ಪಾಲಿಕೆ ಫಲಿತಾಂಶದಲ್ಲಿ ಮುನ್ನಡೆ: ಸರ್ಕಾರಕ್ಕೆ ಜನಬೆಂಬಲ ಸಾಬೀತು ಎಂದ ಬೊಮ್ಮಾಯಿ

ಬೆಂಗಳೂರು: ಮೂರು ಮಹಾನಗರ ಪಾಲಿಕೆಗಳೂ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶವು ರಾಜ್ಯದ ಬಿಜೆಪಿ ಸರ್ಕಾರಕ್ಕೆ ಜನಬೆಂಬಲ ಇರುವುದನ್ನು ಸಾಬೀತುಪಡಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಸೋಮವಾರ ನಡೆದ ಐಪಿಎಸ್ ಅಧಿಕಾರಿಗಳ ಸಮ್ಮೇಳನದ ಬಳಿಕ ಚುನಾವಣಾ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ ಅವರು, ‘ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದಿದೆ. ರಾಷ್ಟ್ರೀಯ ಪಕ್ಷವಾದ ಬಿಜೆಪಿ ಜತೆ ಬೆಳಗಾವಿ ಜನರು ಇರುವುದು ಸಾಬೀತಾಗಿದೆ. ಕಲಬುರ್ಗಿ ಮತ್ತು ಧಾರವಾಡ ಮಹಾನಗರ ಪಾಲಿಕೆಗಳಲ್ಲೂ ನಮ್ಮ ಪಕ್ಷ ಅಧಿಕಾರ ಹಿಡಿಯಲಿದೆ’ ಎಂದರು.
ಹುಬ್ಬಳ್ಳಿ– ಧಾರವಾಡ ಬಿಜೆಪಿಯ ಭದ್ರಕೋಟೆ. ಅಲ್ಲಿ ಮತ್ತೊಮ್ಮೆ ಹೆಚ್ಚಿನ ಸ್ಥಾನಗಳು ಲಭಿಸಿವೆ. ಈ ಚುನಾವಣೆಯು ಭವಿಷ್ಯದ ದಿನಗಳ ದಿಕ್ಸೂಚಿಯಂತೆ ಇದೆ ಎಂದು ಹೇಳಿದರು.
‘ಪಕ್ಷದ ಸ್ಥಳೀಯ ಘಟಕಗಳ ಅಧ್ಯಕ್ಷರು, ಹಿರಿಯ ಮುಖಂಡರ ಶ್ರಮದಿಂದ ಹೆಚ್ಚು ಸ್ಥಾನಗಳು ದೊರಕಿವೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೂ ಹೆಚ್ಚು ಶ್ರಮ ಹಾಕಿದ್ದರು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇವೆ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.