ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ನೇತೃತ್ವದ ವಿಭಾಗೀಯ ಪೀಠ, ಕೋವಿಡ್–19ಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಹಲವು ಅರ್ಜಿಗಳ ವಿಚಾರಣೆ ನಡೆಸಿತು. ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ‘ಮಧ್ಯಾಹ್ನದ ಬಿಸಿಯೂಟ ಯೋಜನೆ ಸ್ಥಗಿತಗೊಂಡಿದ್ದ ಅವಧಿಗೆ ಸಂಬಂಧಿಸಿದಂತೆ ಮಕ್ಕಳಿಗೆ ಅಕ್ಕಿ ಅಥವಾ ಗೋಧಿಯ ಜತೆಗೆ ಅಡುಗೆ ತಯಾರಿಯ ವೆಚ್ಚದ ಬಾಬ್ತು, ತೊಗರಿ ಬೇಳೆಯನ್ನೂ ನೀಡಲಾಗುವುದು’ ಎಂದು ತಿಳಿಸಿದರು.