ಬೆಂಗಳೂರು: ‘ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿರುವ ಸ್ವಾಯತ್ತ ಸಂಸ್ಥೆಗಳ ನೌಕರರಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ ಜ್ಯೋತಿ ಸಂಜೀವಿನಿ ಯೋಜನೆಯಡಿ ನಗದು ರಹಿತ ಕೋವಿಡ್ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಹೈಕೋರ್ಟ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ನೌಕರರ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ನೌಕರರೇ ಚಿಕಿತ್ಸಾ ವೆಚ್ಚ ಭರಿಸಿದ್ದರೆ ಅದನ್ನು ಮರುಪಾವತಿ ಮಾಡಬೇಕು ಎಂಬ ಮನವಿಯನ್ನು ಪರಿಗಣಿಸಿ’ ಎಂದು ತಿಳಿಸಿತು.
2014ರ ಆಗಸ್ಟ್ 18ರ ಅಧಿಸೂಚನೆಯಲ್ಲಿ ಉಲ್ಲೇಖಿಸಿರುವ ಏಳು ಕಾಯಿಲೆಗಳಿಗೆ ನಗದು ರಹಿತ ಚಿಕಿತ್ಸೆಯ ಪ್ರಯೋಜನ ವಿಸ್ತರಣೆ ಮಾಡುವ ಸಂಬಂಧ ಒಂದು ತಿಂಗಳಲ್ಲಿ ಕ್ರಮ ಕೈಗೊಳ್ಳುವಂತೆ ಪೀಠ ತಿಳಿಸಿತು.