ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾತಿ ಗಣತಿ ಕುರಿತ ವರದಿ: ಸಿದ್ದರಾಮಯ್ಯ ವಿರುದ್ಧ ಎಚ್‌ಡಿಕೆ ಪರೋಕ್ಷ ವಾಗ್ದಾಳಿ

ಸಹಿಯಿಲ್ಲದ ವರದಿ ಅಧಿಕೃತವಾಗುವುದು ಹೇಗೆ? 5 ವರ್ಷ ಆಡಳಿತದಲ್ಲಿದ್ದವರಿಗೆ ಜ್ಞಾನ ಇಲ್ಲವೆ?: ಎಚ್‌ಡಿಕೆ
Last Updated 8 ಸೆಪ್ಟೆಂಬರ್ 2021, 15:26 IST
ಅಕ್ಷರ ಗಾತ್ರ

ಬೆಂಗಳೂರು: ಎಚ್‌.ಕಾಂತರಾಜು ನೇತೃತ್ವದ ಆಯೋಗದ ಸಾಮಾಜಿಕ-ಶೈಕ್ಷಣಿಕ ಸಮೀಕ್ಷಾ ವರದಿ ಬಹಿರಂಗ ಪಡಿಸುವ ವಿಚಾರಕ್ಕೆ ಸಂಬಂಧಿಸಿ ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು ಸರಣಿ ಟ್ವೀಟ್‌ ಮೂಲಕ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೆಸರನ್ನು ಹೇಳದೆ ಟೀಕಾಪ್ರಹಾರ ನಡೆಸಿದ್ದಾರೆ.

‘ಸಹಿ ಇಲ್ಲದ ವರದಿ ಸಲ್ಲಿಸಲಾಗಿದೆ’ಎಂದು ಸಚಿವರು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರೇ ಹೇಳಿದ್ದಾರೆ. ಸಹಿಯೇ ಇಲ್ಲದ ವರದಿ ಅಧಿಕೃತ ಹೇಗಾಗುತ್ತದೆ? ಐದು ವರ್ಷ ಆಡಳಿತ ನಡೆಸಿದವರಿಗೆ, ಸಂವಿಧಾನದ ಬಗ್ಗೆ ಹಾದಿಬೀದಿಯಲ್ಲಿ ನಿಂತು ಪಾಠ ಮಾಡುವವರಿಗೆ ಈ ಮಟ್ಟಿಗೆ ಜ್ಞಾನ ಇಲ್ಲವೇ? ಎಂದು ಕುಮಾರಸ್ವಾಮಿ ಮೂದಲಿಸಿದ್ದಾರೆ.

ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸುವ ಪ್ರತಿ ವರದಿಯನ್ನು ಸದಸ್ಯ ಕಾರ್ಯದರ್ಶಿ ಅಧಿಕೃತಗೊಳಿಸದ ಹೊರತು ಸರ್ಕಾರಕ್ಕೆ ಸಲ್ಲಿಸಲು ಸಾದ್ಯವಿಲ್ಲ. ಈ ಕಾರಣದಿಂದ ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿಯ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿಲ್ಲ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಉಡುಪಿಯ ‘ಅಂತ್ಯೋದಯ’ ಮಾಹಿತಿ ಕಾರ್ಯಾಗಾರದಲ್ಲಿ ತಿಳಿಸಿದ ಬೆನ್ನಲ್ಲೇ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.

ಚುನಾವಣೆ ಬಂದಾಗ ಯಾವುದೋ ಒಂದು ವಿಷಯವನ್ನು ಆಯ್ಕೆ ಮಾಡಿಕೊಂಡು ಪ್ರಚಾರ ಗಿಟ್ಟಿಸುವುದು ಸರಿಯಲ್ಲ. ಅಧಿಕಾರ ಇದ್ದಾಗಲೇ ಸಲ್ಲಿಕೆಯಾಗಿದ್ದ ಈ ವರದಿಯನ್ನು ಬಿಡುಗಡೆ ಮಾಡಲು ನಿರ್ಲಕ್ಷ್ಯ ತೋರಿದ್ದು ಯಾಕೆ? ಕುದುರೆ ಇದ್ದಾಗಲೇ ಏರಲಿಲ್ಲ, ಇನ್ನೊಬ್ಬರು ಕುದುರೆ ಮೇಲಿದ್ದಾಗ ಅವರನ್ನು ಕೆಳಕ್ಕೆ ಕೆಡವಲು ಏಕೀ ಕೆಟ್ಟ ಉತ್ಸಾಹ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ರಾಜಕಾರಣದಲ್ಲಿ ಕ್ಷಣಕ್ಕೊಂದು ಬಣ್ಣ ಬದಲಿಸಿಕೊಂಡು ಓಡಾಡುವವರ ಬಗ್ಗೆ ನನಗೆ ಗೊತ್ತಿದೆ. ಇವರು ರಾಜಕೀಯ ಊಸರವಳ್ಳಿಗಳು. ಜನರ ಪಾಲಿನ ಮಗ್ಗುಲ ಮುಳ್ಳುಗಳು! ಮುಳ್ಳನ್ನು ಹೇಗೆ ತೆಗೆಯಬೇಕು ಎಂಬುದು ಜನರಿಗೆ ಗೊತ್ತಿದೆ. ಆ ಕಾಲವೂ ಹತ್ತಿರದಲ್ಲೇ ಇದೆ. ಇವರು ಅಧಿಕಾರದಲ್ಲಿದ್ದಾಗಲೇ ಕಾಂತರಾಜು ಆಯೋಗದ ವರದಿಯು ಬಂದಿತ್ತು ಆಗಲೇ ಅಂಗೀಕರಿಸಿ ಬಿಡುಗಡೆ ಮಾಡಬಹುದಿತ್ತಲ್ಲ? ಹಾಗೆ ಮಾಡಲಿಲ್ಲ, ಯಾಕೆ? ಅವಕಾಶ ಇದ್ದಾಗ ಮಾಡದೇ ಈಗ ಆಷಾಢಭೂತಿತನ ಏಕೆ? ಜನರಿಗೆ ಅರ್ಥವಾಗದೆಂಬ ಅತಿಬುದ್ಧಿವಂತಿಕೆಯೇ? ಅತಿ ಬುದ್ಧಿವಂತರೆಲ್ಲ ಆಮೇಲೆ ಏನಾದರು ಎಂಬುದು ಕರ್ನಾಟಕದ ಜನತೆಗೆ ಚೆನ್ನಾಗಿ ಗೊತ್ತಿದೆ ಎಂದು ಪರೋಕ್ಷವಾಗಿ ಕುಮಾರಸ್ವಾಮಿ ಸಿದ್ದರಾಮಯ್ಯ ಅವರನ್ನು ತಿವಿದಿದ್ದಾರೆ.

ಎಲ್ಲದರಲ್ಲೂ ಸಿದ್ಧಹಸ್ತರಾದರೆ ಉಪಯೋಗವೇನು? ಸತ್ಯ ಹೇಳುವುದಕ್ಕೂ ಗುಂಡಿಗೆ ಬೇಕು. ಇನ್ನೊಬ್ಬರ ಎದೆಗಾರಿಕೆ ಪ್ರಶ್ನಿಸುವ ಮಹಾನುಭಾವರು, ತಮ್ಮ ಅವಧಿಯಲ್ಲಿ ಈ ವರದಿನ್ನೇಕೆ ಕುರ್ಚಿ ಕೆಳಗೆ ಹಾಕಿಕೊಂಡು ಕೂತಿದ್ದರು ಎಂಬುದಕ್ಕೆ ಉತ್ತರ ನೀಡಲಿ. ಸಹಿ ಇಲ್ಲದ ಕಾಗದ ಪತ್ರಕ್ಕೆ ಬೆಲೆ ಇಲ್ಲ. ಅಪ್ಪ ಅಮ್ಮನಿಲ್ಲದ ಕೂಸು ಅನಾಥ. ಹಾಗಾದರೆ, ಸಹಿ ಇಲ್ಲದ ವರದಿ ಸ್ವೀಕಾರ ಮಾಡಿ, ಆಗ ಸುಮ್ಮನಿದ್ದು, ಈಗ ಹಾಹಾಕಾರ ಮಾಡಿದರೇನು ಪ್ರಯೋಜನ? ಊಸರವಳ್ಳಿ ಉಸಾಬರಿ ಎಂದರೆ ಇದೇ ಇರಬೇಕು ಎಂದು ಕುಮಾರಸ್ವಾಮಿ ಜರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT