ಹರಿಹರ: ಅಸ್ಪೃಶ್ಯ ಸಮಾಜದ ಸಂವಿಧಾನಿಕ ಹಕ್ಕು ಹಾಗೂ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯಂತೆ ಒಳಮೀಸಲಾತಿಗೆ ಆಗ್ರಹಿಸಿ ಮಾರ್ಚ್ 25ರಿಂದ ಹರಿಹರದಿಂದ ಬೆಂಗಳೂರಿಗೆ ಪಾದಯಾತ್ರೆ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಹಿರಿಯೂರು ಕೋಡಿಹಳ್ಳಿ ಆದಿಜಾಂಬವ ಪೀಠದ ಷಡಕ್ಷರ ಮುನಿ ದೇಶಿಕೇಂದ್ರ ಸ್ವಾಮೀಜಿ ಘೋಷಿಸಿದರು.
ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಬಳಿಯ ಪ್ರೊ.ಬಿ. ಕೃಷ್ಣಪ್ಪ ಸ್ಮಾರಕ ಭವನ ಮೈತ್ರಿ ವನದಲ್ಲಿ ಬುಧವಾರ ಅಸ್ಪೃಶ್ಯ ಸಮುದಾಯಗಳ ಮಠಾಧೀಶರ ಒಕ್ಕೂಟದಿಂದ ನಡೆದ ಪಾದಯಾತ್ರೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಸ್ಪೃಶ್ಯ ಸಮಾಜಗಳಿಗೆ ಜನಸಂಖ್ಯೆಗನುಗುಣವಾಗಿ ಒಳಮೀಸಲಾತಿ ಪಡೆಯುವ ಅಂತಿಮ ಹೋರಾಟವಾಗಿದೆ. ಸಮುದಾಯದ ಎಲ್ಲ ಮಠಾಧೀಶರು, ಜನಪ್ರತಿನಿಧಿಗಳು, ಮುಖಂಡರು, ಚಿಂತಕರು ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಮರೆತು ಹೋರಾಟದಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.
ಪಾದಯಾತ್ರೆ ಹರಿಹರದಿಂದ ಆರಂಭವಾಗಿ ಏ. 21ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾರೋಪ ಕಾರ್ಯಕ್ರಮ ಹಾಗೂ ಜಾಗೃತಿ ಸಮಾವೇಶದೊಂದಿಗೆ ಪೂರ್ಣಗೊಳ್ಳಲಿದೆ. ಹೋರಾಟದ ಸಿದ್ಧತೆಗಾಗಿ ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ ಜಾಗೃತಿ ಸಭೆಗಳನ್ನು ನಡೆಸಲಾಗುವುದು ಎಂದು ತಿಳಿಸಿದರು.
ಐಮಂಗಲದ ಮಹಾ ಶಿವಶರಣ ಹರಳಯ್ಯ ಗುರುಪೀಠದ ಬಸವ ಹರಳಯ್ಯ ಸ್ವಾಮೀಜಿ ಮಾತನಾಡಿ, ‘ಕಳೆದ ಎರಡು ದಶಕಗಳಿಂದ ಅಸಂಘಟಿತ ಹೋರಾಟದಲ್ಲಿ ಸಮಯ ವ್ಯರ್ಥವಾಗಿದೆ. ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಜಾರಿಯಾಗುವರೆಗೂ ಹೋರಾಟ ನಿರಂತರವಾಗಿರುತ್ತದೆ. ಸಮಾಜದ ನಿರ್ಣಯವನ್ನು ಪ್ರತಿ ಮನೆಗೂ ತಲುಪಿಸುವುದು ಮುಖಂಡರ ಕರ್ತವ್ಯ’ ಎಂದರು.