ಬೆಂಗಳೂರು: 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 15ರಂದು ಕಾಂಗ್ರೆಸ್ ಹಮ್ಮಿಕೊಂಡಿರುವ ‘ಸ್ವಾತಂತ್ರ್ಯ ನಡಿಗೆ’ ಕಾರ್ಯಕ್ರಮದಲ್ಲಿ ಎಐಸಿಸಿ ನಾಯಕಿ ಪ್ರಿಯಾಂಕಾ ಗಾಂಧಿ ಪಾಲ್ಗೊಳ್ಳುವುದು ಅನುಮಾನ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.
ಪ್ರಿಯಾಂಕಾ ಅವರನ್ನು ಕರೆಯಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಸಂಸದ ಡಿ.ಕೆ. ಸುರೇಶ್ ಮುಂದಾಗಿದ್ದರು. ಸಮಾವೇಶಕ್ಕೆ ಬರಲು ಅವರು ಒಪ್ಪಿದ್ದರು. ಆದರೆ, ಕೋವಿಡ್ ದೃಢಪಟ್ಟ ಕಾರಣ ಅವರು ಬರುವ ಸಾಧ್ಯತೆ ಕಡಿಮೆ ಎಂದೂ ತಿಳಿಸಿವೆ.
ಸ್ವಾತಂತ್ರ್ಯ ದಿನ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಒಂದೂವರೆ ಲಕ್ಷ ಜನರನ್ನು ಸೇರಿಸಿ ನಡೆಸಲು ಉದ್ದೇಶಿಸಿದ ಬೃಹತ್ ಸಮಾವೇಶಕ್ಕೆ ಪ್ರಿಯಾಂಕಾ ಅವರನ್ನು ಕರೆಸಿ ಶಕ್ತಿ ಪ್ರದರ್ಶನ ನಡೆಸಲು ಡಿ.ಕೆ. ಸಹೋದರರು ಸಿದ್ಧತೆ ನಡೆಸಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಈ ಸಮಾವೇಶಕ್ಕೆ ಕಾಂಗ್ರೆಸ್ಸಿನಲ್ಲಿ ಭಾರಿ ಸಿದ್ಧತೆ ನಡೆಯುತ್ತಿದೆ. ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯ ಅಮೃತ ಮಹೋತ್ಸವದಲ್ಲಿ ರಾಹುಲ್ ಭಾಗವಹಿಸಿದ್ದರು. ಹೀಗಾಗಿ, ಪ್ರಿಯಾಂಕಾ ಗಾಂಧಿ ಅವರನ್ನು ಕರೆಸಲು ತಯಾರಿ ನಡೆದಿತ್ತು.