ಬೆಂಗಳೂರು: ನಗರದ ಶೇಷಾದ್ರಿ ರಸ್ತೆಯಲ್ಲಿರುವ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಆವರಣದಲ್ಲಿ ₹ 13.50 ಕೋಟಿ ವೆಚ್ಚದಲ್ಲಿ ಪೂರಕ ಕಟ್ಟಡ ನಿರ್ಮಾಣಕ್ಕೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಮಂಗಳವಾರ ಭೂಮಿಪೂಜೆ ನೆರವೇರಿಸಿದರು.
ಮುಖ್ಯ ಚುನಾವಣಾಧಿಕಾರಿ ಕಚೇರಿ ಕಟ್ಟಡದಲ್ಲಿ ಸ್ಥಳಾವಕಾಶದ ಕೊರತೆ ಇದೆ. ಈ ಕಾರಣದಿಂದ ಪೂರಕ ಕಟ್ಟಡ ನಿರ್ಮಿಸುವ ಪ್ರಸ್ತಾವಕ್ಕೆ ರಾಜ್ಯ ಸರ್ಕಾರ ಮಂಜೂರಾತಿ ನೀಡಿತ್ತು. ಲೋಕೋಪಯೋಗಿ ಇಲಾಖೆಗೆ ಕಟ್ಟಡ ನಿರ್ಮಾಣದ ಜವಾಬ್ದಾರಿ ವಹಿಸಲಾಗಿದೆ.
ಇವಿಎಂ ದಾಸ್ತಾನು ಕಟ್ಟಡಗಳ ಉದ್ಘಾಟನೆ: ಬೆಂಗಳೂರು ಗ್ರಾಮಾಂತರ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ಮತ್ತು ವಿವಿಪ್ಯಾಟ್ ಯಂತ್ರಗಳನ್ನು ದಾಸ್ತಾನು ಇರಿಸಲು ನಿರ್ಮಿಸಿರುವ ಕಟ್ಟಡಗಳನ್ನೂ ರಾಜ್ಯಪಾಲರು ಇದೇ ಸಂದರ್ಭದಲ್ಲಿ ವರ್ಚ್ಯುಯಲ್ ಆಗಿ ಉದ್ಘಾಟಿಸಿದರು.
₹ 123.05 ಕೋಟಿ ವೆಚ್ಚದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಇವಿಎಂ ಮತ್ತು ವಿವಿಪ್ಯಾಟ್ ದಾಸ್ತಾನು ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ನಾಲ್ಕು ಜಿಲ್ಲೆಗಳಲ್ಲಿ ಕಟ್ಟಡ ನಿರ್ಮಾಣ ಪೂರ್ಣಗೊಂಡಿದೆ. ಏಳು ಜಿಲ್ಲೆಗಳಲ್ಲಿ ಶೇಕಡ 90ರಷ್ಟು ಕಾಮಗಾರಿ ಮುಗಿದಿದೆ. 13 ಜಿಲ್ಲೆಗಳಲ್ಲಿ ಶೇ 70ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಐದು ಜಿಲ್ಲೆಗಳಲ್ಲಿ ಶೀಘ್ರದಲ್ಲಿ ಕಾಮಗಾರಿ ಆರಂಭವಾಗಲಿದೆ. ಪ್ರಸಕ್ತ ವರ್ಷದ ನವೆಂಬರ್ ಅಂತ್ಯದೊಳಗೆ ಎಲ್ಲ ಕಟ್ಟಡಗಳ ನಿರ್ಮಾಣ ಪೂರ್ಣಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದರು.
ಮುಖ್ಯ ಚುನಾವಣಾಧಿಕಾರಿ ಡಾ.ಸಂಜೀವ್ ಕುಮಾರ್, ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ ಇದ್ದರು.