ಬೆಂಗಳೂರು: ‘ಮೈಸೂರಿನ ಸೈಯದ್ ಇಸಾಕ್ ಅವರ ಸಾರ್ವಜನಿಕ ಗ್ರಂಥಾಲಯಕ್ಕೆ ಸರ್ಕಾರದಿಂದ ನೆರವು ನೀಡಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ತಿಳಿಸಿದ್ದಾರೆ.
ಗ್ರಂಥಾಲಯಕ್ಕೆ ರಾಜಾರಾಂ ಮೋಹನರಾಯ್ ಗ್ರಂಥಾಲಯ ಪ್ರತಿಷ್ಠಾನದ ವತಿಯಿಂದ ಸಹಾಯ ಧನವನ್ನು ಮಂಜೂರು ಮಾಡಲು ಕೂಡಲೇ ಪ್ರಸ್ತಾವ ಸಲ್ಲಿಸಬೇಕೆಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಗೆ ಅವರು ಸೂಚನೆ ನೀಡಿದ್ದಾರೆ.
ದುಷ್ಕರ್ಮಿಗಳ ಕೃತ್ಯದಿಂದ 10 ಸಾವಿರಕ್ಕೂ ಹೆಚ್ಚು ಪುಸ್ತಕಗಳು ಭಸ್ಮವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನೆರವಿಗೆ ಧಾವಿಸಲು ಸಾರ್ವಜನಿಕ ಗ್ರಂಥಾಲಯ ಇಲಾಖೆಗೆ ಟಿಪ್ಪಣಿ ಮೂಲಕ ಸಚಿವರು ಸೂಚಿಸಿದ್ದಾರೆ.
ಇಲಾಖೆಯ ವತಿಯಿಂದ ನಿರ್ದಿಷ್ಟ ವರ್ಷದ ಪುಸ್ತಕ ಆಯ್ಕೆಯಾಗಿ ಲೇಖಕರು ಮತ್ತು ಪ್ರಕಾಶಕರಿಂದ ಸ್ವೀಕರಿಸಲ್ಪಟ್ಟು ಇಲಾಖೆಯಲ್ಲಿ ಸಂಗ್ರಹಿಸಲಾಗುವ ಆಯ್ದ ಪುಸ್ತಕಗಳನ್ನು ಇಸಾಕ್ ಅವರ ಗ್ರಂಥಾಲಯಕ್ಕೆ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದೂ ಅವರು ಸೂಚನೆ ನೀಡಿದ್ದಾರೆ.