ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಖಾಸಗಿ ಅನುದಾನಿತ, ಅನುದಾನರಹಿತ ಶಾಲೆಗಳ ಮಾನ್ಯತೆ, ಮಾನ್ಯತೆ ನವೀಕರಣಕ್ಕೆ ಕಟ್ಟಡ ಸುರಕ್ಷತೆ ಮತ್ತು ಅಗ್ನಿ ಸುರಕ್ಷತೆ ಪ್ರಮಾಣಪತ್ರ ಸಲ್ಲಿಸಬೇಕೆಂಬ ನಿಯಮದಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
‘ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ಟಿಪ್ಪಣಿಯಂತೆ, 2022–23ನೇ ಸಾಲಿಗೆ ಮಾನ್ಯತೆ ಅಥವಾ ಮಾನ್ಯತೆ ನವೀಕರಣ ನೀಡಲುಕಟ್ಟಡ ಸುರಕ್ಷತೆ ಮತ್ತು ಅಗ್ನಿ ಸುರಕ್ಷತೆ ಪ್ರಮಾಣಪತ್ರ ಸಲ್ಲಿಸುವ ಷರತ್ತಿನಂತೆ ಮುಚ್ಚಳಿಕೆ ಪ್ರಮಾಣಪತ್ರ ಪಡೆದು, ಒಂದು ವರ್ಷದ ಮಟ್ಟಿಗೆ ವಿನಾಯಿತಿ ನೀಡಲಾಗುವುದು’ ಎಂದು ಆದೇಶದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ತಿಳಿಸಿದ್ದಾರೆ.
ವೈಜ್ಞಾನಿಕ ಮಾರ್ಗಸೂಚಿ ರಚಿಸಿ: ಅಗ್ನಿ ಸುರಕ್ಷತೆ ಹಾಗೂ ಕಟ್ಟಡ ದಕ್ಷತೆ ಪ್ರಮಾಣಪತ್ರ ಸಲ್ಲಿಸಬೇಕೆಂಬ ನಿಯಮದಿಂದ ವಿನಾಯಿತಿ ನೀಡಿರುವುದನ್ನು ಸ್ವಾಗತಿಸಿರುವ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಆಡಳಿತ ಒಕ್ಕೂಟದ (ರುಪ್ಸ) ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ, ‘ಅಗ್ನಿ ಸುರಕ್ಷತಾ ಪ್ರಮಾಣಪತ್ರದ ವಿಚಾರದಲ್ಲಿ ವೈಜ್ಞಾನಿಕ ಮಾರ್ಗಸೂಚಿಯನ್ನು ರಚಿಸಿ, ಖಾಸಗಿ ಶಾಲೆಗಳಿಗೆ ಭ್ರಷ್ಟಾಚಾರ ರಹಿತವಾಗಿ ಮತ್ತು ಸುಲಭವಾಗಿ ಸಿಗುವಂತೆ ಮಾಡಬೇಕು’ ಎಂದು ಮನವಿ ಮಾಡಿದ್ದಾರೆ.
‘ವಿಧಾನಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರು ನೇತೃತ್ವದಲ್ಲಿ ಕಳೆದ ತಿಂಗಳು ಸಿ.ಎಂ ಭೇಟಿಯಾದಾಗ, ಕಟ್ಟಡ ಗುಣಮಟ್ಟ, ಅಗ್ನಿ ಸುರಕ್ಷತೆ ಪ್ರಮಾಣಪತ್ರಗಳ ಅಗತ್ಯ ಕುರಿತು ಎರಡು ವರ್ಷ ವಿನಾಯಿತಿ ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದರು. ಈಗ ಒಂದು ವರ್ಷಕ್ಕೆ ವಿನಾಯಿತಿ ನೀಡಿ ಆದೇಶ ಹೊರಡಿಸಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.