ನಿರ್ಮಾಣ ಚಟುವಟಿಕೆ ನಿಯಂತ್ರಣ: ಬೈಲಾ ಕಡ್ಡಾಯಕ್ಕೆ ಸೂಚನೆ

ಬೆಂಗಳೂರು: ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನಿರ್ಮಾಣ ಚಟುವಟಿಕೆ ನಿಯಂತ್ರಣ ಸಂಬಂಧ ರಾಜ್ಯ ಸರ್ಕಾರ ಬೈಲಾ ಕಡ್ಡಾಯಗೊಳಿಸುವ ಸಮಯ ಬಂದಿದೆ ಎಂದು ಹೈಕೋರ್ಟ್ ಹೇಳಿದೆ.
ಕರ್ನಾಟಕ ಪಂಚಾಯತ್ ರಾಜ್ (ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಪಂಚಾಯತಿ ಕಟ್ಟಡಗಳ ನಿರ್ಮಾಣ ನಿಯಂತ್ರಣ) ಮಾದರಿ ಬೈಲಾ–2015 ರಚನೆಯಾಗಿ ಏಳು ವರ್ಷಗಳು ಕಳೆದರೂ ಜಾರಿಗೆ ತಂದಿಲ್ಲ ಎಂಬುದನ್ನು ಗಮನಿಸಿದ ಪೀಠ, ಈ ಅಭಿಪ್ರಾಯಪಟ್ಟಿದೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಬಿದಿರುಕೋಟೆ ಗ್ರಾಮದಲ್ಲಿ ನಡೆದ ವಿವಾದಕ್ಕೆ ಸಂಬಂಧಿಸಿದ ಪ್ರಕರಣ ವಿಚಾರಣೆ ವೇಳೆ ರಾಜ್ಯದ ಬಹುತೇಕ ಪಂಚಾಯಿತಿಗಳು ಈ ಬೈಲಾ ಅಳವಡಿಸಿಕೊಂಡಿಲ್ಲ ಎಂಬುದನ್ನು ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಗಮನಿಸಿತು.
‘ಪಂಚಾಯತ್ ರಾಜ್ ಕಾಯ್ದೆಯ ಸೆಕ್ಷನ್ 316ರ ಪ್ರಕಾರ, ಬೈಲಾ ಅಳವಡಿಕೆ ಮಾಡಿಕೊಳ್ಳಬೇಕು. ಆ ರೀತಿ ಮಾಡದಿದ್ದರೆ ಸರ್ಕಾರವೇ ಅಧಿಸೂಚನೆ ಹೊರಡಿಸುವ ಮೂಲಕ ಬೈಲಾ ಜಾರಿಗೊಳಿಸಬೇಕು’ ಎಂದು ಪೀಠ ತಿಳಿಸಿತು.
‘ರಾಜ್ಯದಲ್ಲಿ ಪಂಚಾಯಿತಿ ವ್ಯಾಪ್ತಿಯ ಪ್ರದೇಶಗಳಲ್ಲಿ ನಿರ್ಮಾಣ ಚಟುವಟಿಕೆಗಳು ಜೋರಾಗಿ ನಡೆಯುತ್ತಿವೆ. ನಿಯಮಗಳ ಉಲ್ಲಂಘನೆ ಪಾಲಿಕೆ ವ್ಯಾಪ್ತಿಗಷ್ಟೇ ಸೀಮಿತವಾಗಿಲ್ಲ. ಪಂಚಾಯಿತಿ ವ್ಯಾಪ್ತಿಯಲ್ಲಿನ ನಿರ್ಮಾಣಗಳನ್ನು ನಿಯಂತ್ರಿಸಲು ಸರ್ಕಾರಕ್ಕೆ ಈಗ ಕಾಲ ಕೂಡಿ ಬಂದಿದೆ’ ಎಂದು ಹೇಳಿತು.
‘ಬೈಲಾ ರೂಪಿಸಿ 7 ವರ್ಷಗಳೇ ಕಳೆದರೂ ಪಂಚಾಯಿತಿಗಳು ಅಳವಡಿಕೆ ಮಾಡಿಕೊಳ್ಳಲು ಮುಂದಾಗಿಲ್ಲ. ಆದ್ದರಿಂದ ಅಳವಡಿಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರವೇ ಈಗ ಅಧಿಸೂಚನೆ ಹೊರಡಿಸಬೇಕು’ ಎಂದು ಪೀಠ ತಿಳಿಸಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.