ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಷ್ಕೃತ ರೂಪದಲ್ಲಿ 'ವಿದ್ಯಾಗಮ’ ಯೋಜನೆ ಅನುಷ್ಠಾನ: ಸುರೇಶ್ ಕುಮಾರ್

ಕೋವಿಡ್‌ನಿಂದಾಗಿ ಶಾಲಾರಂಭ ತಡವಾದ ಕಾರಣ ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಲು ಶಿಕ್ಷಣ ಇಲಾಖೆ ಕ್ರಮ
Last Updated 15 ಡಿಸೆಂಬರ್ 2020, 19:39 IST
ಅಕ್ಷರ ಗಾತ್ರ

ಬೆಂಗಳೂರು: ‘ಕೋವಿಡ್-19‌ನಿಂದಾಗಿ ಶಾಲಾರಂಭ ತಡವಾದ ಕಾರಣ ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಕೈಗೊಂಡಿದ್ದ ವಿದ್ಯಾಗಮ ಯೋಜನೆಯನ್ನು ಪರಿಷ್ಕರಿಸಿ ಸುಧಾರಿತ ಮತ್ತು ಸುರಕ್ಷತಾ ಕ್ರಮಗಳೊಂದಿಗೆ ಹೊಸರೀತಿಯಲ್ಲಿ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

‘ಆಗಸ್ಟ್ 8 ರಿಂದ ಆರಂಭಿಸಲಾಗಿದ್ದ ವಿದ್ಯಾಗಮವನ್ನು ಅಕ್ಟೋಬರ್ 10ರಂದು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ವಿದ್ಯಾಗಮ ಆರಂಭಿಸಿದ್ದರಿಂದ ಮಕ್ಕಳು ಶಾಲೆಯಿಂದ ದೂರ ಉಳಿಯುವುದು, ಗ್ರಾಮೀಣ ಪ್ರದೇಶದಲ್ಲಿ ಪೋಷಕರೊಂದಿಗೆ ಶಾಲಾ ಸಮಯದಲ್ಲಿ ಕೆಲಸಗಳಿಗೆ ತೆರಳುವುದು, ಬಾಲ್ಯ ವಿವಾಹ, ಬಾಲ್ಯ ಕಾರ್ಮಿಕ ಪದ್ಧತಿಯಂತಹ ಪಿಡುಗುಗಳಿಗೆ ಬಲಿಯಾಗುವುದನ್ನು ತಪ್ಪಿಸಲು ಅನುವಾಗಿತ್ತು’ ಎಂದು ಅವರು ತಿಳಿಸಿದ್ದಾರೆ.

ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ವಿದ್ಯಾಗಮವನ್ನು ಹೈಕೋರ್ಟ್‌ನ ಅಪೇಕ್ಷೆಯಂತೆ ಸುರಕ್ಷತಾ ಕ್ರಮಗಳೊಂದಿಗೆ ಹೊಸ ರೂಪದಲ್ಲಿ ಅನುಷ್ಠಾನಗೊಳಿಸಲು ಇಲಾಖೆ ಮುಂದಾಗಿದ್ದು ಹಲವಾರು ಸುಧಾರಣೆಗಳನ್ನು ಕೈಗೊಂಡಿದೆ. ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಆವರಣದಲ್ಲಿ ವಿದ್ಯಾಗಮ ಕಾರ್ಯಕ್ರಮವು ನಡೆಯಲು ಅನುವು ಮಾಡಿಕೊಡಲಾಗಿದೆ. ಪ್ರಸ್ತುತ ಇರುವ ಆನ್ಲೈನ್, ಚಂದನಾ ವಾಹಿನಿಯ ಪಾಠಗಳು ಎಂದಿನಂತೆ ಮುಂದುವರೆಯಲಿವೆ. ಅರ್ಧ ದಿನ ಮಕ್ಕಳು ಮಾಸ್ಕ್ ಧರಿಸಿ ಶಾಲಾವರಣಕ್ಕೆ ಬಂದು ಸಾಮಾಜಿಕ ಅಂತರದೊಂದಿಗೆ ಕುಳಿತು ಪಾಠ ಕಲಿಯಬಹುದಾಗಿದೆ. ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿದ್ದು, ಪ್ರತಿ ಶಾಲೆಯಲ್ಲಿ ಮಕ್ಕಳನ್ನು ಥರ್ಮಲ್ ಸ್ಕ್ಯಾನರ್ ಮೂಲಕ ಪರೀಕ್ಷಿಸಲಾಗುತ್ತದೆ. ಜ್ವರ, ಕೆಮ್ಮು, ನೆಗಡಿ ಲಕ್ಷಣಗಳು ಮತ್ತು ಕೋವಿಡ್-19ರ ಲಕ್ಷಣಗಳಿರುವ ವಿದ್ಯಾರ್ಥಿಗಳು ಬರುವಂತಿಲ್ಲ. ಸ್ಯಾನಿಟೈಸರ್, ಸೋಪ್ ಇತರೆ ನೈರ್ಮಲೀಕರಣ ವ್ಯವಸ್ಥೆ ಮಾಡಿಕೊಳ್ಳಲಾಗುವುದು.

ಮಕ್ಕಳನ್ನು ಲಭ್ಯ ಶಿಕ್ಷಕರ ಸಂಖ್ಯೆ, ಲಭ್ಯ ಕೊಠಡಿಗಳ ಅನುಸಾರವಾಗಿ 15-20 ವಿದ್ಯಾರ್ಥಿಗಳ ತಂಡ ರಚಿಸುವುದು. ಆಯಾ ಸ್ತರದ ಸ್ಥಳೀಯ ಸಂಸ್ಥೆಗಳು ಸ್ಯಾನಿಟೈಸೇಷನ್ ಜವಾಬ್ದಾರಿ ತೆಗೆದುಕೊಳ್ಳಲಿದ್ದು, ಮಕ್ಕಳು ಕುಡಿಯಲು ನೀರನ್ನು ತಮ್ಮೊಂದಿಗೆ ಮನೆಯಿಂದಲೇ ತರಲು ಸಲಹೆ ನೀಡಬಹುದು. ಅಗತ್ಯ ಬಿದ್ದಾಗ ಸ್ಥಳೀಯ ಆರೋಗ್ಯ ಇಲಾಖೆಯ ಸಹಕಾರ ಪಡೆಯಲು ಅವಕಾಶವಿದೆ. ಇದೇ ರೀತಿಯ ಹತ್ತು ಹಲವು ಕಟ್ಟುನಿಟ್ಟಿನ ಕ್ರಮಗಳೊಂದಿಗೆ ವಿದ್ಯಾಗಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ಆಯಾ ಜಿಲ್ಲೆಗಳ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈ ಕಾರ್ಯಕ್ರಮದ ಸಂಪೂರ್ಣ ಉಸ್ತುವಾರಿ ವಹಿಸಿಕೊಳ್ಳಲಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ವಿದ್ಯಾಗಮದ ಅನುಷ್ಠಾನಾಧಿಕಾರಿಗಳಾಗಿದ್ದಾರೆ. ವಿದ್ಯಾಗಮ ತರಗತಿಗಳು ಪಾಳಿಗಳಲ್ಲಿ ಅಂದರೆ ಬೆಳಗ್ಗೆ 45 ನಿಮಿಷದ 3 ತರಗತಿಗಳು ಮತ್ತು ಮಧ್ಯಾಹ್ನದ ಪಾಳಿಯಲ್ಲಿ 3 ತರಗತಿಗಳನ್ನು ನಡೆಸಲಾಗುತ್ತದೆ. ಒಂದು ದಿನಕ್ಕೆ 7ರಿಂದ 8 ತಂಡಗಳಲ್ಲಿ ವಿದ್ಯಾರ್ಥಿಗಳಿಗೆ ಬರಲು ಸೂಚಿಸಲಾಗುತ್ತಿದೆ.

ಇದು ಶಾಲಾರಂಭವಲ್ಲ: ‘ವಿದ್ಯಾಗಮವು ಶಾಲೆಯ ಆರಂಭವಲ್ಲ. ಒಮ್ಮೆಗೆ ಅತಿ ಕಡಿಮೆ ಸಂಖ್ಯೆಯ ಮಕ್ಕಳ ತಂಡದೊಂದಿಗೆ ಶಾಲಾವರಣದಲ್ಲಿ ಲಭ್ಯವಿರುವ ಸ್ಥಳದಲ್ಲಿ ಅನುಕೂಲಕ್ಕೆ ತಕ್ಕಂತೆ ಪಾಠಗಳು ನಡೆಯುತ್ತವೆ. ತಜ್ಞರ ಸಮಿತಿಯ ಶಿಫಾರಸಿನನ್ವಯ ವೈಜ್ಞಾನಿಕವಾಗಿ ತರಗತಿಗಳು ನಡೆಯುತ್ತಿದ್ದು, ಎಲ್ಲ ರೀತಿಯ ಪ್ರಮಾಣಿತ ಕಾರ್ಯಾಚರಣಾ ವಿಧಾನಗಳು-ಎಸ್ಒಪಿ ಆಧಾರದಲ್ಲಿ ಕೈಗೊಳ್ಳಲಾಗುತ್ತದೆ. ಮಕ್ಕಳು ತರಗತಿ ಪಾಠಗಳಿಗೆ ಹಾಜರಾದಂತೆ ಎಲ್ಲರೂ ಒಂದೇ ಬಾರಿಗೆ ಬರುತ್ತಿಲ್ಲ. ಆಯಾ ಪ್ರದೇಶದ ಮಾರ್ಗದರ್ಶಿ ಶಿಕ್ಷಕರು ತಮಗೆ ಸನಿಹದ ನೆರೆಹೊರೆಯ ಕೆಲವೇ ಮಕ್ಕಳನ್ನು ತಂಡದಲ್ಲಿ ಪಟ್ಟಿ ಮಾಡುತ್ತಾರೆ. ಇದು ಶಾಲಾರಂಭವಲ್ಲ ಎಂಬುದನ್ನು ಪೋಷಕರು ಮನಗಾಣಬೇಕು’ ಎಂದು ಸಚಿವರು ಹೇಳಿದ್ದಾರೆ.

ವಿದ್ಯಾಗಮ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದ್ದು, ಆನ್-ಲೈನ್ ಶಿಕ್ಷಣ ವಂಚಿತರಿಗೆ ಅನುಕೂಲವಾಗಿದೆ. ಕಡ್ಡಾಯ ಶಿಕ್ಷಣ ಕಾಯ್ದೆಯು ಯಾವುದೇ ವಿದ್ಯಾರ್ಥಿಯ ಕಲಿಕೆಯನ್ನು ಹಕ್ಕಾಗಿ ಪರಿಗಣಿಸುತ್ತದೆ. ವಿದ್ಯಾರ್ಥಿಗಳಿಗೆ ಯಾವುದೇ ವಾತಾವರಣದಲ್ಲಿಯೂ ಶಿಕ್ಷಣವನ್ನು ನೀಡುವುದು ಸರ್ಕಾರದ ಜವಾಬ್ದಾರಿಯಾದ ಹಿನ್ನೆಲೆಯಲ್ಲಿ ಮಕ್ಕಳು ಶಾಲೆಗಳಿಗೆ ಕಡ್ಡಾಯವಾಗಿ ದಾಖಲಾಗಬೇಕಿದೆ ಹಾಗೆಯೇ ಅವರ ಕಲಿಕೆ ನಿರಂತರವಾಗಿರಬೇಕಿರುವಂತೆ ನೋಡಿಕೊಳ್ಳಬೇಕಿದೆ ಎಂದು ಅವರು ಹೇಳಿದ್ದಾರೆ.

ಗ್ರಾಮೀಣ ಖಾಸಗಿ ಶಾಲೆಗಳ ಆಸಕ್ತಿ: ’ವಿದ್ಯಾಗಮ ತರಗತಿಗಳನ್ನು ಸರ್ಕಾರದ ಮಾರ್ಗದರ್ಶಿ ಸೂತ್ರದ ಪ್ರಕಾರ ಗ್ರಾಮೀಣ ಪ್ರದೇಶದ ಖಾಸಗಿ ಶಾಲೆಗಳು ವಿಶೇಷವಾಗಿ ಬಜೆಟ್ ಶಾಲೆಗಳು ತಮ್ಮ ಪರಿಸರದಲ್ಲಿ ಆರಂಭಿಸಿ ತಮ್ಮ ಶಾಲೆಯ ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಬಹುದಾಗಿದೆ. ಅದು ವಿದ್ಯಾಗಮವೇ ಆಗಿರಬಹುದು ಇಲ್ಲವೇ ಅವಕಾಶವಿದ್ದಲ್ಲಿ ಈಗಾಗಲೇ ಹೊರಡಿಸಿರುವ ಸುತ್ತೋಲೆಯನ್ವಯ ಆನ್-ಲೈನ್ ಮೂಲಕವೂ ವಿದ್ಯಾರ್ಥಿಗಳೊಂದಿಗೆ ಸಂಪರ್ಕವೇರ್ಪಡಿಸಬಹುದಾಗಿದೆ. ಯಾವುದೇ ಶಾಲೆಗಳು ಲಭ್ಯವಿರುವ ಸಂಪನ್ಮೂಲಗಳಲ್ಲಿ ಒಟ್ಟಾರೆಯಾಗಿ ಮಕ್ಕಳ ಕಲಿಕೆಯ ಜವಾಬ್ದಾರಿಯನ್ನು ನಿರ್ವಹಿಸಲು ಸಾಧ್ಯವಿದ್ದು, ಮಕ್ಕಳ ಹಿತವನ್ನು ಕಾಪಾಡಬೇಕಿದೆ’ ಎಂದು ಎಂದು ಸಚಿವರು ಹೇಳಿದ್ದಾರೆ.

‘ಮಕ್ಕಳ ಕಲಿಕಾ ನಿರಂತರತೆಗೆ ವಿದ್ಯಾಗಮವು ಅನುಕೂಲವಾಗಿದ್ದು, ಶಿಕ್ಷಕರು ಮತ್ತು ಪೋಷಕರಲ್ಲಿ ಒಳ್ಳೆಯ ಭಾವನೆ ಮೂಡಿಸಿದೆ. ಮಕ್ಕಳ ಹಿತದೃಷ್ಟಿಯಿಂದ ವಿದ್ಯಾಗಮ ಕಾರ್ಯಕ್ರಮದ ರೂಪುರೇಷೆಗಳನ್ನು ಪರಿಷ್ಕರಿಸಿ ಪುನರಾರಂಭಿಸಲು ಇಲಾಖೆ ಎಲ್ಲ ರೀತಿಯಲ್ಲೂ ಸಿದ್ಧತೆ ಮಾಡಿಕೊಂಡಿದ್ದು, ಶೀಘ್ರವೇ ಪುನರಾರಂಭಿಸಲಾಗುವುದು. ಒಟ್ಟಾರೆ ಪ್ರತಿಯೊಬ್ಬರೂ ನಮ್ಮ ಮಕ್ಕಳ ಹಿತದೃಷ್ಟಿಯಿಂದ ಮಕ್ಕಳ ಕಲಿಕಾ ನಿರಂತರತೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಾದ ಅಗತ್ಯವಿದೆ’ ಎಂದು ಅವರು ತಿಳಿಸಿದ್ದಾರೆ.

‘ಪೋಷಕರ ಅನುಮತಿ ಕಡ್ಡಾಯ’
‘ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ ಆವರಣದಲ್ಲಿ ವಿದ್ಯಾಗಮಕ್ಕೆ ಅವಕಾಶ ಮಾಡಿಕೊಡಲಾಗಿದೆ. ಪ್ರಸ್ತುತ ಇರುವ ಆನ್‌ಲೈನ್‌, ಚಂದನವಾಹಿನಿಯ ಪಾಠಗಳೂ ಮುಂದುವರೆಯಲಿವೆ. ಅರ್ಧ ದಿನ ಮಕ್ಕಳು ಮಾಸ್ಕ್ ಧರಿಸಿ ಶಾಲಾವರಣಕ್ಕೆ ಬಂದು ಅಂತರದಲ್ಲಿ ಕುಳಿತು ಪಾಠ ಕಲಿಯಬಹುದಾಗಿದೆ. ಪೋಷಕರ ಅನುಮತಿ ಪತ್ರ ಕಡ್ಡಾಯ. ಮಕ್ಕಳನ್ನು ಥರ್ಮಲ್ ಸ್ಕ್ಯಾನರ್ ಮೂಲಕ ಪರೀಕ್ಷಿಸಲಾಗುವುದು. ಜ್ವರ, ಕೆಮ್ಮು, ನೆಗಡಿ ಲಕ್ಷಣಗಳು ಮತ್ತು ಕೋವಿಡ್ ಲಕ್ಷಣಗಳಿರುವ ವಿದ್ಯಾರ್ಥಿಗಳು ಬರಲು ಅವಕಾಶ ಇಲ್ಲ. ಸ್ಯಾನಿಟೈಸರ್, ಸೋಪ್ ಮತ್ತಿತರ ನೈರ್ಮಲೀಕರಣ ವ್ಯವಸ್ಥೆ ಮಾಡಲಾಗುವುದು’ ಎಂದು ಸುರೇಶ್‌ಕುಮಾರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT