ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಶುಭ ಕೋರಿದ ಗಣ್ಯರು

Last Updated 16 ಡಿಸೆಂಬರ್ 2020, 21:19 IST
ಅಕ್ಷರ ಗಾತ್ರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ನಾಡಿನ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.

ಕುಮಾರಸ್ವಾಮಿ ಅವರಿಗೆ ಟ್ವೀಟ್‌ ಮೂಲಕ ಶುಭ ಕೋರಿರುವ ಪ್ರಧಾನಿ ನರೇಂದ್ರ ಮೋದಿ, 'ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಸರ್ವಶಕ್ತನಾದ ಭಗವಂತನು ಅವರಿಗೆ ಉತ್ತಮ ಆರೋಗ್ಯದಿಂದ ಕೂಡಿದ ದೀರ್ಘ ಜೀವನವನ್ನು ಕರುಣಿಸಲಿ' ಎಂದು ತಿಳಿಸಿದ್ದಾರೆ.

ಎಚ್‌ಡಿಕೆ ಅವರಿಗೆ ಟ್ವೀಟ್‌ ಮೂಲಕ ಶುಭ ಹಾರೈಸಿರುವ ಯಡಿಯೂರಪ್ಪ, 'ಮಾಜಿ ಮುಖ್ಯಮಂತ್ರಿಗಳು, ಆತ್ಮೀಯರೂ ಆಗಿರುವ ಶ್ರೀ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಆಶೀರ್ವಾದ ಸದಾ ಇರಲಿ ಎಂಬುದಾಗಿ ಹಾರೈಸುತ್ತೇನೆ' ಎಂದು ತಿಳಿಸಿದ್ದಾರೆ.

ಕುಮಾರಸ್ವಾಮಿ ಅವರಿಗೆ ಶುಭ ಕೋರಿ ಟ್ವೀಟ್‌ ಮಾಡಿರುವ ಸಂಸದೆ ಶೋಭಾ ಕರಂದ್ಲಾಜೆ, 'ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಭಗವಂತ ತಮಗೆ ಉತ್ತಮ ಆರೋಗ್ಯ ನೀಡಿ ಇನ್ನಷ್ಟು ದೀರ್ಘ ಕಾಲ ನಾಡಿನ ಸೇವೆ ಮಾಡುವಂತಾಗಲಿ' ಎಂದು ಹಾರೈಸಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಸಚಿವರಾದ ಜಗದೀಶ್‌ ಶೆಟ್ಟರ್‌, ಶ್ರೀರಾಮುಲು ಸಂಸದ ಬಿ.ವೈ.ರಾಘವೇಂದ್ರ, ಜೆ.ಡಿ.ಎಸ್‌ ಮುಖಂಡರಾದ ವೈ.ಎಸ್‌.ವಿ ದತ್ತಾ, ಪ್ರಜ್ವಲ್‌ ರೇವಣ್ಣ ಮತ್ತು ಹಿರಿಯ ಕ್ರಿಕೆಟಿಗ ದೊಡ್ಡ ಗಣೇಶ ಸೇರಿದಂತೆ ಹಲವು ಗಣ್ಯರು ಕುಮಾರಸ್ವಾಮಿ ಅವರಿಗೆ ಟ್ವೀಟ್‌ ಮೂಲಕ ಶುಭ ಕೋರಿದ್ದಾರೆ.

ಕೊರೊನಾ ಸಂಕಷ್ಟವು ಜನರನ್ನು ಬಾಧಿಸುತ್ತಿರುವ ಈ ಸಂದರ್ಭದಲ್ಲಿ ಜನ್ಮದಿನ ಆಚರಿಸದಿರಲು ನಿರ್ಧರಿಸಿರುವುದಾಗಿ ಕುಮಾರಸ್ವಾಮಿ ಅವರು ಸೋಮವಾರ ಟ್ವೀಟ್‌ ಮಾಡಿದ್ದರು.

ವ್ಯಾಖ್ಯಾನಕ್ಕೆ ಕಾರಣವಾದ ಮೋದಿ ಶುಭಾಶಯ!
ಬೆಂಗಳೂರು: ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರ ಸ್ವಾಮಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಟ್ವಿಟರ್‌ ಮೂಲಕ ಜನ್ಮದಿನದ ಶುಭಾಶಯ ಕೋರಿದ ಬಗ್ಗೆ ರಾಜಕೀಯ ವಲಯಗಳಲ್ಲಿ ವಿವಿಧ ವ್ಯಾಖ್ಯಾನಗಳಿಗೆ ಕಾರಣವಾಗಿದೆ.

‘ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಜನ್ಮದಿನದ ಶುಭಾಶಯಗಳು. ದೇವರು ಅವರಿಗೆ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯ ನೀಡಲಿ’ ಎಂದು ಪ್ರಧಾನಿ ಟ್ವೀಟ್‌ ಮಾಡಿದ್ದಾರೆ. ‘ಪ್ರಧಾನಿಯವರೇ ನಿಮ್ಮ ಶುಭ ಹಾರೈಕೆ ಗಳಿಗೆ ಧನ್ಯವಾದಗಳು’ ಎಂದು ಕುಮಾರ ಸ್ವಾಮಿ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಪ್ರಧಾನಿ ಮಾತ್ರವಲ್ಲ ಬಿಜೆಪಿಯ ರಾಷ್ಟ್ರೀಯ ಮುಖಂಡರು, ರಾಜ್ಯದ ಹಿರಿಯ ಮುಖಂಡರು, ಸಚಿವರು, ಸಂಸದರು ಸೇರಿದಂತೆ ಹಲವರು ಕುಮಾರಸ್ವಾಮಿ ಅವರಿಗೆ ಶುಭಾಶಯ ಕೋರಿದ್ದಾರೆ. ಎಪಿಎಂಸಿ ಮತ್ತು ಭೂ ಸುಧಾರಣಾ ಕಾಯ್ದೆಗಳ ತಿದ್ದುಪಡಿ ಮಸೂದೆಗಳನ್ನು ಬೆಂಬಲಿಸಿರುವುದು ಮತ್ತು ವಿಧಾನ ಪರಿಷತ್‌ ಸಭಾಪತಿ ವಿರುದ್ಧದ ಅವಿಶ್ವಾಸ ನಿಲುವಳಿಗೆ ಕೈಜೋಡಿಸಿದ ಬಳಿಕ ಎರಡೂ ಪಕ್ಷಗಳ ನಂಟು ಬಲಗೊಳ್ಳುತ್ತಿದೆ.

‘ಮೈತ್ರಿ‘ಯ ಮೂಲಕ ವಿಧಾನ ಪರಿಷತ್‌ ಸಭಾಪತಿಯವರ ಪದ ಚ್ಯುತಿಗೂ ಸಜ್ಜಾಗಿವೆ. ಈ ಬೆಳವಣಿಗೆಗಳ ನಡುವೆಯೇ ಪ್ರಧಾನಿ ಸೇರಿದಂತೆ ಬಿಜೆಪಿಯ ಹಲವು ಪ್ರಮುಖರು ಕುಮಾರಸ್ವಾಮಿ ಅವರಿಗೆ ಶುಭಾಶಯ ಕೋರಿದ್ದಾರೆ. ಅಲ್ಲದೆ, ಮುಂದಿನ ವಿಧಾನಸಭೆ, ಲೋಕಸಭೆ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಜೆಡಿಎಸ್‌ ಜತೆ ಸ್ನೇಹ ಬೆಳೆಸಲು ಬಿಜೆಪಿ ಉದ್ದೇಶಿಸಿದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT