ಬೆಂಗಳೂರು: ಎಸ್ಸಿಎಸ್ಟಿ ಭೂ ಪರಭಾರೆ ನಿಷೇಧ ಕಾಯ್ದೆಯಲ್ಲಿನ (ಪಿಟಿಸಿಎಲ್) ನಿರ್ಬಂಧಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿರುವ ಕುರಿತು ವಿವರ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ತುಮಕೂರಿನ ಬಿ. ದಾಸಪ್ಪ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಸರ್ಕಾರ ಮಂಜೂರು ಮಾಡಿರುವ ಭೂಮಿಯನ್ನು ಸಂಬಂಧಿಸಿದ ಪ್ರಾಧಿಕಾರದ ಅನುಮತಿ ಪಡೆಯದೆ ವರ್ಗಾವಣೆ ಮಾಡುವುದನ್ನು ಕಾಯ್ದೆಯ ಸೆಕ್ಷನ್ 6ರಲ್ಲಿ ನಿರ್ಬಂಧಿಸಲಾಗಿದೆ. ಈ ಸೆಕ್ಷನ್ ಅನುಷ್ಠಾನಕ್ಕೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಪೀಠ ಹೇಳಿದೆ.
ಅರ್ಜಿದಾರರು ಎತ್ತಿರುವ ಪ್ರಶ್ನೆಗಳಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ನೀಡಿದ್ದ ಸಮಯ ವಿಸ್ತರಿಸಿದ ಪೀಠ, ಮಾರ್ಚ್ 2ಕ್ಕೆ ವಿಚಾರಣೆ ಮುಂದೂಡಿತು.