ಬೆಂಗಳೂರು: '101.3 ಎಫ್ ಎಂ ರೇನ್ ಬೋ ಕನ್ನಡ ಕಾಮನಬಿಲ್ಲುʼರೇಡಿಯೊ ವಾಹಿನಿಯ ಕತ್ತು ಕೊಯ್ಯುವ ಕೆಲಸಕ್ಕೆ ಕೇಂದ್ರ ಸರಕಾರ ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ಆರೋಪಿಸಿದ್ದಾರೆ.
ಕನ್ನಡದ ಕೆಚ್ಚನ್ನು ಮಣಿಸಿ, ಕರ್ನಾಟಕವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡುವ ಸಕಲ ಪ್ರಯತ್ನವನ್ನೂ ಕೇಂದ್ರ ಸರಕಾರ ಮಾಡುತ್ತಿದೆ ಎನ್ನುವುದಕ್ಕೆ ಇಲ್ಲಿದೆ ಇನ್ನೊಂದು ಸಾಕ್ಷಿ. ಈಗ ನೇರವಾಗಿ ಕನ್ನಡದ ಎದೆ ಮೇಲೆ ಕಾಲಿಡುವ ದುಷ್ಟ ಸಂಚು ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ.
ಕನ್ನಡದ ಕೆಚ್ಚನ್ನು ಮಣಿಸಿ, ಕರ್ನಾಟಕವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡುವ ಸಕಲ ಪ್ರಯತ್ನವನ್ನೂ ಕೇಂದ್ರ ಸರಕಾರ ಮಾಡುತ್ತಿದೆ ಎನ್ನುವುದಕ್ಕೆ ಇಲ್ಲಿದೆ ಇನ್ನೊಂದು ಸಾಕ್ಷಿ. ಈಗ ನೇರವಾಗಿ ಕನ್ನಡದ ಎದೆ ಮೇಲೆ ಕಾಲಿಡುವ ದುಷ್ಟ ಸಂಚು ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. 1/8 pic.twitter.com/qLMUx9LFtJ
— H D Kumaraswamy (@hd_kumaraswamy) January 28, 2022
ಸೂರ್ಯೋದಯಕ್ಕೆ ಮುನ್ನವೇ ಪ್ರಸಾರ ಆರಂಭಿಸಿ ರಾತ್ರಿ 11ರ ತನಕ ಸತತ 18 ಗಂಟೆ ಕಾಲ ನಿರಂತರವಾಗಿ ಕನ್ನಡ ಕಾರ್ಯಕ್ರಮಗಳನ್ನು ನೀಡುತ್ತಿರುವ ʼ101.3 ಎಫ್ ಎಂ ರೇನ್ ಬೋ ಕನ್ನಡ ಕಾಮನಬಿಲ್ಲುʼರೇಡಿಯೊ ವಾಹಿನಿಯ ಕತ್ತು ಕುಯ್ಯುವ ಕೆಲಸಕ್ಕೆ ಕೇಂದ್ರ ಸರಕಾರ ಹೊರಟಿರುವುದು ಅಕ್ಷಮ್ಯ. ಕನ್ನಡಕ್ಕೆ ಕೊಡಲಿ ಪೆಟ್ಟು ಎಂದು ಆರೋಪಿಸಿದ್ದಾರೆ.
‘ರೇನ್ ಬೋ ಕನ್ನಡ ಕಾಮನಬಿಲ್ಲುʼಕೇವಲ ರೇಡಿಯೋ ವಾಹಿನಿ ಮಾತ್ರವಲ್ಲ, ಕನ್ನಡಿಗರ ಹೃದಯಬಡಿತ, ಕನ್ನಡದ ಅಸ್ಮಿತೆ ಕೂಡ. ಆದರೆ, ಕೇಂದ್ರ ಸರಕಾರ ಕನ್ನಡಿಗರ ಭಾವನೆಗಳ ಜತೆ ಚೆಲ್ಲಾಟ ಆಡುತ್ತಿದೆ. ಅಧಿಕಾರಿಗಳ ಮೂಲಕ ಕನ್ನಡಮ್ಮನ ರಕ್ತ ಬಗೆಯುವ ಹೀನ ಕೆಲಸ ಮಾಡುತ್ತಿದೆ. ಈ ಹಿಂದೆ ಕನ್ನಡಿಗರ ಮನೆ ಮನದಲ್ಲಿ ತುಂಬಿದ್ದ ‘ಅಮೃತವರ್ಷಿಣಿʼಯನ್ನು ಮುಗಿಸಲಾಯಿತು. ಈಗ ಕನ್ನಡ ಕಾಮನಬಿಲ್ಲನ್ನು ಮುಗಿಸಲು ಹೊರಟಿದ್ದಾರೆ. ಕನ್ನಡ ವಿರೋಧಿ ಕೇಂದ್ರ ಸರಕಾರ, ಕನ್ನಡದ್ರೋಹಿ ಅಧಿಕಾರಿಗಳ ಕಪಿಮುಷ್ಠಿಯಲ್ಲಿ ಸಿಲುಕಿರುವ ಕನ್ನಡದ ಆಕ್ರಂದನವನ್ನು ಇನ್ನು ಸಹಿಸಲು ಸಾಧ್ಯವಿಲ್ಲ.
ಆಯಕಟ್ಟಿನಲ್ಲಿ ಕೂತಿರುವ ಹಿರಿಯ ಅಧಿಕಾರಿಗಳು ಕಸಾಯಿಗಳಂತೆ ಸಾವಿರಾರು ವರ್ಷಗಳ ಅಭಿಜಾತ ಭಾಷೆ ಕನ್ನಡದ ಮೇಲೆ ದಾಳಿ ನಡೆಸಿ ಕ್ರೂರವಾಗಿ ವಧೆ ಮಾಡುತ್ತಿದ್ದಾರೆ. ಕನ್ನಡನಾಡನ್ನು ಉದ್ಧಾರ ಮಾಡುತ್ತೇವೆಂದು ಗೆದ್ದುಹೋದ ಸಂಸದ ಮಹಾಶಯರು ಕನ್ನಡಕ್ಕೆ ಆಗುತ್ತಿರುವ ಅನ್ಯಾಯವನ್ನು ಸಹಿಸುತ್ತಿರುವುದು ಹೊಣೆಗೇಡಿತನವೇ ಸರಿ. ಕನ್ನಡಿಗರು ಸಹಿಷ್ಣುಗಳು, ಸೌಮ್ಯರು ಹೌದು. ಹಾಗೆಂದು, ತಾಯಿಭಾಷೆಗೆ ಕೊಳ್ಳಿ ಇಡುತ್ತಿರುವ ʼಭಾಷಾಂತಕʼರನ್ನು ನೋಡುತ್ತಾ ಸುಮ್ಮನೆ ಕೂರಲಾರರು, ನೆನಪಿರಲಿ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಸಂಸದರೆಲ್ಲರೂ ದನಿಯೆತ್ತಿ ಈ ರೇಡಿಯೋ ವಾಹಿನಿಯನ್ನು ಉಳಿಸಬೇಕು. ಮುಚ್ಚುವುದು ಅಥವಾ ಇನ್ನೊಂದರಲ್ಲಿ ವಿಲೀನ ಮಾಡುವುದನ್ನು ಸಹಿಸುವ ಪ್ರಶ್ನೆಯೇ ಇಲ್ಲ.ಎಫ್ ಎಂ ರೇನ್ ಬೋದ ಬಹುತೇಕ ನಿರೂಪಕರು ಅರೆಕಾಲಿಕ ಉದ್ಯೋಗಿಗಳು. ಸ್ಪಷ್ಟ ಕನ್ನಡ, ಅಚ್ಚ ಕನ್ನಡದ ರಾಯಭಾರಿಗಳು. ಅರ್ಥಪೂರ್ಣ ಕಾರ್ಯಕ್ರಮ, ಸುಶ್ರಾವ್ಯ ಹಾಡುಗಳ ಮೂಲಕ ಕೇಳುಗರೊಂದಿಗೆ ಸಂವಾದಿಯಾದವರು. ಈಗ ವಾಹಿನಿಯನ್ನೇ ನಿಲ್ಲಿಸುವ ಒಳಸಂಚು ಇವರೆಲ್ಲರಿಗೂ ಆಗುವ ಅನ್ಯಾಯ ಹಾಗೂ ಕನ್ನಡ, ಕನ್ನಡಿಗರಿಗೆ ಮಾಡುವ ಅಪಚಾರ.ಕನ್ನಡಿಗರಿಗೆ ಕಿರುಕುಳ ನೀಡಿ ವಿಕೃತ ಸಂತೋಷಪಡುವ ಮನಃಸ್ಥಿತಿ ಅಳಿಯಲಿ. ಭಾರತ ಒಕ್ಕೂಟ ರಾಜ್ಯಗಳ ಆಗರ ಎನ್ನುವುದು ನೆನಪಿರಲಿ. ಆ ಆಶಯಕ್ಕೆ ಮುಕ್ಕಾಗುವುದು ಖಂಡಿತಾ ಬೇಡ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.