ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಜಾಮೀನು ಕೋರಿ 6 ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ನಗರದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ.
ರಾಜರಾಜೇಶ್ವರಿನಗರದ ಐಡಿಯಲ್ ಹೋಮ್ಸ್ ಟೌನ್ಶಿಪ್ನಲ್ಲಿರುವ ಮನೆ ಎದುರೇ 2017ರ ಸೆಪ್ಟೆಂಬರ್ 5ರಂದು ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ವಿಶೇಷ ತನಿಖಾ ದಳದ (ಎಸ್ಐಟಿ) ಅಧಿಕಾರಿಗಳು, 16 ಆರೋಪಿಗಳನ್ನು ಬಂಧಿಸಿದ್ದರು. ಸದ್ಯ ಅವರೆಲ್ಲರೂ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಆರೋಪಿಗಳ ಪೈಕಿ ಅಮಿತ್ ದೇಗ್ವೇಕರ್, ಭರತ್ ಕುರ್ನೆ, ಸುಧನ್ವಾ ಗೊಂಧಲೇಕರ್, ಸುಜಿತ್ಕುಮಾರ್ ಅಲಿಯಾಸ್ ಪ್ರವೀಣ್, ಮನೋಹರ್ ಯಡವೆ ಹಾಗೂ ರಾಜೇಶ್ ಬಂಗೇರ್ ಜಾಮೀನು ಕೋರಿ ತಮ್ಮ ವಕೀಲರ ಮೂಲಕ ಕಳೆದ ವರ್ಷವೇ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ, ಆರೂ ಆರೋಪಿಗಳ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಶನಿವಾರ ಆದೇಶ ಹೊರಡಿಸಿದೆ. ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ಅರ್ಜಿದಾರರ ಪರ ವಕೀಲ ಉಮಾಶಂಕರ್ ಮೇವುಂಡಿ, ‘ತೀರ್ಪಿನಪ್ರತಿ ಪಡೆದು ಕೂಲಂಕುಷವಾಗಿ ಅಧ್ಯಯನ ನಡೆಸಲಾಗುವುದು. ಯಾವ ಆಧಾರದಲ್ಲಿ ಜಾಮೀನು ತಿರಸ್ಕರಿಸಲಾಗಿದೆ ಎಂಬುದನ್ನು ತಿಳಿದುಕೊಳ್ಳಲಾಗುವುದು. ನಂತರವೇ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗುವುದು’ ಎಂದರು.