ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯ ಧ್ರುವೀಕರಣಕ್ಕೆ ಕಾಂಗ್ರೆಸ್‌, ಬಿಜೆಪಿ ಯತ್ನ: ಎಚ್‌.ಡಿ.ಕುಮಾರಸ್ವಾಮಿ

Last Updated 21 ಆಗಸ್ಟ್ 2020, 20:44 IST
ಅಕ್ಷರ ಗಾತ್ರ

ಬೆಂಗಳೂರು: ‘ಡಿ.ಜೆ.ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ರಾಜಕೀಯ ಧ್ರುವೀಕರಣಕ್ಕೆ ಪ್ರಯತ್ನಿಸುತ್ತಿವೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ದೂರಿದ್ದಾರೆ.

ಈ ಗಲಭೆಯು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆ ಆಗಿದೆ. ಇದನ್ನು ಪರಾಮರ್ಶಿಸಿ, ದುಷ್ಟರನ್ನು ಶಿಕ್ಷಿಸುವ ಕಾರ್ಯ ಆಗಬೇಕಿತ್ತು ಎಂದು ಅವರು ಬಹಿರಂಗ ಪತ್ರದಲ್ಲಿ ಹೇಳಿದ್ದಾರೆ. ಅಲ್ಲದೆ ಅವರು, ಎರಡೂ ಪಕ್ಷಗಳಿಗೆ ಪ್ರಶ್ನೆಗಳನ್ನು ಕೇಳಿದ್ದಾರೆ.

ಕಾಂಗ್ರೆಸ್‌ಗೆ ಪ್ರಶ್ನೆಗಳು
*ಡಿ.ಜೆ.ಹಳ್ಳಿ ಗಲಭೆ ಮತ್ತು ಪಾದರಾಯನಪುರ ಗಲಭೆಗಳ ಪ್ರಕರಣದಲ್ಲಿ ಕಾಂಗ್ರೆಸ್‌ ಅಲ್ಪಸಂಖ್ಯಾತರ ರಕ್ಷಕನಂತೆ ತನ್ನನ್ನು ತಾನು ಬಿಂಬಿಸಿಕೊಳ್ಳುತ್ತಿದೆ. ಅನ್ಯ ಕೋಮಿನ ಜನರ ಅಪರಾಧ ಪ್ರಕರಣಗಳ ಸಂದರ್ಭದಲ್ಲಿ ಎದ್ದು ನಿಲ್ಲುವ ಕಾಂಗ್ರೆಸ್‌, ಪೌರತ್ವ ತಿದ್ದುಪಡಿ ಕಾಯ್ದೆಯಂತಹ ದುರಿತ ಕಾಲದಲ್ಲಿ ಅಲ್ಪಸಂಖ್ಯಾತರ ರಕ್ಷಣೆಗೆ ಏಕೆ ನಿಲ್ಲಲಿಲ್ಲ?

* ಗಲಭೆಯಲ್ಲಿ ಆದ ನಷ್ಟವನ್ನು ಗಲಭೆಕೋರರಿಂದ ಸಂಗ್ರಹಿಸಲು ಹೊರಟ ಸರ್ಕಾರಕ್ಕೆ ‘ಇನ್ನೊಂದು ಕಡೆ’ ಯವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಕಾಂಗ್ರೆಸ್‌ ಹೇಳಿದೆ. ಹಾಗಾದರೆ, ಆ ‘ಇನ್ನೊಂದು ಕಡೆಯವರು’ ಎಂದರೆ ಯಾರು ಎಂಬುದನ್ನು ಕಾಂಗ್ರೆಸ್‌ ಧೈರ್ಯದಿಂದ ಹೇಳಬಹುದೇ?

*ಎಸ್‌ಡಿಪಿಐ ಅನ್ನು ನಿಷೇಧಿಸುವ ವಿಚಾರ ಬಂದಾಗ ಕಾಂಗ್ರೆಸ್‌ ಸಿಡಿದೆದ್ದು ನಿಲ್ಲುತ್ತದೆ. ತಾಕತ್ತಿದ್ದರೆ ಅದನ್ನು ನಿಷೇಧಿಸಿ ಎಂದು ಆಡಳಿತದಲ್ಲಿರುವವರಿಗೆ ಸವಾಲೆಸೆಯುತ್ತದೆ. ಅದರ ನಿಷೇಧವಾಗುವುದು, ಆಗದೇ ಇರುವುದರಲ್ಲಿ ಕಾಂಗ್ರೆಸ್‌ಗೆ ಏನು ಲಾಭವಿದೆ? ಇದರ ವಿವರಣೆ ನೀಡಬಹುದೇ?

*ಆಂತರಿಕ ಸಮಸ್ಯೆಯನ್ನು ಗಲಭೆಯಾಗಿ ಪರಿವರ್ತಿಸಿ, ಎರಡು ಕೋಮುಗಳ ನಡುವೆ ಮನಸ್ತಾಪ ತಂದಿಟ್ಟು, ಸಾಮಾಜಿಕ ಸಾಮರಸ್ಯ ಹಾಳು ಮಾಡಿದ ಬಗ್ಗೆ ಕಾಂಗ್ರೆಸ್‌ಗೆ ಅಳುಕಿದೆಯೆ?

ಬಿಜೆಪಿಗೆ ಪ್ರಶ್ನೆಗಳು
* ಡಿ.ಜೆ.ಹಳ್ಳಿ ಪ್ರಕರಣ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಗೃಹ ಇಲಾಖೆ, ಗುಪ್ತಚರ ಇಲಾಖೆ ಮತ್ತು ಸರ್ಕಾರದ ಅತಿ ದೊಡ್ಡ ವೈಫಲ್ಯ. ಘಟನೆಗೆ ಸಂಬಂಧಿಸಿದಂತೆ ಗೃಹ ಇಲಾಖೆಯ ಯಾವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದೆ?

* ಕಾಂಗ್ರೆಸ್‌ನ ಕೈವಾಡವಿದೆ ಎಂದು ಬೀದಿಯಲ್ಲಿ ಹೇಳುತ್ತಿರುವ ಬಿಜೆಪಿಯ ವಾಚಾಳಿ, ಬಾಯಿಬಡುಕ ಮಂತ್ರಿ, ಶಾಸಕರು ತಮ್ಮ ಬಳಿ ಇರುವ ಕಾಂಗ್ರೆಸ್‌ ವಿರುದ್ಧದ ಸಾಕ್ಷ್ಯಗಳನ್ನು ತನಿಖಾಧಿಕಾರಿಗಳಿಗೆ ಏಕೆ ಕೊಡಬಾರದು?

* ಗಲಭೆ ಸೃಷ್ಟಿಸಲೆಂದೇ ಅನ್ಯ ರಾಜ್ಯಗಳಿಂದ ಗೂಂಡಾಗಳನ್ನು ಕರೆತರಲಾಗಿತ್ತು ಎಂದು ಬಿಜೆಪಿ ಆರಂಭದಲ್ಲಿ ಹುಯಿಲೆಬ್ಬಿಸಿತು. ಹಾಗಾದರೆ, ಘಟನೆಗೆ ಸಂಬಂಧಿಸಿದಂತೆ ಈವರೆಗೆ ಬಂಧನಕ್ಕೊಳಗಾದ ಅನ್ಯರಾಜ್ಯದ ಗೂಂಡಾಗಳು ಎಷ್ಟು?

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT