ಹಾಸನ: ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬ ಯುವ ರೈತನ ಮೃತಪಟ್ಟಿದ್ದು, ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೆಬ್ಬನಹಳ್ಳಿ ಗ್ರಾಮದಲ್ಲಿ ಮನು (34) ಕಾಡಾನೆ ದಾಳಿಯಿಂದ ಮೃತಪಟ್ಟ ಯುವ ರೈತ.
ದೇವಾಲಯದಲ್ಲಿ ಪೂಜೆ ಮುಗಿಸಿ ವಾಪಸ್ ಆಗುವ ವೇಳೆ ಏಕಾಏಕಿ ದಾಳಿ ನಡೆಸಿರುವ ಕಾಡಾನೆ ಮನು ಅವರನ್ನು ತುಳಿದು ಭೀಕರವಾಗಿ ಸಾಯಿಸಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡಿದ್ದು, ಸ್ಥಳೀಯರು ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಬರುವವರೆಗೆ ಮೃತದೇಹ ಎತ್ತಲು ಬಿಡುವುದಿಲ್ಲ ಎಂದು ಸ್ಥಳೀಯರು ಹಾಗೂ ಸಂಬಂಧಿಕರು ಪಟ್ಟು ಹಿಡಿದಿದ್ದಾರೆ.
ಮೂರ್ನಾಲ್ಕು ತಿಂಗಳಿಂದ ನಾಲ್ಕೈದು ಮಂದಿ ಆನೆ ತುಳಿತದಿಂದ ಮೃತಪಟ್ಟಿದ್ದು, ಕೇವಲ ಪರಿಹಾರವನ್ನು ವಿತರಣೆ ಮಾಡುವ ಮೂಲಕ ಸರ್ಕಾರ ಕೈ ತೊಳೆದುಕೊಳ್ಳುತ್ತಿದೆ. ಸಕಲೇಶಪುರ, ಆಲೂರು, ಬೇಲೂರು ಭಾಗದ ರೈತರು ನಿತ್ಯ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಜನರು ಆಕ್ರೋಶ ಹೊರ ಹಾಕಿದ್ದಾರೆ.