ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕು ಸರ್ಕಾರಿ ಪ್ರೌಢಶಾಲೆಯೊಂದರಲ್ಲಿ ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸಿ ಥಳಿಸಿದ ಆರೋಪದ ಮೇಲೆ ಅಮಾನತುಗೊಂಡಿರುವ ಮುಖ್ಯಶಿಕ್ಷಕಿ ಸ್ನೇಹಲತಾ ವಿರುದ್ಧ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಶನಿವಾರ ಎಫ್ಐಆರ್ ದಾಖಲಾಗಿದೆ.
ಮಕ್ಕಳ ನ್ಯಾಯ ರಕ್ಷಣೆ ಮತ್ತು ಪೋಷಣೆ ಕಾಯ್ದೆ (ಜೆಜೆ ಆ್ಯಕ್ಟ್) ಅಡಿ ಪ್ರಕರಣ ದಾಖಲು ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಹಾಯಕ ಮಕ್ಕಳ ರಕ್ಷಣಾಧಿಕಾರಿ ಅಮೃತಾ ವಿ ಕುರಣೆ ದೂರು ದಾಖಲಿಸಿದ್ದರು. ಅದರ ಆಧಾರದ ಮೇಲೆ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ.
ವಿದ್ಯಾರ್ಥಿನಿ ಮೊಬೈಲ್ ತಂದಿದ್ದಾಳೆ ಎಂಬ ಕಾರಣಕ್ಕೆ ಡಿ.22ರಂದು ಮುಖ್ಯ ಶಿಕ್ಷಕಿ ಸ್ನೇಹಲತಾ ಅವರು ಆಕೆಯನ್ನು ವಿವಸ್ತ್ರಗೊಳಿಸಿ, ಥಳಿಸಿ ದೌರ್ಜನ್ಯ ಎಸಗಿದ್ದಾರೆ. ಊಟಕ್ಕೂ ಬಿಡದೇ ಹಿಂಸಿಸಿದ್ದಾರೆ. ಈ ಕುರಿತು ಪೋಷಕರಾಗಲೀ, ಇತರ ಶಿಕ್ಷಕರಾಗಲೀ ಪೊಲೀಸ್ ಠಾಣೆಗೆ ದೂರು ನೀಡಿಲ್ಲ.
ಪೊಲೀಸ್ ಠಾಣೆಗೆ ದೂರು ನೀಡಲು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತನಗೆ ಸೂಚಿಸಿದ್ದಾರೆ. ಹಿರಿಯ ಅಧಿಕಾರಿಗಳ ನಿದೇರ್ಶನದ ಮೇರೆಗೆ ದೂರು ನೀಡುತ್ತಿದ್ದು ಶಿಸ್ತಿನ ನೆಪದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿರುವ ಶಿಕ್ಷಕಿ ವಿರುದ್ಧ ಜೆ.ಜೆ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕು ಎಂದು ಅಮೃತಾ ವಿ ಕುರಣೆ ದೂರಿನಲ್ಲಿ ಒತ್ತಾಯಿಸಿದ್ದಾರೆ.