ಬೆಂಗಳೂರು: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ, ಆ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಶಾಲಾ–ಕಾಲೇಜುಗಳ ತರಗತಿಗಳನ್ನು ಮುಂದುವರಿಸಲು ರೂಪಿಸಿರುವ ಕ್ರಿಯಾ ಯೋಜನೆ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಮುಂದುವರಿಸಲು ನಿರ್ದೇಶನ ನೀಡುವಂತೆ ಕೋರಿ ಎಂ.ರಾಧಾ ಮತ್ತು ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ನೇತೃತ್ವದ ವಿಭಾಗೀಯ ಪೀಠ, ಏ.22 ರೊಳಗೆ ವರದಿ ಸಲ್ಲಿಸುವಂತೆ ಸೂಚಿಸಿತು.
‘ಮಕ್ಕಳು ಶಾಲೆಗಳಿಗೆ ಹೋಗದಿದ್ದರೆ ಅವರನ್ನು ಬಾಲ ಕಾರ್ಮಿಕ ಪದ್ಧತಿ ಮತ್ತು ಕಳ್ಳಸಾಗಣೆಗೆ ಬಳಸಿಕೊಳ್ಳುವ ಸಾಧ್ಯತೆ ಇದೆ’ ಎಂದು ಪೀಠ ಕಳವಳ ವ್ಯಕ್ತಪಡಿಸಿತು. ಶಿಕ್ಷಣ ಪಡೆಯುವುದು ಮಕ್ಕಳ ಮೂಲಭೂತ ಹಕ್ಕು. ಅದನ್ನು ಕಾಪಾಡಲು ಸರ್ಕಾರ ಈ ಸವಾಲಿನ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಬೇಕಾಗುತ್ತದೆ. ಮಕ್ಕಳಿಗೆ ಶಿಕ್ಷಣದ ಹಕ್ಕು ಕೊಡಿಸುವ ಸಲುವಾಗಿಯೇ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಕರೆತರುವ ಪ್ರಯತ್ನ ನಡೆಯುತ್ತಿದೆ. ಅದು ಪರಿಪೂರ್ಣವಾಗಿ ಆಗಿದೆಯೇ’ ಎಂದು ಪೀಠ ಪ್ರಶ್ನಿಸಿದೆ.
ಮಧ್ಯಾಹ್ನದ ಬಿಸಿಯೂಟದ ಬದಲಿಗೆ ಪಡಿತರವನ್ನು ವಿತರಿಸಲಾಗುತ್ತಿದೆ ಎಂದು ಸರ್ಕಾರ, ನ್ಯಾಯಾಲಯಕ್ಕೆ ಮಾಹಿತಿ ನೀಡಿತು.
‘ಹಿಂದಿನ ಶೈಕ್ಷಣಿಕ ವರ್ಷಗಳಿಗೆ ಹೋಲಿಸಿದರೆ ಸುಮಾರು 9 ಸಾವಿರ ಮಕ್ಕಳ ಹಾಜರಾತಿ ಕಡಿಮೆಯಾಗಿದೆ.’ ಎಂದು ಅರ್ಜಿದಾರರ ಪರ ವಕೀಲರು ಆತಂಕ ವ್ಯಕ್ತಪಡಿಸಿದರು.