದ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾನೂನು ಸಚಿವ ಜೆಸಿ ಮಾಧುಸ್ವಾಮಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಹಿರಿಯ ಕಾಂಗ್ರೆಸ್ ಶಾಸಕ ಆರ್.ವಿ.ದೇಶಪಾಂಡೆ ಸದಸ್ಯರಾಗಿರುವ ಸಮಿತಿಯು, 4 ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿರುವ, 8 ಬಾರಿ ಶಾಸಕರಾಗಿರುವ ಯಡಿಯೂರಪ್ಪ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿತು.
‘ಪ್ರಶಸ್ತಿಗೆ ನಾವು ಹಲವು ಹೆಸರನ್ನು ಪರಿಶೀಲಿಸಿದೆವು.ಅದರೆ, ಆಯ್ಕೆ ಕ್ಲಿಷ್ಟಕರವಾಗಿತ್ತು. ಯಡಿಯೂರಪ್ಪನವರ ಆಯ್ಕೆಯು ಸರ್ವಾನುಮತದಿಂದ ಕೂಡಿದೆ,’ ಎಂದು ಕಾಗೇರಿ ಹೇಳಿದರು.
‘ಅತ್ಯುತ್ತಮ ಶಾಸಕ ಪ್ರಶಸ್ತಿ’ಯನ್ನು ಪ್ರತಿ ವರ್ಷ ನೀಡಲಾಗುವುದು ಎಂದು ಕಾಗೇರಿ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.